ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್ ಪರವಾಗಿ ಮತಯಾಚಿಸಿದ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಬಹಿಷ್ಕಾರ್ ಬಿಸಿ ತಟ್ಟಿದೆ.
ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ಜನರು ಯತೀಂದ್ರ ಅವರನ್ನು ತರಾಟೆಗೆ ತೆಗದುಕೊಂಡ ಘಟನೆ ನಡೆದಿದೆ.
ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಬಳಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾ ನಿರತ ರೈತರನ್ನು ಭೇಟಿಯಾಗಿ ಮತ ಯಾಚಿಸಿದರು. ಈ ವೇಳೆ, ಬೇಡಿಕೆಗಳನ್ನು ಈಡೇರಿಸುವಂತೆ ಯತೀಂದ್ರರನ್ನು ರೈತರು ಒತ್ತಾಯಿಸಿದರು.
ಪ್ರತಿಭಟನಾ ನಿರತ ರೈತರನ್ನು ಓಲೈಸಲು ಯತೀಂದ್ರ ಅವರನ್ನು ರೈತರು ಲೆಕ್ಕಿಸದೇ ಚುನಾವಣೆಗೋಸ್ಕರ ಇಲ್ಲಿಗೆ ಬಂದಿದ್ದೀರಿ. ಇಲ್ಲದಿದ್ದರೆ ನೀವು ಯಾವುದೇ ಕಾರಣಕ್ಕೂ ಬರುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಖಾನೆಯವರು ನಮ್ಮ ಮಾತನ್ನು ಕೇಳುತ್ತಿಲ್ಲ ಎಂದು ರೈತರು ಹೇಳಿದರು. ಇದಕ್ಕುತ್ತರಿಸಿದ ಯತೀಂದ್ರ, ಇದನ್ನು ನಮ್ಮ ತಂದೆಯವರ ಗಮನಕ್ಕೆ ತರುತ್ತೇನೆ ಎಂದರು. ಈ ಮಾತಿನಿಂದ ಸಿಟ್ಟಿಗೆದ್ದ ಪ್ರತಿಭಟನಾಕಾರರು ನಮ್ಮ ಬೇಡಿಕೆಯನ್ನು ಈಗಲೇ ಈಡೇರಿಸಿ. ಇಲ್ಲದಿದ್ದರೆ, ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.





