ಮೈಸೂರು: ದಸರಾ ನೆಪದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಕುಂಠಿತ ಆಗಬಾರದು. ದಸರಾ ಜವಾಬ್ದಾರಿ ಇದ್ದವರನ್ನು ಹೊರತುಪಡಿಸಿ ಉಳಿದವರು ಕಳ್ಳಾಟವಾಡದೆ ಜನರ ಕೆಲಸಗಳನ್ನು ಮಾಡಬೇಕು ಎಂದು ಸಿಎಂ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಇಂದು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ದಸರಾ ಜನರ ಉತ್ಸವ, ಇದು ಸರ್ಕಾರದ ಉತ್ಸವ ಅಲ್ಲ ಇದರ ಹೊಣೆ ಜಿಲ್ಲಾಡಳಿತದ್ದು ಎಂದು ಸಿಎಂ ಹೇಳಿದರು.
ಜನತಾ ನ್ಯಾಯಾಲಯ ಮುಖ್ಯ
ಎಲ್ಲಾ ನ್ಯಾಯಲಯಗಳಿಗಿಂತ ಜನತಾ ನ್ಯಾಯಾಲಯ ಮುಖ್ಯ, ಆತ್ಮಸಾಕ್ಷಿ ಮುಖ್ಯ ಎನ್ನುವ ಮಹಾತ್ಮಗಾಂಧಿಯವರ ಮಾತನ್ನು ಅಧಿಕಾರಿಗಳಿಗೆ ನೆನಪಿಸಿದ ಸಿಎಂ ಸಿದ್ದರಾಮಯ್ಯ, ನೆಪ ಹೇಳುವುದು, ಸುಳ್ಳು ಹೇಳುವುದನ್ನು ಅಧಿಕಾರಿಗಳು ನಿಲ್ಲಿಸಬೇಕು. ಒಂದು ಸುಳ್ಳು ಹೇಳಿದರೆ ಅದನ್ನು ಸಮರ್ಥಿಸಲು ಮತ್ತೊಂದು, ಇನ್ನೊಂದು ಸುಳ್ಳುಗಳನ್ನು ಹೇಳುತ್ತಲೇ ಹೋಗಬೇಕಾಗುತ್ತದೆ. ಹೀಗಾಗಿ ಸುಳ್ಳು ಮತ್ತು ನೆಪ ಹೇಳುವ ಅಧಿಕಾರಿಗಳು ಸಿಕ್ಕಿ ಬೀಳುತ್ತಾರೆ. ಇದು ನಿಮ್ಮ ವೃತ್ತಿ ಜೀವನಕ್ಕೆ ಒಳ್ಳೆಯದಲ್ಲ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಕಾನೂನು ಸುವ್ಯವಸ್ಥೆ ಸರಿ ಇಲ್ಲದಿದ್ದರೆ ರಾಜ್ಯದ ಅಭಿವೃದ್ಧಿ ಮತ್ತು ಆರ್ಥಿಕತೆಯ ಪ್ರಗತಿ ಸಾಧ್ಯ. ಪೊಲೀಸ್ ಇಲಾಖೆಯ ಬೇಜವಾಬ್ದಾರಿಯಿಂದ ಅಪರಾಧಗಳು ಆಗಬಾರದು. ರಾಜ್ಯದ ಬಂಡವಾಳ ಹೂಡಿಕೆಗೂ, ಕಾನೂನು-ಸುವ್ಯವಸ್ಥೆಗೂ ನೇರಾನೇರ ಸಂಬಂಧವಿದೆ-ಈ ಬಗ್ಗೆ ಕಟ್ಟೆಚ್ಚರ ವಹಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯ-ಶಿಕ್ಷಣ-ಅನ್ನ-ನೀರು-ವಿದ್ಯುತ್-ರಸ್ತೆ ಸುರಕ್ಷತೆ ನನ್ನ ಪ್ರಥಮ ಆಧ್ಯತೆ. ಅಧಿಕಾರಿಗಳಿಗೆ ಯಾವುದೇ ಕಾರಣಕ್ಕೂ ಜಾತಿ ಸೋಂಕು ಇರಬಾರದು. ಸಂವಿಧಾನ ಮತ್ತು ಜಾತ್ಯತೀತವಾಗಿ ಸರ್ಕಾರದ ಕಾರ್ಯಕ್ರಮಗಳನ್ನು, ಜನರ ಸೇವೆಯನ್ನು ಮಾಡಬೇಕು ಎಂದು ಹೇಳಿದರು.
ಸರ್ಕಾರ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ..
ನಾವು ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವುದನ್ನು ಮೊದಲ ಆಧ್ಯತೆಯನ್ನಾಗಿ ಪರಿಗಣಿಸಬೇಕು. ಈ ಐದೂ ಗ್ಯಾರಂಟಿಗಳಲ್ಲಿ ಮಧ್ಯವರ್ತಿಗಳಿಗೆ ಅವಕಾಶವೇ ಇಲ್ಲದಂತೆ ನೇರವಾಗಿ ಫಲಾನುಭವಿಗಳ ಮಡಿಲಿಗೆ ಸೇರುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ವಿಚಾರದಲ್ಲಿ ಅಸಡ್ಡೆ ಮತ್ತು ಉದಾಸೀನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಸರ್ಕಾರ ಅಗತ್ಯವಿದ್ದಷ್ಟು ಹಣವನ್ನು ನೀಡುತ್ತಿದೆ. ಈ ಹಣ ಫಲಾನುವಿಗಳಿಗೆ ತಲುಪದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು. ಗ್ಯಾರಂಟಿ ಹಣ ಜನರಿಗೆ ತಲುಪಬೇಕು. ಅಭಿವೃದ್ಧಿ ಕೆಲಸಗಳಿಗೂ ಹಣ ಹೇರಳವಾಗಿ ಬಿಡುಗಡೆ ಆಗುತ್ತಿದೆ. ಅನುದಾನ ಬಿಡುಗಡೆ ಆಗಿದೆ. ಬಜೆಟ್ನಲ್ಲಿ ಘೋಷಣೆ ಆಗಿರುವ ಕಾರ್ಯಕ್ರಮಗಳಿಗೆ ಘೋಷಿಸಿದ್ದಷ್ಟು ಹಣ ಬಿಡುಗಡೆ ಆಗುತ್ತಿದೆ. ನಾವು ಅನುದಾನ ಕೊಟ್ಟಾಗ ಆಕ್ಷನ್ ಪ್ಲಾನ್ ರೆಡಿ ಆಗಬೇಕು. ಈಗಾಗಲೇ ಸೆಪ್ಟೆಂಬರ್ ಮುಗಿಯುತ್ತಿದೆ. ಈ ಆರ್ಥಿಕ ವರ್ಷಕ್ಕೆ ಆರು ತಿಂಗಳು ಮಾತ್ರ ಉಳಿದಿದೆ. ಯಾರು ಆಕ್ಷನ್ ಪ್ಲಾನ್ ಮಾಡಿಕೊಂಡಿಲ್ಲ ಅವರ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.





