ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿಸಿದೆ ಎಂದು ಸರ್ಕಾರದ ವಿರುದ್ಧ ಮೈಸೂರು ನಗರ ಬಿಜೆಪಿ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಇಂದು(ಏಪ್ರಿಲ್.1) ಸರ್ಕಾರ ಇಂದಿನಿಂದ ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ರಾಜ್ಯದಲ್ಲಿ ಹಾಲಿನ ದರ, ವಿದ್ಯುತ್ ದರ ಸೇರಿದಂತೆ ಇನ್ನಿತರ ವಸ್ತುಗಳ ಮೇಲೆ ದರ ಏರಿಕೆ ಮಾಡಿ ಮತ್ತಷ್ಟು ದುಬಾರಿಯಾಗಿವೆ. ಸಿಎಂ ಸಿದ್ದರಾಮಯ್ಯ ಅವರಿಗೆ ಮಂತ್ರಿಗಳ ಮೇಲೆ ಹಿಡಿತವಿಲ್ಲ. ಅದರಿಂದಲೇ ಸಚಿವರೂ ಲೂಟಿಯಲ್ಲಿ ತೊಡಗಿದ್ದಾರೆ ಎಂದರು.
ಸರ್ಕಾರದ ವತಿಯಿಂದ ಉಚಿತವಾಗಿ ನೀಡಬೇಕಾದ ವೈದ್ಯಕೀಯ ಸೇವೆಗಳಿಗೆ ದರ ನಿಗದಿ ಮಾಡಿರುವುದು ಸರಿಯಲ್ಲ. ನಮ್ಮ ಜಿಲ್ಲೆಯ ಕೆ.ಆರ್.ಆಸ್ಪತ್ರೆಯಲ್ಲಿಯೂ ಒಪಿಡಿ ಶುಲ್ಕ ಹೆಚ್ಚಳ ಮಾಡಲಾಗಿದೆ. ಅದರ ಜೊತೆಗೆ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ನೀಡಲು ಅಧಿಕ ಶುಲ್ಕ ವಿಧಿಸಲಾಗಿದೆ. ಈ ರಾಜ್ಯ ಸರ್ಕಾರ ದರ ಏರಿಕೆ ಮೂಲಕ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಕಾಂಗ್ರೆಸ್ ಸರ್ಕಾರ ಮುಸಲ್ಮಾನರ ತುಷ್ಠೀಕರಣದಲ್ಲಿ ತೊಡಗಿದೆ. ಸಂವಿಧಾನಕ್ಕೆ ವಿರುದ್ಧವಾಗಿ ಮುಸಲ್ಮಾನರಿಗೆ ಪ್ರತ್ಯೇಕವಾಗಿ ಮೀಸಲಾತಿ ನೀಡುವ ಮೂಲಕ ವಿಭಿನ್ನ ಧೋರಣೆ ಮಾಡಿದೆ. ಹಾಗಾಗಿ ರಾಜ್ಯ ಸರ್ಕಾರ ಈ ಕೂಡಲೇ ಮುಸಲ್ಮಾನರಿಗೆ ಜಾರಿಗೊಳಿಸಿರುವ ಮೀಸಲಾತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.





