ಮೈಸೂರು: ಮೈಸೂರಿನ ರಸ್ತೆಯೊಂದಕ್ಕೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಯಾವತ್ತೂ ನನ್ನ ಹೆಸರನ್ನು ರಸ್ತೆಗೋ, ಕಟ್ಟಡಗಳಿಗೋ ಇಡಿ ಎಂದು ಯಾರ ಬಳಿ ಹೇಳಿಲ್ಲ. ಅದರ ಅಗತ್ಯವೂ ನನಗಿಲ್ಲ ಎಂದು ಹೇಳಿದರು.
ಈ ಬಗ್ಗೆ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ 45 ವರ್ಷದ ರಾಜಕೀಯದ ಅವಧಿಯಲ್ಲಿ ಎಂದಿಗೂ ತನ್ನ ಹೆಸರಿನ್ನಿಡುವಂತೆ ತಿಳಿಸಲಿಲ್ಲ. ಹಿಂದೆ ಮೈಸೂರು ವಿಶ್ವವಿದ್ಯಾಲಯದವರು ನೀಡುವ ಡಾಕ್ಟರೇಟ್ ನೀಡಲು ಮುಂದೆ ಬಂದಾಗ ಅದನ್ನೇ ವಿನಯವಾಗಿ ಬೇಡ ಅಂದಿದ್ದೆ. ನಾನೇನು ನಿನ್ನೆ ಮೊನ್ನೆ ರಾಜಕಾರಣಕ್ಕೆ ಬಂದವನಲ್ಲ, ಕಳೆದ 45 ವರ್ಷಗಳಿಂದ ಅಧಿಕಾರದ ವಿವಿಧ ಸ್ಥಾನಗಳಲ್ಲಿ ಇದ್ದೇನೆ ಎಂದು ಹೇಳಿದರು.
ಚಾಮರಾಜನಗರದಲ್ಲಿ ಸಚಿವ ಸಂಪುಟ ಸಭೆ
ಚಾಮರಾಜನಗರದಲ್ಲಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಚಾಮರಾಜನಗರ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಸಭೆ ನಡೆಸಲಾಗುವುದು ಎಂದರು.