ಮೈಸೂರು : ಮೈಕ್ರೊ ಫೈನಾನ್ಸ್ ಕಂಪನಿಗಳು ಮತ್ತು ಲೇವಾದೇವಿದಾರರು ನೀಡುತ್ತಿರುವ ಕಿರುಕುಳದಿಂದ ಸಾಲಗಾರರನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿದ ಕರ್ನಾಟಕ ಮೈಕ್ರೊ ಫೈನಾನ್ಸ್(ಬಲವಂತದ ಕ್ರಮಗಳ ತಡೆ) ಸುಗ್ರೀವಾಜ್ಞೆ-2025 ಕಾಯ್ದೆಯನ್ನು ಕರ್ನಾಟಕ ರಾಜ್ಯ ರೈತ ಸಂಘ ಸ್ವಾಗತಿಸಿದೆ.
ಈ ಕುರಿತು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೈತ ಮುಖಂಡ ಇಂಗಲಗುಪ್ಪೆ ಕೃಷ್ಣೆಗೌಡ, ರೈತರು ಮತ್ತು ಸಾರ್ವಜನಿಕರು ಖಾಸಗಿ ಬ್ಯಾಂಕ್ ಮತ್ತು ಮೈಕ್ರೋ ಫೈನಾನ್ಸ್ ಗಳಲ್ಲಿ ಸಾಲ ಪಡೆಯುತ್ತಿದ್ದಾರೆ. ಮೊದಲಿಗೆ ಸಾಲ ಕೊಡುವ ಮೈಕ್ರೋ ಫೈನಾನ್ಸ್ ಗಳು ತದ ನಂತರ ಜನರ ರಕ್ತ ಹೀರುವ ಕೆಲಸ ಮಾಡುತ್ತಿದ್ದಾರೆ.
ಇದರ ವಿರುದ್ಧ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿದೆ. ಇದು ಸ್ವಾಗತಾರ್ಹವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ಹಾವಳಿ ಹೆಚ್ಚಾಗಿದೆ. ಮೈಕ್ರೋ ಫೈನಾನ್ಸ್ ಹಾವಳಿಗೆ ರೈತರು ಊರು ಬಿಡುತ್ತಿದ್ದಾರೆ. ಹಲವು ಕಡೆ ಪ್ರತಿನಿತ್ಯ ಒಬ್ಬರಲ್ಲ ಒಬ್ಬರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಗಳು ನಿಗದಿತ ಸಮಯಕ್ಕೆ ರೈತರಿಗೆ, ಜನ ಸಾಮಾನ್ಯರಿಗೆ ಸಾಲ ನೀಡುತ್ತಿಲ್ಲ ಎಂದು ದೂರಿದರು.
ಮೈಸೂರು ತಾಲ್ಲೂಕು ಕಚೇರಿಯಲ್ಲಿ ಮಧ್ಯವರ್ಥಿಗಳ ಹಾವಳಿ ಹೆಚ್ಚಾಗಿದೆ. ಸಾರ್ವಜನಿಕರ ಯಾವುದೇ ಕೆಲಸ ಆಗುತ್ತಿಲ್ಲ. ಮಧ್ಯವರ್ತಿಗಳ ಮುಖಾಂತರವೇ ಎಲ್ಲ ಕೆಲಸ ನಡೆಯುತ್ತಿದೆ. ಹೆಚ್ ಡಿ ಕೋಟೆ ತಾಲ್ಲೂಕಿನಲ್ಲಿ ರೈತರ ಸೋಗಿನಲ್ಲಿ ಹಲವರು ಸರ್ಕಾರಿ ಭೂಮಿ ಕಬಳಿಸುತ್ತಿದ್ದಾರೆ. ಅಧಿಕಾರಿಗಳು ಭೂಗಳ್ಳರ ಜೊತೆ ಸೇರಿ ಸರ್ಕಾರಿ ಭೂಮಿಯನ್ನ ಕಬಳಿಕೆ ಮಾಡುತ್ತಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.