ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ ಪುನರ್ ಪರಿಶೀಲನೆ ಮಾಡುವಂತೆ ರೈಲ್ವೆ ಇಲಾಖೆಯ ಗಮನಕ್ಕೆ ತಂದಿದ್ದೇನೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭಾಗಕ್ಕೆ ರೈಲ್ವೆ ಯೋಜನೆ ಅಗತ್ಯವಿದೆ. ಮೈಸೂರು-ಕೊಡಗು ಜನರ ಹಿತದೃಷ್ಟಿಯಿಂದ ಯೋಜನೆ ಅನುಷ್ಠಾನಗೊಳ್ಳಬೇಕು. ಮತ್ತೊಮ್ಮೆ ಕೇಂದ್ರದ ಗಮನ ಸೆಳೆಯುತ್ತೇನೆ. ರಾಜ್ಯ ಸರ್ಕಾರ ಕೂಡ ಇದಕ್ಕೆ ಸಹಕಾರ ನೀಡಬೇಕು ಎಂದರು.
ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಸರಿಯಾಗಿ ಪತ್ರ ವ್ಯವಹಾರ ಮಾಡದ ಹಿನ್ನೆಲೆ ಈ ಬಾರಿಯ ಗಣರಾಜ್ಯೋತ್ಸವದ ಪರೇಡ್ನಲ್ಲಿ ರಾಜ್ಯದ ಸ್ತಬ್ಧಚಿತ್ರ ಭಾಗವಹಿಸುತ್ತಿಲ್ಲ. ಸ್ತಬ್ಧಚಿತ್ರ ಕಳಿಸುವ ಸಂಬಂಧ ರಾಜ್ಯ ಸರ್ಕಾರದಿಂದ ಸಮರ್ಪಕವಾಗಿ ಪತ್ರ ವ್ಯವಹಾರ ನಡೆದಿಲ್ಲ. ಹೀಗಾಗಿ ಸಾಕಷ್ಟು ಗೊಂದಲ ಉಂಟಾಗಿತ್ತು. ಈ ಹಿನ್ನೆಲೆ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಮ್ಮ ರಾಜ್ಯದ ಸ್ತಬ್ಧಚಿತ್ರ ಇರುವುದಿಲ್ಲ ಎಂದು ಹೇಳಿದರು.
ಬಳ್ಳಾರಿಯಲ್ಲಿ ಮತ್ತೊಮ್ಮೆ ಗಲಾಟೆ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಧೆ ಸಂಪೂರ್ಣ ಹದಗೆಟ್ಟಿದೆ. ಈ ಬಗ್ಗೆ ಹೋರಾಟ ಕೂಡ ಮಾಡಿದ್ದೇವೆ. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದರು.
ಚಾಮುಂಡಿ ಬೆಟ್ಟದ ‘ಪ್ರಸಾದ್’ ಕಾಮಗಾರಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಮಾತನಾಡಿ, ಅಲ್ಲಿನ ಗ್ರಾಮಸ್ಥರು ವಿರೋಧ ಮಾಡಿದ್ದಾರೆ. ಬೆಟ್ಟದ ದೇಗುಲದ ಪಕ್ಕದಲ್ಲೇ ಕಾಮಗಾರಿ ನಡೆಯುತ್ತಿದೆ.
ಸುತ್ತಮುತ್ತಲಿನ ಕಾಮಗಾರಿಯಿಂದ ಗೋಪುರಕ್ಕೆ ತೊಂದರೆಯಾಗಬಹುದು ಅಂಬ ಆತಂಕವಿದೆ.
ಈ ಹಿಂದೆ ಯಾವ ರೀತಿ ಕಾಮಗಾರಿ ಮಾಡಿದ್ದಾರೆ ಎಂಬುದನ್ನು ತಿಳಿಯಲಿ. ನಂತರ ಕಾಮಗಾರಿ ಮುಂದುವರೆಸಲಿ. ಚಾಮುಂಡಿ ಬೆಟ್ಟದ ಅಭಿವೃದ್ಧಿ ಕೂಡ ಆಗಬೇಕಿದೆ. ಪರಿಸರವನ್ನು ಸಂರಕ್ಷಿಸಬೇಕಿದೆ. ನನ್ನ ಅನುಮತಿಗಿಂತ ಕಾಮಗಾರಿಗೆ ವಿರೋಧ ಮಾಡಿರುವವರ ಅನುಮತಿ ತುಂಬಾ ಮುಖ್ಯ. ಅಧಿಕಾರಿಗಳು ತರಾತುರಿಯಲ್ಲಿ ಕಾಮಗಾರಿ ಮಾಡುತ್ತಿರುವುದು ಯಾಕೆ? ಎಂಬುದು ಗೊತ್ತಿಲ್ಲ. ಜನರ ಅಭಿಪ್ರಾಯವನ್ನು ಪಡೆದು ಕಾಮಗಾರಿ ಮುಂದುವರೆಸಲಿ ಎಂದರು.





