ಮೈಸೂರು

ತಿಗಳ ಸಮುದಾಯದ ಮೇಲೆ ಹೆಚ್ಚಿನ ಸಂಶೋಧನೆ ಅಗತ್ಯ : ಕೆ.ಆರ್‌ ಮಧುಸೂದನ್‌

ಮೈಸೂರು: ಎರಡು ಸಾವಿರ ವರ್ಷಕ್ಕೂ ಹೆಚ್ಚಿನ ಇತಿಹಾಸವಿರುವ ತಿಗಳ ಸಮುದಾಯದ ಬಗ್ಗೆ ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆ ಅಗತ್ಯ ಎಂದು   ಸಂಶೋಧಕ ಕೆ.ಆರ್.ಮಧುಸೂದನ್ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಶ್ರೀ ಅಗ್ನಿಬನ್ನಿರಾಯರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, ಅಗ್ನಿ ಬನ್ನಿರಾಯ ಸ್ವಾಮಿಗೆ ಪೌರಾಣಿಕ ಮತ್ತು ಐತಿಹಾಸಿಕ ದಾಖಲೆಗಳ ಆಧಾರದ ಮೇಲೆ ೨೦೦೦ ವರ್ಷಕ್ಕೂ ಹೆಚ್ಚಿನ ಇತಿಹಾಸ ಇದೆ. ಮಹಾಭಾರತ, ರನ್ನನ ಗದಾಯುದ್ಧ ಸೇರಿದಂತೆ ಅನೇಕ ಸಾಹಿತ್ಯ ಕೃತಿಗಳು ಮತ್ತು ೩೦ಕ್ಕೂ ಹೆಚ್ಚು ಶಾಸನಗಳಲ್ಲಿ ತಿಗುಳ ಸಮಾಜದ ಉಲ್ಲೇಖವಿದೆ. ಅಗ್ನಿ ಬನ್ನಿರಾಯ ಸ್ವಾಮಿ ಮತ್ತು ತಿಗುಳ ಸಮುದಾಯದ ಮೇಲೆ ಇನ್ನೂ ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆಗಳು ನಡೆಯಬೇಕಿದೆ ಎಂದು ತಿಳಿಸಿದರು.

ಅಗ್ನಿಬನ್ನಿರಾಯ ಸ್ವಾಮಿಯ ಆರಾಧಕರು ಬನ್ನಿಮರವನ್ನು ಪೂಜಿಸುವ ಪದ್ಧತಿ ಸಾವಿರಾರು ವರ್ಷಗಳ ಹಿಂದಿನಿಂದಲೂ ಆಚರಣೆಯಲ್ಲಿದೆ. ನಮ್ಮ ದೇಶದ ಮಹಾಕಾವ್ಯಗಳಲ್ಲಿ ಒಂದಾದ ಮಹಾಭಾರತ ಕಾವ್ಯದಲ್ಲಿ ಪಾಂಡವರು ವನವಾಸಕ್ಕೆ ಹೋಗುವ ಸಂದರ್ಭದಲ್ಲಿ ಬನ್ನಿ ಮರದಲ್ಲಿ ತಮ್ಮ ಆಯುಧಗಳನ್ನು ಬಚ್ಚಿಟ್ಟು ಹೋಗುತ್ತಾರೆ. ಅಂದರೆ ಅಗ್ನಿ ಬನ್ನಿರಾಯಸ್ವಾಮಿಯನ್ನು ಆರಾಧಿಸುವ ಪದ್ಧತಿ ಮಹಾಭಾರತ ಕಾಲದಲ್ಲಿಯೂ ಕಾಣಬಹುದಾಗಿದೆ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕ ತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ಮಾತನಾಡಿ, ತಿಗುಳ ಸಮಾಜ ಕೃಷಿ ಪ್ರಧಾನ ಸಮಾಜವಾಗಿದೆ. ಭೂಮಿಯನ್ನು ನಂಬಿಕೊಂಡು, ಕೃಷಿ ಪದ್ಧತಿಯನ್ನು ಜೀವನದ ಮೂಲ ಉದ್ಯೋಗವಾಗಿ ಆಧರಿಸಿ ಬದುಕುತ್ತಿರುವ ಸಮಾಜವಾಗಿದೆ. ಜೊತೆಗೆ ತಿಗುಳ ಸಮುದಾಯ ಯತೇಚ್ಛವಾಗಿ ಆಹಾರ ಧಾನ್ಯಗಳನ್ನು ಬೆಳೆದು ಇಡೀ ಸಮಾಜಕ್ಕೆ ನೀಡುತ್ತಾ ಬಂದಿದೆ ಎಂದು ತಿಳಿಸಿದರು.

