Mysore
20
overcast clouds
Light
Dark

ಪ್ರವಾಹ ಭೀತಿ: ಟಿ.ನರಸೀಪುರದ ನದಿ ಪಾತ್ರದ ಗ್ರಾಮಗಳಿಗೆ ಜಿ.ಪಂ ಸಿಇಒ ಭೇಟಿ,ಪರಿಶೀಲನೆ

ಮೈಸೂರು: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಕೆಆರ್‌ಎಸ್‌ ಅಣೆಕಟ್ಟು ಭರ್ತಿಯಾಗಿದೆ. ಹೀಗಾಗಿ ಅಣೆಕಟ್ಟಿನಿಂದ 1 ಲಕ್ಷ ಕ್ಯೂಸೆಕ್ಸ್‌ ನೀರನ್ನು ನದಿಗೆ ಬಿಡಲಾಗಿದೆ. ಈ ಹಿನ್ನಲೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಗುರುವಾರ(ಜು.25) ಟಿ. ನರಸೀಪುರ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ಬಗ್ಗೆ ಎಚ್ಚರಿಕೆ ಸಲಹೆಗಳನ್ನು ನೀಡಿದರು.

ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಡಗನಕೊಪ್ಪಲು, ಕಲಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಡಿಮಾಲಂಗಿ ಹಾಗೂ ಹೆಮ್ಮಿಗೆ ಗ್ರಾಮಗಳಲ್ಲಿನ ನದಿ ಪಾತ್ರ ಸ್ಥಳಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಮೇಲ್ಕಂಡ ಗ್ರಾಮ ವ್ಯಾಪ್ತಿಯ ನದಿ ಪಾತ್ರದಲ್ಲಿ ಇರುವ ಮನೆಗಳಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ ಪ್ರವಾಹ ಸಂದರ್ಭದಲ್ಲಿ ಗ್ರಾಮಸ್ಥರು ಎಚ್ಚರಿಕೆ ಯಿಂದಿರಲು ಹಾಗೂ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ತಿಳಿಸಿದರು.  ಸ್ಥಳೀಯ ಪರಿಸ್ಥಿತಿಯನ್ನಾಧರಿಸಿ ಸ್ಥಳಾಂತರ ಮಾಡಲು ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನೂ ಜಲ್‌ ಜೀವನ್‌ ಮೀಷಿನ್‌ ಯೋಜನೆಯ ಅನುಷ್ಠಾನದ ಬಗ್ಗೆ ಮನೆ-ಮನೆಗಳಿಗೆ ನಳ ಸಂಪರ್ಕ ನೀಡಿರುವ ಬಗ್ಗೆ ಸ್ಥಳ ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ಕಲಿಯೂರು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸಿಬ್ಬಂದಿಗಳ ಹಾಜರಾತಿ, ತೆರಿಗೆ ಸಂಗ್ರಹಣೆ, ಆಸ್ತಿಗಳ ಸರ್ವೇ, ಬೂದು ನೀರು ನಿರ್ವಹಣೆ, , ಮನರೇಗಾ ಯೋಜನೆ, ಜೆ ಜೆ ಎಮ್ ಯೋಜನೆ ಅನುಷ್ಠಾನ ಕುರಿತು ಅಧ್ಯಕ್ಷರು, ಉಪಾದ್ಯಕ್ಷರು , ಸದಸ್ಯರು, ಪಿಡಿಒಗಳ ಜೊತೆ ಸಭೆ ನಡೆಸಿದರು.

ನಂತರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಬಿಸಿ ಊಟ ವಿತರಣೆ ಬಗ್ಗೆ ಶಾಲಾ ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕಲಿಯೂರು ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿ ಹೊಂದುತ್ತಿರುವ ಚಿಕ್ಕ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ಮಾಡಿ ಮನರೇಗಾ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಕಾರ್ಮಿಕರಿಗೆ ಮನರೇಗಾ ಯೋಜನೆಯಡಿ ಆರೋಗ್ಯ ತಪಾಸಣೆ ಹಾಗೂ ವಿಮಾ ಸೌಲಭ್ಯಗಳನ್ನು ಪಡೆಯುವ ಬಗ್ಗೆ ತಿಳುವಳಿಕೆ ನೀಡಿದರು.

ನಂತರ ಹೆಮ್ಮಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿಯ ಸಭೆಯಲ್ಲಿ ಭಾಗವಹಿಸಿರುದ ಜಲ್ ಜೀವನ್ ಮಿಷನ್ ಯೋಜನೆ ಬಗ್ಗೆ ಸಭೆ ಚರ್ಚಿಸಲಾಯಿತು. ಕುಡಿಯುವ ನೀರಿನ ಘಟಕಗಳ ಸುತ್ತಲು ಸ್ವಚ್ಛತೆಯನ್ನು ಕಾಪಾಡಬೇಕು, ಎಲ್ಲೂ ಸಹ ನೀರು ನಿಲ್ಲದಂತೆ ಎಚ್ಚರವಹಿಸಬೇಕು, ಕಾಲ ಕಾಲಕ್ಕೆ ತಪ್ಪದೆ ಕುಡಿಯುವ ನೀರಿನ ಪರೀಕ್ಷೆಯನ್ನು ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿಗಳಾದ ಮೇಘಲಾ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೃಷ್ಣ ಸಿ, ಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ರಂಜಿತ್, ಸಹಾಯಕ ಕಾರ್ಯಪಾಲಕ ಅಭಿಯಂತರಾದ ಕೈಲಾಶ್ ಮೂರ್ತಿ, ಸಹಾಯಕ ನಿರ್ದೇಶಕರು (ಗ್ರಾ ಉ) ಶಶಿಕುಮಾರ್, ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ರಂಗಸ್ವಾಮಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಗಾಯಿತ್ರಿ, ಶೈಲಜಾ ಹಾಗೂ ಚಿದಾನಂದ ಮತ್ತು ಇನ್ನಿತರ ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು, ಉಪಾಧ್ಯಕ್ಷರು, ಸದಸ್ಯರುಗಳು ಉಪಸ್ಥಿತರಿದ್ದರು.