ಮೈಸೂರು : ಈ ಬಾರಿ ನಾಡಿನಲ್ಲಿ ಉತ್ತಮವಾಗಿ ಮಳೆಯಾಗಿದ್ದು ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ, ಮುಖ್ಯಮಂತ್ರಿಗಳು ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ತಿಳಿಸಿದ್ದಾರೆ. ಅದರಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.
ಬುಧವಾರ ವಿರನಹೊಸಹಳ್ಳಿ ಬಳಿ ಗಜ ಪಯಣಕ್ಕೆ ಅಧಿಕೃತ ಚಾಲನೆ ನೀಡಿ ಅವರು ಮಾತನಾಡಿದರು.
ಇಂದು ಮೊದಲ ಹಂತದಲ್ಲಿ 9 ದಸರಾ ಆನೆಗಳು ಮೈಸೂರಿಗೆ ಆಗಮಿಸುತ್ತಿದ್ದು, ಅಭಿಮನ್ಯು ನೇತೃತ್ವದ ಕಂಜನ್, ಏಕಲವ್ಯ, ಭೀಮ, ಲಕ್ಷ್ಮೀ, ವರಲಕ್ಷ್ಮಿ, ರೋಹಿತ್, ಧನಂಜಯ ಹಾಗೂ ಗೋಪಿ ಆನೆಗಳು ಮೈಸೂರಿಗೆ ಆಗಮಿಸಲಿವೆ. ಮೈಸೂರಿನ ಅಶೋಕಪುರದ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿ, ಅಗಸ್ಟ್ 23 ರಂದು ಅರಮನೆಗೆ ಸ್ವಾಗತ ಮಾಡಿ ಆನೆಗಳನ್ನು ಬರಮಾಡಿಕೊಳ್ಳಲಾಗುವುದು ಎಂದರು.
ಆನೆ ಕಾಡಿನ ಸಂಪತ್ತು. ವನ್ಯ ಜೀವಿಗಳು ಹಾಗೂ ವನ್ಯ ಸಂರಕ್ಷಣೆ ದೇಶಕ್ಕೆ ಅತ್ಯಗತ್ಯ. ಪರಿಸರ ಸಂರಕ್ಷಣೆ ಹಾಗೂ ವನ್ಯ ಸಂರಕ್ಷಣೆ ಮಾಡದಿದ್ದರೆ ಮಾನವ ಉಳಿಯುವುದು ಕಷ್ಟ. ಈ ವರ್ಷ ಮೈಸೂರಿನಲ್ಲಿ 40 ಡಿಗ್ರಿ ವರೆಗೆ ಉಷ್ಣಾಂಶ ಇತ್ತು. ಇದಕ್ಕೆ ಕಾರಣ ಪರಿಸರವನ್ನು ಹಾಳು ಮಾಡುತ್ತಿರುವುದು. ಆದ್ದರಿಂದ ಪರಿಸರವನ್ನು ರಕ್ಷಿಸಲು ಎಲ್ಲರೂ ಪಣತೊಡಬೇಕು ಎಂದು ಸಚಿವರು ಕರೆ ನೀಡಿದರು.
ಅರ್ಜುನ ಆನೆ 14 ಬಾರಿ ದಸರಾದಲ್ಲಿ ಭಾಗವಹಿಸಿ, 9 ಬಾರಿ ಅಂಬಾರಿ ಹೊತ್ತಿತ್ತು. ಇಂದು ವೀರ ಮರಣ ಹೊಂದಿದೆ. ಮಾನವ ಹಾಗೂ ಪ್ರಾಣಿ ಸಂಘರ್ಷ ನಡೆಯಲು ಕಾರಣ ಅರಣ್ಯ ನಾಶ ಮತ್ತು ಒತ್ತುವರಿ ಮಾಡುತ್ತಿರುವುದು ಇದನ್ನು ತಡೆಗಟ್ಟಬೇಕು ಎಂದು ಹೇಳಿದರು.