ಮಣ್ಣನ್ನು ನಂಬಿ ಕೆಟ್ಟವರಿಲ್ಲ, ವ್ಯವಸಾಯವನ್ನು ನಂಬಿದವರು ಯಾರೂ ಸಹಾ ಹಾಳಾಗುವುದಿಲ್ಲ ಎಂಬ ಮಾತಿಗೆ ಅರ್ಥ ಬರುವ ರೀತಿಯಲ್ಲಿ ತಿಗುಳ ಸಮುದಾಯ ಕೃಷಿಯಲ್ಲಿ ತೊಡಗಿಸಿಕೊಂಡಿದೆ. ಸಣ್ಣಭೂಮಿ ಇದ್ದರೂ ಯಾರ ಬಳಿಯೂ ಕೈಚಾಚದೆ ಸ್ವಾಭಿಮಾನದಿಂದ ಬದುಕುವ ಸಮುದಾಯವಾಗಿದೆ. ಲಾಲ್‌ಬಾಗ್, ಬೃಂದಾವನ ಗಾರ್ಡನ್ ನಿರ್ಮಾಣದಲ್ಲಿ ತಿಗುಳ ಸಮುದಾಯದವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಬಣ್ಣಿಸಿದರು.

ಅಗ್ನಿವಂಶಸ್ಥರಾದ ತಿಗುಳ ಸಮುದಾಯಕ್ಕೆ ಐತಿಹಾಸಿಕವಾಗಿಯೂ ಸಾವಿರಾರು ವರ್ಷಗಳ ಇತಿಹಾಸವಿದೆ. ಪಂಚ ಪಾಂಡವರ ಪತ್ನಿ ದ್ರೌಪದಿಯೂ ಅಗ್ನಿ ವಂಶಸ್ಥಳಾಗಿದ್ದಳು. ಪಾಂಡವರು ಅಸಹಾಯಕರಾಗಿ ಕೈಚೆಲ್ಲಿ ಕೂತಾಗಲೆಲ್ಲಾ ದ್ರೌಪದಿ ಶಕ್ತಿಯಾಗಿ ನಿಲ್ಲುತ್ತಿದ್ದಳು ಎಂದು ಹೇಳಿದರು.

ತಿಗಳ ಸಮುದಾಯ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಅಭಿವೃದ್ಧಿಯಾಗಬೇಕಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಸಂಜೆ ವಿವಿ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಎಚ್.ಎನ್.ರಮೇಶ್ ತಿಳಿಸಿದರು.

ತಿಗುಳ ಸಮುದಾಯ ಅತ್ಯಂತ ಸಣ್ಣ ಸಮಾಜವಾಗಿದ್ದು, ಆರ್ಥಿಕ, ರಾಜಕೀಯ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯಂತ ಹಿಂದೆ ಉಳಿದಿದೆ. ತಿಗುಳ ಸಮುದಾಯದವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಾಗ ಮಾತ್ರ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಬರಲು ಸಾಧ್ಯ ಎಂದು ಸಲಹೆ ನೀಡಿದರು.

ತುಮಕೂರು, ಬೆಂಗಳೂರು, ರಾಮನಗರ, ಚಿಕ್ಕ ಬಳ್ಳಾಪುರ, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ತಿಗಳ ಸಮುದಾಯದ ಜನಾಂಗದವರು ವಾಸಿಸುತ್ತಿದ್ದಾರೆ. ತಿಗುಳ ಸಮುದಾಯ ಯಾರಮೇಲೂ ಅವಲಂಬಿತರಾಗುತ್ತಿರಲಿಲ್ಲ. ಸಂಪೂರ್ಣವಾಗಿ ಸ್ವಾವಲಂಬಿಯಾದ ಸಮುದಾಯವಾಗಿತ್ತು. ಸ್ವಾವಲಂಬಿ, ಸ್ವ-ಉದ್ಯೋಗ ಮತ್ತು ಸ್ವಾಭಿಮಾನದಿಂದ ಬದುಕುವ ಸಮುದಾಯವಾಗಿದೆ. ತಿಗುಳರು ಶುದ್ಧ ಕನ್ನಡ ಮಾತನಾಡುವ ಅಪ್ಪಟ ಕನ್ನಡಿಗರಾಗಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್, ಮುಖಂಡರಾದ ರಾಮೇಗೌಡ, ಮುರುಳಿಧರ, ಶಿವಣ್ಣ ಹರವೆ, ಪಾಲಹಳ್ಳಿ ಮಹಾದೇವಣ್ಣ, ಪುಟ್ಟಸ್ವಾಮಿ, ಶಂಕರ್ ಮುದ್ದನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

1 hour ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

1 hour ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

1 hour ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

2 hours ago