ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬಿ.ಮಟಕೆರೆ ಎಸ್.ಟಿ.ಕಾಲೋನಿಯಲ್ಲಿ ನಡೆದಿದೆ.
ದೇವಸ್ಥಾನದ ಕಾವಲುಗಾರನಾಗಿದ್ದ ಮಾದ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಇಂದು ಬೆಳಗಿನ ಜಾವ ಬಹಿರ್ದೆಸೆಗೆಂದು ಬರುತ್ತಿದ್ದಾಗ ಕಾಡಾನೆಯೊಂದು ಹಠಾತ್ ದಾಳಿ ನಡೆಸಿದೆ.
ಮಾದ ಚೀರಾಡುತ್ತಿದ್ದ ಸದ್ದು ಕೇಳಿ ಸ್ಥಳಕ್ಕಾಗಮಿಸಿ ಗ್ರಾಮಸ್ಥರು ಆನೆಯನ್ನು ಕಾಡಿಗೆ ಓಡಿಸಿದ್ದಾರೆ. ಆನೆ ದಾಳಿಯಿಂದ ಗಂಭೀರ ಗಾಯಗೊಂಡು ಮಾದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು, ಅರಣ್ಯಾಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆಗಳು ಕಾಡಿನಿಂದ ನಾಡಿಗೆ ಬರುವುದನ್ನು ತಡೆಯಲು ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.





