ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರೆಂಟಿಗಳಲ್ಲಿ ನಾಲ್ಕನೇ ಗ್ಯಾರೆಂಟಿಯಾದ ಗೃಹಲಕ್ಷ್ಮಿಯೋಜನೆಗೆ ಇಂದು ಚಾಲನೆ ನೀಡಲಾಗುತ್ತದೆ. ಸಾಂಸ್ಕೃತಿಕ ನಗರಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದ್ದು ರಾಜ್ಯಸಭೆ ವಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ರಾಹುಲ್ ಗಾಂಧಿ ಯೋಜನೆ ಚಾಲನೆ ನೀಡಲಿದ್ದಾರೆ.
ಈ ಬೃಹತ್ ಕಾರ್ಯಕ್ರಮದಿಂದ ಟ್ರಾಫಿಕ್ ಜಾಮ್ ಆಗದಂತೆ ತಡೆಯಲು ಸುತ್ತಮತ್ತಲಿನ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಬದಲಿಮಾರ್ಗ ಸೂಚಿಸಲಾಗಿದೆ. ಆದರೆ ಸಂಚಾರಿ ಮಾರ್ಗ ಬದಲಾಗಿರುವುದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ.
ನಾವು ಬದಲಿ ರಸ್ತೆಯನ್ನು ಬಳಸಿಕೊಂಡು ಹೋಗಲು ಸಾಧ್ಯವಿಲ್ಲ ಎಂದು ಪೊಲೀಸರ ಜೊತೆ ವಾಗ್ವಾದ ಮಾಡುತ್ತಿದ್ದಾರೆ. ಈ ವೇಳೆ ಪೊಲೀಸರು ಸವಾರರಿಗೆ ಮನವೊಲಿಸಿ ಬೇರೆ ಮಾರ್ಗದಲ್ಲಿ ಕಳುಹಿಸುವಷ್ಟರಲ್ಲಿ ಪೊಲೀಸರು ಹೈರಾಣ ಆಗುತ್ತಿದ್ದಾರೆ. ಇನ್ನು ಕಾರ್ಯಕ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ಜಿಲ್ಲಾ ಸಂಚಾರ ಪೊಲೀಸ್ ಇಲಾಖೆ ನಿರ್ಬಂಧಿಸಿ ಮುಂಚೆಯೇ ಆದೇಶ ಹೊರಡಿಸಿತ್ತು. ಆದರೂ ಕೂಡ ಜನರು ಸಂಚರಿಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಭಾಗವಹಿಸುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಸೇರಿದಂತೆ ಎಲ್ಲ ವಾಹನಗಳಿಗೆ ಪರ್ಯಾಯ ಮಾರ್ಗ ನಿಗದಿ ಮಾಡಲಾಗಿದೆ. ಜೊತೆಗೆ ಮಹಾರಾಜ ಕಾಲೇಜು ಸುತ್ತಮುತ್ತಲಿನ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವ ವಾಹನಗಳ ಪಾರ್ಕಿಂಗ್ಗೆ ಮೈಸೂರು ನಗರದ ವಿವಿಧ ಮೈದಾನಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಮಾಹಿತಿ ನೀಡಿದ್ದರು.





