Mysore
28
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ : ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಮೈಸೂರು : ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಯ ಕಾಲಿಗೆ ಗುಂಡಿಕ್ಕಿ ಆತನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಅಲೆಮಾರಿ ಸಮುದಾಯದ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ಎಸಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಆರೋಪಿಯನ್ನು ಮೈಸೂರಿನ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ ಎಂದು ಗುರುತಿಸಲಾಗಿದೆ.

ಹೊಟ್ಟೆಪಾಡಿಗಾಗಿ ಬಲೂನ್ ವ್ಯಾಪಾರಕ್ಕಾಗಿ ಮೈಸೂರು ದಸರಾಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ತಂಗಿದ್ದವು. ಈತ ರಾತ್ರಿ ಟೆಂಟ್‌ನಲ್ಲಿ ಮಲಗಿದ್ದ 10 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ ಪರಾರಿಯಾಗಿದ್ದ. ಸಿಸಿಟಿವಿ ಆಧಾರದ ಮೇಲೆ ಹಂತಕ ಕಾರ್ತಿಕನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಕೃತ್ಯ ಎಸಗಿ ಮೈಸೂರು ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಪರಾರಿಯಾಗಿದ್ದ. ಮೇಟಗಳ್ಳಿ ಬಳಿ ಪೊಲೀಸರು ಆತನನ್ನು ಹಿಡಿಯಲು ಮುಂದಾದಾಗ ಕಾನ್ಸ್‌ಟೇಬಲ್ ವೆಂಕಟೇಶ್‌ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಸಿದ್ದಾನೆ. ಈ ವೇಳೆ ಸಬ್ ಇನ್ಸ್‌ಪೆಕ್ಟರ್‌ ಜೈಕೀರ್ತಿ ಅವರು ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಆರೋಪಿ ಕಾರ್ತಿಕ್‌ ನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆಸ್ಪತ್ರೆಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಇದನ್ನು ಓದಿ : ಮೈಸೂರು | ಬಾಲಕಿ ಮೇಲೆ ಅತ್ಯಾಚಾರ ಕೊಲೆ ಪ್ರಕರಣ ; ಆರೋಪಿ ಗುರುತು ಪತ್ತೆ

ಮೈಸೂರಿನ ಸಿದ್ದಲಿಂಗಪುರ ನಿವಾಸಿಯಾಗಿರುವ ಕಾರ್ತಿಕ್, ಮಂಡ್ಯದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ. ಆ ಪ್ರಕರಣದಲ್ಲಿ 2 ವರ್ಷ ಜೈಲಿನಲ್ಲಿದ್ದು, ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಮದ್ಯ ಸೇವಿಸಿ ಎಲ್ಲೆಂದರಲ್ಲಿ ಅಲೆದಾಡುತ್ತಿದ್ದ. ಮದ್ಯ ವ್ಯಸನಿ ಕಾರ್ತಿಕ್ ಕಣ್ಣಿಗೆ 10 ವರ್ಷದ ಬಾಲಕಿ ಬಿದ್ದಿದ್ದು, ಆಕೆಯನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ.

ದಸರಾ ಸಮಯದಲ್ಲಿ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50 ಕ್ಕೂ ಹೆಚ್ಚು ಕುಟುಂಬ ಬಂದಿವೆ. ಇವರು ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ನೆಲೆಸಿದ್ದರು. ಬುಧವಾರ ಚಾಮುಂಡೇಶ್ವರಿ ದೇವಾಲಯದ ತೆಪ್ಪೋತ್ಸವ ಮುಗಿಸಿ, ಗುರುವಾರ ಬೇರೆ ಕಡೆ ತೆರಳಲು ಸಿದ್ಧತೆ ನಡೆಸಿದ್ದರು. ಆದ್ರೆ, ಹಿಂದಿನ ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು. ಆದ್ರೆ, ಬೆಳಗ್ಗೆ ಎಲ್ಲರೂ ಎದ್ದಾಗ ಬಾಲಕಿ ಸ್ಥಳದಿಂದ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಟೆಂಟ್‌ನಿಂದ 50 ಮೀ ದೂರದಲ್ಲಿರುವ ಮಣ್ಣಿನ ರಾಶಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಕುಟುಂಬಸ್ಥರು ಅತ್ಯಾಚಾರ ಮತ್ತು ಕೊಲೆಯ ಶಂಕೆ ವ್ಯಕ್ತಪಡಿಸಿದ್ದರು. ಪೊಲೀಸರು ಸಿಸಿಟಿವಿ ಪರಿಶೀಲನೆ ಮಾಡಿದ ಬಳಿಕ ಕಾರ್ತಿಕ್ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.

Tags:
error: Content is protected !!