ಮೈಸೂರು : ನಮ್ಮ ರಾಜ್ಯದ ವಿಚಾರ ಬಂದಾಗ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸುಳ್ಳು ಹೇಳಿದ್ದರು ಈಗಲೂ ಹೇಳಿದ್ದಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಆರೋಪಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ. ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ ಎಂದರು.
ರಾಯಚೂರಿಗೆ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ ಪ್ರಸ್ತಾಪವಾಗಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐ ಐ ಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು ಅದೂ ಕೂಡ ಆಗಿಲ್ಲ ಹಾಗಾದರೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು.
ಕೇಂದ್ರದ ನೀತಿ , ಕಾರ್ಯಕ್ರಮಗಳಿಂದ ಶೇ 31% ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ : 15 ನೇ ಹಣಕಾಸು ಯೋಜನೆಯಲ್ಲಿ ಅತಿ ಹೆಚ್ಚು ಅನ್ಯಾಯವಾಗಿರುವ ರಾಜ್ಯ ಕರ್ನಾಟಕ. ರಾಜ್ಯದಿಂದ ರಾಜ್ಯ ಸಭಾ ಸದಸ್ಯರಾಗಿರುವ ಅವರು ಕೈಗಾರಿಕೆಗಳೆಲ್ಲಾ ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದೂ ಹೇಳಿದ್ದಾರೆ.
ಆದರೆ ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರ ನೀತಿ , ಕಾರ್ಯಕ್ರಮಗಳಿಂದ ಶೇ 31% ನಮ್ಮ ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ. ಕೇಂದ್ರಕ್ಕೆ ತೆರಿಗೆ ನೀಡುವಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ 2 ನೇ ಸ್ಥಾನದಲ್ಲಿದೆ ಇನ್ನೇನು ಕೊಡುಗೆ ಕೊಡಬೇಕು? ಎಂದು ಪ್ರಶ್ನಿಸಿದರು.
ಅವರೇ 2023-24 ನೇ ಬಜೆಟ್ ನಲ್ಲಿ ಹೇಳಿದಂತೆ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5300 ಕೋಟಿಗಳನ್ನು ಕೊಟ್ಟಿಲ್ಲ . ಅವರ ಘೋಷಣೆ ನೋಡಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬಜೆಟ್ ನಲ್ಲಿ ಪುನರುಚ್ಚರಿಸಿದ್ದರು ಎಂದರು.





