ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳನ್ನು ಪೂರೈಸುತ್ತಿದ್ದು, ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸಿದ್ದೇವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ತಿಳಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿದೆ. ಅನೇಕ ಏಳು ಬೀಳು, ವಿರೋಧ ಪಕ್ಷಗಳ ವಿರೋಧದ ನಡುವೆಯೂ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದು, ರಾಜ್ಯದ ೭ ಕೋಟಿ ಜನತೆ ಐದು ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಗ್ಯಾರಂಟಿಗಳನ್ನು ವಿರೋಧಿಸಿದ್ದವರೇ ಇಂದು ಬೇರೆ ರಾಜ್ಯಗಳಲ್ಲಿ ಅನುಷ್ಠಾನ ಮಾಡುತ್ತಿದ್ದಾರೆ ಎಂದರು.
ಗ್ಯಾರಂಟಿ ಯೋಜನೆಗಳು ರಾಜ್ಯದ ೭ ಕೋಟಿ ಜನತೆಯ ಬೆಳಕಾಗಿವೆ. ಮಹಿಳೆಯರಿಗೆ ಗ್ಯಾರಂಟಿಗಳು ಎರಡನೆಯ ಸ್ವಾತಂತ್ರ್ಯ ತಂದುಕೊಟ್ಟಿವೆ. ಶಕ್ತಿ ಯೋಜನೆಯಿಂದ ಯಾವುದೇ ನಿರ್ಬಂಧ ಇಲ್ಲದೆ ಎಲ್ಲೆಡೆ ನಿರ್ಭಯವಾಗಿ ಓಡಾಡುತ್ತಿದ್ದಾರೆ. ಅನ್ನಭಾಗ್ಯದಿಂದ ಕೋಟ್ಯಂತರ ಮಂದಿಯ ಹಸಿವು ನೀಗಿದೆ. ಗೃಹಜ್ಯೋತಿ ಪ್ರತಿ ಮನೆಯನ್ನೂ ಬೆಳಗುತ್ತಿದೆ. ಯುವನಿಧಿ ನಿರುದ್ಯೋಗಿ ಯುವಕರಿಗೆ ಆಶಾಕಿರಣವಾಗಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ. ಪಂಚ ಗ್ಯಾರಂಟಿಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಅಧಕಾರಿಗಳ ಪಾತ್ರವೂ ಬಹಳ ದೊಡ್ಡದು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಎಸ್.ಅರುಣ್ ಕುಮಾರ್, ಉಪಾಧ್ಯಕ್ಷರಾದ ಕೆ.ಸಿ.ಶಿವಕುಮಾರ್, ಬಸವಣ್ಣ, ನಿರ್ದೇಶಕ ಶ್ಯಾಮ ಯೋಗೇಶ್ ಹಾಜರಿದ್ದರು.





