ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಒಡೆಯರ್ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಇರೋದು ಕೆಲಸ ಮಾಡೋಕೆ, ಹೋಲಿಕೆ ಮಾಡೋಕ್ಕಲ್ಲ. ನಾನು ಸಂಸದನಾಗಿ ನನ್ನ ಕೆಲಸ ಮಾಡುತ್ತಿದ್ದೇನೆ. ನನ್ನ ಹಿಂದಿನವರು ಏನು ಮಾಡಿದರು ಎಂಬುದನ್ನು ನಾನು ಹೋಲಿಕೆ ಮಾಡಲ್ಲ. ನನ್ನ ಆಲೋಚನೆಗಳ ಪ್ರಕಾರ ಕೆಲಸ ಮಾಡುತ್ತಿದ್ದೇನೆ.
ಸರ್ಕಾರದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಪ್ರತಿಭಟನೆಗಳು ಆಗುತ್ತಲೇ ಇವೆ. ಕ್ಷಮೆ ಕೇಳುವಂತೆ ಆಗ್ರಹ ವ್ಯಕ್ತವಾಗುತ್ತಿದೆ. ಕ್ಷಮೆ ಕೇಳೋದು ಬಿಡೋದು ಅವರಿಗೆ ಬಿಟ್ಟಿದ್ದ. ಜನರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅವರೇ ಉತ್ತರ ಕೊಡುತ್ತಾರೆ ಎಂದು ಹೇಳಿದರು.
ಇನ್ನು ಮೈಸೂರಿನಲ್ಲಿ ಡ್ರಗ್ಸ್ ಜಾಲ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಒಳ್ಳೆಯ ಕಾರ್ಯಾಚರಣೆ. ಡ್ರಗ್ಸ್ ಅನ್ನು ಸಂಪೂರ್ಣ ನಿರ್ಮೂಲನೆ ಮಾಡಬೇಕು. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಡ್ರಗ್ಸ್ ತಡೆಯುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ಇನ್ನು ನರಸಿಂಹರಾಜ ಕ್ಷೇತ್ರದ ಜನಪ್ರತಿನಿಧಿಗಳು ಅಲ್ಲಿನ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಇದನ್ನು ಸವಾಲಾಗಿ ಸ್ವೀಕರಿಸಿ ಜನರ ನಂಬಿಕೆ ಉಳಿಸಿಕೊಳ್ಳಬೇಕು ಎಂದು ಹೇಳಿದರು.





