Mysore
25
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ವಿದ್ಯುತ್‌ ತಂತಿ ತುಳಿದು ಯುವಕ ಸಾವು: ಗ್ರಾಮಸ್ಥರಿಂದ ಆಕ್ರೋಶ

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ.

ಮಂಚೂನಾಯಕ ಎಂಬುವವನೇ ವಿದ್ಯುತ್‌ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಯುವಕನಾಗಿದ್ದಾನೆ. ತಮ್ಮ ಜಮೀನಿನಲ್ಲಿ ಕೆಲಸ ಮಾಡಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆಯುತ್ತಿದ್ದಂತೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ತೀವ್ರ ಕಿಡಿಕಾರಿದ್ದು, ವಿದ್ಯುತ್‌ ತಂತಿ ತುಂಡಾಗಿ ಎರಡು ದಿನ ಕಳೆದರೂ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ದಿನಗಳಿಂದ ಹಲವಾರು ಬಾರಿ ಈ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೂ ಯಾವೊಬ್ಬ ಅಧಿಕಾರಿಯೂ ಗಮನ ಹರಿಸಿಲ್ಲ. ಲೈನ್‌ಮನ್‌ ವಸಂತ್‌ ಎಂಬಾತನ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ವಿದ್ಯುತ್‌ ಇಲಾಖೆಯ ಅಧಿಕಾರಿಗಳು, ಇಲಾಖೆಯಿಂದ ಸೂಕ್ತ ಪರಿಹಾರ ಕೊಡುವ ಭರವಸೆ ನೀಡಿದ್ದಾರೆ. ಇದಲ್ಲದೇ ಕುಟುಂಬದ ಒಬ್ಬ ವ್ಯಕ್ತಿಗೆ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಕೊಡಿಸುವ ಭರವಸೆ ನೀಡಿದ್ದು, ನಿರ್ಲಕ್ಷ್ಯಕ್ಕೆ ಕಾರಣರಾದ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಇದಕ್ಕೆ ಒಪ್ಪದ ಗ್ರಾಮಸ್ಥರು ವಿದ್ಯುತ್‌ ಇಲಾಖೆಯಲ್ಲಿ ಕುಟುಂಬದ ಒಬ್ಬರಿಗೆ ಶಾಶ್ವತ ಕೆಲಸ ಕೊಡಿಸುವಂತೆ ಒತ್ತಾಯಿಸಿದ್ದಾರೆ. ಇದರ ಜೊತೆಗೆ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

 

Tags:
error: Content is protected !!