- ನ್ಯಾಯಾಲಯಕ್ಕೆ ಜಿಲ್ಲಾಧಿಕಾರಿ ಮಾಹಿತಿ ಸಲ್ಲಿಕೆ
- ಕ್ಯಾತಮಾರನಹಳ್ಳಿಯ ವಿವಾದಿತ ಸ್ಥಳ
ಮೈಸೂರು: ಇಲ್ಲಿನ ಕ್ಯಾತಮಾರನಹಳ್ಳಿಯಲ್ಲಿರುವ ವಿವಾದಿತ ಸ್ಥಳದಲ್ಲಿ ಮದರಸಾ ಆರಂಭಿಸಲು ಅನುಮತಿ ನೀಡಿರುವುದಾಗಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.
ಮೈಸೂರು ಜಿಲ್ಲಾಽಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು ಈ ಸಂಬಂಧ ಗುರುವಾರ ತಮ್ಮ ವಕೀಲರ ಮೂಲಕ ಉಚ್ಛ ನ್ಯಾಯಾಲಯಕ್ಕೆ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ನಗರದ ಹಲೀಂ ಸಾದಿಯಾ ಶೈಕ್ಷಣಿಕ ಸಂಸ್ಥೆ ಮತ್ತು ಮಸೀದಿ ಮತ್ತು ಮದರಸಾ ಮಾಡಲು ಮುಂದಾಗಿತ್ತು. ಇದಕ್ಕೆ ಸಾಕಷ್ಟು ಪರ ವಿರೋಧ ಚರ್ಚೆ ಆರಂಭವಾಗಿತ್ತು.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಎಲ್ಲ ಧರ್ಮಗಳ ಧಾರ್ಮಿಕ ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ. ಎಲ್ಲ ಧರ್ಮಗಳ ಧಾರ್ಮಿಕ ಆಚರಣೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದು ಸಂವಿದಾನದಲ್ಲಿ ಕೂಡ ಇದೆ. ಹೀಗಾಗಿ ಮದರಸಾ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ.
ಇದಕ್ಕೆ ಸಂಬಂದಿಸಿದಂತೆ 2016ರಲ್ಲಿ ಮದರಸಾ ಅಥವ ಮಸೀದಿ ಆರಂಭಿಸಲು ವಿರೋಧ ವ್ಯಕ್ತಪಡಿಸಿದ್ದ ಆರ್ಎಸ್ಎಸ್ ಕಾರ್ಯಕರ್ತ ರಾಜು ಎಂಬವರನ್ನು ಹಾಡಹಗಲೇ ಹತ್ಯೆ ಮಾಡಲಾಗಿತ್ತು. ಹತ್ಯೆಯಾದ ಬಳಿಕ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಮಸೀದಿಗೆ ಬೀಗ ಹಾಕಲಾಗಿತ್ತು.
ಕೆಲ ತಿಂಗಳ ಹಿಂದೆ ಟ್ರಸ್ಟ್ ಸದಸ್ಯರು ಮಸೀದಿ ಬೀಗ ತೆರವು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಉಚ್ಚ ನ್ಯಾಯಾಲಯ ಸಮಸ್ಯೆ ಬಗೆಹರಿಸುವಂತೆ ಮೈಸೂರು ಜಿಲ್ಲಾಧಿಕಾರಿಗೆ ಸೂಚನೆ ನೀಡಿತ್ತು.
ನಂತರ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ರೆಡ್ಡಿ ಅವರು ಎರಡೂ ಧರ್ಮದವರ ಮುಖಂಡರ ಸಭೆ ನಡೆಸಿದ್ದರು. ನಂತರ ಮದರಸಾ ತೆರೆಯಲು ಅನುಮತಿ ನೀಡುವುದಾಗಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.