ಮೈಸೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಅವರು ತಮಗೆ ಬೇಕಾದ ರೀತಿಯಲ್ಲಿ ತನಿಖೆ ಮಾಡಿಸುತ್ತಿದ್ದಾರೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಸಬೇಕು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಮೈಸೂರಿನಲ್ಲಿ ಆಗ್ರಹಿಸಿದ್ದಾರೆ.
ಪೆನ್ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಪ್ರಮುಖವಾಗಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಡಿಸಿಎಂ ಸ್ಥಾನದಿಂದ ಅಮಾನತುಗೊಳಿಸಬೇಕು. ಪೆನ್ಡ್ರೈವ್ ಪ್ರಕರಣದಲ್ಲಿ ಕೇವಲ ಪ್ರಜ್ವಲ್ ಮಾತ್ರವಲ್ಲ. ಪೆನ್ಡ್ರೈವ್ ಹಂಚಿದವರ ಮೇಲೂ ಪ್ರಕರಣ ದಾಖಲಿಸಬೇಕು. ಹಾಗೆಯೇ ದೇವರಾಜಗೌಡ ಹಾಗೂ ಡಿಕೆ ಶಿವಕುಮಾರ್ ಅವರ ಆಡಿಯೋ ಬಗ್ಗೆ ಕೂಡಾ ತನಿಖೆ ನಡೆಯಬೇಕು ಎಂದರು.
ಇನ್ನು ಈ ಪ್ರಕರಣದಲ್ಲಿ ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ಅಡಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಜತೆಗೂಡಿ ಮಾಡಿರುವ ಷಡ್ಯಂತ್ರ ಇದಾಗಿದೆ. ಇವರ ಆಜ್ಞೆಯಂತೆ ಎಸ್ಐಟಿ ಕೆಲಸ ಮಾಡುತ್ತಿದೆ. ಇವರಿಗೆ ಸಂತ್ರಸ್ತರಿಗೆ ನ್ಯಾಯ ಸಿಗುವುದು ಬೇಕಿಲ್ಲ ದೇವೇಗೌಡ ಕುಟುಂಬ ಮುಗಿಸುವುದೇ ಮುಖ್ಯ ಉದ್ದೇಶವಾಗಿದೆ ಎಂದು ಕಿಡಿಕಾರಿದರು.