Mysore
27
overcast clouds

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಎನ್‌ಡಿಎಗೆ ಪೂರ್ಣ ಪ್ರಮಾಣದ ಬಹುಮತ ಸಿಗುವುದಿಲ್ಲ: ಸಿಎಂ ಸಿದ್ದರಾಮಯ್ಯ!

ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಎನ್‌ಡಿಎಗೆ ಪೂರ್ಣ ಪ್ರಮಾಣದ ಬಹುಮತ ದೊರೆಯುವುದಿಲ್ಲ. ಇಂಡಿಯಾ ಮೈತ್ರಿಗೆ ಈ ಬಾರಿ ಹೆಚ್ಚಿನ ಬಹುಮತ ಸಿಗಲಿದೆ. 400ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದು ಹೇಳುವ ಮೂಲಕ ಬಿಜೆಪಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ತಮ್ಮ ನಿವಾಸದಲ್ಲಿಂದು (ಏ.೧೩) ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಮೇಶ್ವರ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್‌ಐಎ ತಂಡ ಮತ್ತು ಕರ್ನಾಟಕ ಪೊಲೀಸರನ್ನು ಅಭಿನಂದಿಸಿರುವ ಸಿಎಂ, ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದರು.

ಇನ್ನು ನಾಳೆ ಮೋದಿ ಆಗಮನದ ಬಗ್ಗೆ ವ್ಯಂಗ್ಯವಾಡಿರುವ ಸಿಎಂ ಸಿದ್ದರಾಮಯ್ಯ, ಮೋದಿಯವರು ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಹೇಳಬೇಕು. ನಿರುದ್ಯೋಗ, ತೆರಿಗೆ ಹಂಚಿಕೆ, ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ ಎಂಬುದಕ್ಕೆಲ್ಲಾ ಉತ್ತರ ಹೇಳಲಿ ಎಂದರು.

ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂದು ಮೋದಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಹಾಗಾದರೆ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ. ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟರೇ ಎಂದು ಪ್ರಶ್ನಿಸಿದ ಸಿಎಂ ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಜಾರಿಯಾದಾಗ ಸಾವರ್ಕರ್ ಹಾಗು ಗೋಲ್ವಾಲ್ಕರ್ ಅವರು ಭಾರತದ ಸಂವಿಧಾನವನ್ನು ವಿರೋಧಿಸಿದ್ದರು ಕಿಡಿಕಾರಿದರು.

Tags:
error: Content is protected !!