ಮೈಸೂರು : ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳಿಗೆ ಮದ್ಯವರ್ತಿಗಳು ಹಾಗೂ ವಾಹನ ಚಾಲನಾ ತರಬೇತಿ ಶಾಲೆಯವರು ಬರುವ ಚಾಳಿಯಿದ್ದು, ಇದಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಗಳಿಗೆ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದರು.
ಅವರು ಶನಿವಾರ ಮೈಸೂರು ದಕ್ಷಿಣ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಪ್ರಾದೇಶಿಕ ಸಾರಿಗೆ ಇಲಾಖೆಯ ೩೧ ಸೇವೆಗಳನ್ನು ಸಕಾಲದಲ್ಲಿ ಆನ್ಲೈನ್ ಮೂಲಕ ನೀಡಲಾಗುತ್ತಿದೆ. ಸಾರ್ವಜನಿಕರು ಅನಿವಾರ್ಯವಾಗಿ ಕಚೇರಿಗೆ ಅಲೆದಾಡುವುದು ಬೇಕಿಲ್ಲ,. ಸಕಾಲ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.
ಡಿಸೆಂಬರ್ ೧ ರಿಂದ ಒನ್ ನೇಷನ್ ಒನ್ ಕಾರ್ಡ್ ಯೋಜನೆಗೆ ಚಾಲನೆ ನೀಡಲಾಗುವುದು. ಆರ್.ಸಿ ಕಾರ್ಡ್, ಹಾಗೂ ಡಿ.ಎಲ್ನಲ್ಲಿ ಕ್ಯೂಆರ್ ಕೋಡ್ಇದ್ದು, ಇದರಲ್ಲಿ ವಿವರವಾದ ಮಾಹಿತಿ ಇರುತ್ತದೆ ಎಂದರು.
ಮೈಸೂರು ವಿಭಾಗದ ವ್ಯಾಪ್ತಿಯ ಪ್ರಾದೇಶಿಕ ಸಾರಿಗೆ ಇಲಾಖೆ ವ್ಯಾಪ್ತಿಯಲ್ಲಿ ೨೦೨೫ ಏಪ್ರಿಲ್ನಿಂದ ಅಕ್ಟೋಬರ್ವರೆಗೆ ೬೪೮ ಕೋಟಿ ರೂ ರಜಸ್ವ ಸಂಗ್ರಹಿಸಲಾಗಿದೆ. ತಪಾಸಣೆ ವೇಳೆ ೧೫.೧೭ ಕೋಟಿ ರೂ ದಂಡ ವಸೂಲಿ ಮಾಡಲಾಗಿರುತ್ತದೆ ಎಂದರು.
ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಬಸ್ ನಿಲ್ದಾಣಗಳಲ್ಲಿ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಬಸ್ ನಿಲ್ದಾಣಗಳ ಶೌಚಾಲಯಗಳಿಗೆ ಭೇಟಿ ನೀಡಿ ತಪಾಸಣೆ ನಡಸಬೇಕು೧ ೦೦ ವಿದ್ಯುತ್ ಚಾಲಿತ ಬಸ್ ಕೆ.ಎಸ್.ಆರ್.ಟಿ.ಸಿ ವತಿಯಿಂದ ಮೈಸೂರು ಜಿಲ್ಲೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಇದರ ನಿರ್ವಹಣೆಗಗಿ ಬನ್ನಿಮಂಟಪದ ಡಿಪೋನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ತಗಡೂರಿನಲ್ಲಿ ಬಸ್ ನಿಲ್ದಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಮೈಸೂರು ನಗರ ಬೆಳೆಯುತ್ತಿದ್ದು, ಹೊರ ವಲಯದ ರಿಂಗ್ ರೋಡ್ಗಳಲ್ಲಿ ಬಸ್ ಹಾಗೂ ಟ್ರಿಪ್ಗಳ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ೪ ಹೊಸ ಬಸ್ ನಿಲ್ದಾಣಕ್ಕೆ ಸ್ಥಳ ಗುರುತಿಸಲು ಯೋಜಿಸಲಾಗುತ್ತಿದೆ ಎಂದರು. ೧೨೦ ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೈಸೂರು ಹೊಸ ಗ್ರಾಮಾಂತರ ಬಸ್ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿರುತ್ತದೆ ಎಂದರು.
ಸಭೆಯಲ್ಲಿ ಅಪರ ಸಾರಿಗೆ ಆಯುಕ್ತೆ ಓಂಕಾರೇಶ್ವರಿ ಅವರು ಮೈಸೂರು ವಿಭಾಗದ ಪ್ರಗತಿಯ ಬಗ್ಗೆ ಸಚಿವರಿಗೆ ವಿವರಿಸಿದರು. ಸಭೆಯಲ್ಲಿ ಜಂಟಿ ಸಾರಿಗೆ ಅಯುಕ್ತ ಹಾಗೂ ಮೈಸೂರು ದಕ್ಷಿಣ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ್ ಚೌಹಣ್, ಮೈಸೂರು ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ, ಉಪ ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಚಂದ್ರ, ಮೈಸೂರು ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಶ್ರೀನಿವಾಸ್, ಮೈಸೂರು ನಗರ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.





