ಮೈಸೂರು: ನೋವಿನ ಸಂಕಟದಲ್ಲೂ ಶವ ಸಂಸ್ಕಾರಕ್ಕೆ ಸ್ಮಶಾನ ಇಲ್ಲದೆ ಗ್ರಾಮದ ಜನರು ಪರದಾಟ ನಡೆಸಿರುವ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಗೊದ್ದನಪುರ ಗ್ರಾಮದಲ್ಲಿ ನಡೆದಿದೆ.
ಸುಮಾರು 2500ಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಗೊದ್ದನಪುರ ಗ್ರಾಮದಲ್ಲಿ ಎಲ್ಲಾ ಸಮುದಾಯದ ಜನರು ವಾಸಿಸುತ್ತಿದ್ದಾರೆ. ಆದರೆ, ಸ್ಮಶಾನಕ್ಕೆ ಭೂಮಿ ಇಲ್ಲದೆ ಕಪಿಲಾ ನದಿಯ ದಡದ ಕೆಸರಿನಲ್ಲಿ ಹೂಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ದಲಿತರಿಗೆ ಶವ ಸಂಸ್ಕಾರ ಮಾಡಲು ಭೂಮಿ ಇಲ್ಲದೆ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಶವ ಸಂಸ್ಕಾರಕ್ಕೆ ದಾರಿ ಇಲ್ಲದೆ ಕೊಳಚೆ ನೀರಿನಲ್ಲಿಯೇ ಶವಹೊತ್ತುಕೊಂಡು ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಕಳೆದ 20 ವರ್ಷಗಳಿಂದ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಗೊದ್ದನಪುರ ಗ್ರಾಮದ ಸರ್ವೆ ನಂಬರ್ 34 ಮತ್ತು 70ರಲ್ಲಿ ಸರ್ಕಾರಿ ಭೂಮಿ ಇದೆ. ಇದರಲ್ಲಿ ಎರಡು ಎಕರೆ ಭೂಮಿಯನ್ನು ಸ್ಮಶಾನಕ್ಕೆ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಇದುವರೆಗೂ ಮಾತ್ರ ಕ್ಯಾರೆ ಎಂದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.





