ಮೈಸೂರು : 2025ರ ದಸರಾ ಮಹೋತ್ಸವದಲ್ಲಿ ಪ್ರಮುಖ ಆಕರ್ಷಣೆ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ನಡೆಯಲಿರುವ ನಾಡಹಬ್ಬವನ್ನು ವಿಜೃಂಭಣೆಯಿಂದ ಅದ್ದೂರಿಯಾಗಿ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಯುದ್ಧ ವಿಮಾನಗಳ ಮೂಲಕ ವೈಮಾನಿಕ ಪ್ರದರ್ಶನಕ್ಕೆ ಮೈಸೂರು ಜಿಲ್ಲಾಡಳಿತವು ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದೆ.
ನಗರದ ಬನ್ನಿಮಂಟಪದ ಟಾರ್ಚ್ ಲೈಟ್ ಪರೇಡ್ ಮೈದಾನದಲ್ಲಿ ನಡೆಯಲಿರುವ ವೈಮಾನಿಕ ಪ್ರದರ್ಶನದಲ್ಲಿ ಹೆಚ್ಚಿನ ಸಂಖ್ಯೆಯ ವಿಮಾನಗಳಿಂದ ವಿಭಿನ್ನ ಹಾಗೂ ವಿಶೇಷ ಪ್ರದರ್ಶನ ನಡೆಸುವ ಮೂಲಕ ಮೈಸೂರಿಗೆ ಪ್ರವಾಸಿಗರನ್ನು ಆಕರ್ಷಿಸಲು ಉದ್ದೇಶಿಸಿದ್ದು. ಈ ಕುರಿತು ಜಿಲ್ಲಾಧಿಕಾರಿ ಜಿ. ಲಕ್ಷಿಕಾಂತ್ ರೆಡ್ಡಿ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದು ಕೇಂದ್ರ ರಕ್ಷಣಾ ಇಲಾಖೆಯಿಂದ ಎರ್ ಶೋಗೆ ವ್ಯವಸ್ಥೆ ಮಾಡಿಸುವಂತೆ ಕೋರಿಕೊಂಡಿದ್ದಾರೆ. ಈ ನಡುವೆ ದೆಹಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ ಬುಧವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನೂ ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದ ವೇಳೆ ಏರ್ ಶೋ ಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಏರ್ಶೋ ಸಂಬಂಧ ಜಿಲ್ಲಾಧಿಕಾರಿ ಜಿ. ಲಕ್ಷಿಕಾಂತ್ ರೆಡ್ಡಿ, ಈಗಾಗಲೇ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಮುಖ್ಯ ಕಾರ್ಯದರ್ಶಿಗಳು ಅಗತ್ಯ ಕ್ರಮವಹಿಸಲಿದ್ದಾರೆ ಎಂದರು. ದಸರಾ ಸಿವಿಲ್ ಕಾಮಗಾರಿಗಳನ್ನು ಮುಂಚಿತವಾಗಿಯೇ ಕೈಗೊಳ್ಳಲು ಮೈಸೂರು ಮಹಾನಗರ ಪಾಲಿಕೆಯಿಂದ ಟೆಂಡರ್ ಪ್ರಕ್ರಿಯೆ ನಡೆಸುತ್ತಿದ್ದೇವೆ. ಕಡೇ ಘಳಿಗೆಯಲ್ಲಿ ತರಾತುರಿಯಲ್ಲಿ ಕೆಲಸ ಮಾಡುವುದನ್ನು ತಪ್ಪಿಸಲು ಈ ಬಾರಿ ಕ್ರಮವಹಿಸಲಾಗಿದೆ ಎಂದಿದ್ದಾರೆ.





