ಮೈಸೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ಬಜೆಟ್ನಲ್ಲಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿದ್ದಾರೆ. ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪವಿಲ್ಲ. 15ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ್ದ 5,495 ಕೋಟಿಗಳ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಪೇರಿಫೇರಲ್ ರಿಂಗ್ ರೋಡ್ ಗೆ ರೂ.3,000 ಕೋಟಿ ಕೊಡುವುದಾಗಿ ಹೇಳಿದ್ದರು. ಅದೂ ಇಲ್ಲ. 3,000 ಕೋಟಿ ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಕೂಡ ಬಜೆಟ್ ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ? ಆಂಧ್ರ ಪ್ರದೇಶ, ಬಿಹಾರ ರಾಜ್ಯಗಳಿಗೆ ಭರಪೂರ ಅನುದಾನ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ? ಎಂದು ಪ್ರಶ್ನಿಸಿದರು.
ಎಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಯಾವುದೂ ಕೊಟ್ಟಿಲ್ಲ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಈ ಬಾರಿಯ ಬಜೆಟ್ನಲ್ಲೂ ಯಾವುದೇ ಪ್ರಸ್ತಾಪವಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐ ಐ ಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು, ಅದೂ ಕೂಡ ಆಗಿಲ್ಲ. ಹೀಗಿದ್ದೂ ಅನ್ಯಾಯವಾಗಿಲ್ಲ ಎಂದರೆ ಹೇಗೆ? ನಿರ್ಮಲಾ ಸೀತಾರಾಮನ್ ಅವರು ಹಿಂದೆಯೂ ಸುಳ್ಳು ಹೇಳಿದ್ದರು, ಈಗಲೂ ಸುಳ್ಳು ಹೇಳಿದ್ದಾರೆ ಎಂದರು.
15 ನೇ ಹಣಕಾಸು ಆಯೋಗದಿಂದ ಅವಧಿಯಲ್ಲಿ ಅತಿ ಹೆಚ್ಚು ಅನ್ಯಾಯವಾಗಿರುವ ರಾಜ್ಯ ಕರ್ನಾಟಕ. ರಾಜ್ಯದಿಂದ ರಾಜ್ಯಸಭಾ ಸದಸ್ಯರಾಗಿರುವ ಅವರು ಕೈಗಾರಿಕೆಗಳೆಲ್ಲಾ ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದೂ ಹೇಳಿದ್ದಾರೆ. ಆದರೆ ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರ ನೀತಿ, ಕಾರ್ಯಕ್ರಮಗಳಿಂದ 31% ನಮ್ಮ ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ. ಕೇಂದ್ರಕ್ಕೆ ತೆರಿಗೆ ನೀಡುವಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ 2ನೇ ಸ್ಥಾನದಲ್ಲಿದೆ. ಇನ್ನೇನು ಕೊಡುಗೆ ಕೊಡಬೇಕು? ಎಂದರು.
ಕೇಂದ್ರದ ಮಲತಾಯಿ ಧೋರಣೆ ಖಂಡಿಸಿ ನೀತಿ ಆಯೋಗದ ಸಭೆಯನ್ನು ನಾವು ಬಹಿಷ್ಕರಿಸಿದೆವು. ತಮಿಳುನಾಡು, ತೆಲಂಗಾಣ ಹಾಗೂ ಬಿಜೆಪಿಯೇತರ ಸರ್ಕಾರವಿರುವ ಅನೇಕ ರಾಜ್ಯಗಳು ಹೋಗಿಲ್ಲ. ಮಮತಾ ಬ್ಯಾನರ್ಜಿ ಅವರು ಸಭೆಗೆ ಹಾಜರಾಗಿ ಮಾತನಾಡಲು ಸಮಯ ನೀಡಿಲ್ಲ ಎಂದು ಸಭೆಯಿಂದ ಹೊರನಡೆದರು. ಇವರು ನಮಗೆ ಪಾಠ ಹೇಳಿಕೊಡುತ್ತಾರೆ. ಇವರ ತಪ್ಪುಗಳಿಗೆ ಇಂದು ದೇಶದಲ್ಲಿ ಹೂಡಿಕೆಯಾಗುತ್ತಿಲ್ಲ. ನಾವು ಸಾಲ ಹೆಚ್ಚು ಮಾಡಿದ್ದೇವೆ ಎನ್ನುತ್ತಾರೆ. ನಾವು ವಿತ್ತೀಯ ಹೊಣೆಗಾರಿಕೆ ಕಾಯ್ದೆಯಡಿ ಜಿಡಿಪಿಯ 25% ರೊಳಗೆ ಇದ್ದೇವೆ. ಅವರು ಸುಮಾರು 15 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದು ವಿವರಿಸಿದರು.
ಕರ್ನಾಟಕದ ಸಂಸದರು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಬೇಕು. ಕರ್ನಾಟಕ ಭ್ರಷ್ಟ ರಾಜ್ಯ ಎಂದು ಅವರು ನಾಡಿಗೆ ಮಸಿ ಬಳಿಯುತ್ತಿದ್ದಾರೆ. ಕರ್ನಾಟಕ ಭ್ರಷ್ಟ ರಾಜ್ಯವಲ್ಲ. ನಾವು ಅಧಿಕಾರಕ್ಕೆ ಬಂದು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ ಎಂದರು.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…