ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ನನಗೆ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಆ ಮೂಲಕ ಎಲ್ಲಾ ಊಹಾಪೋಹಗಳಿಗೆ ಸಂಸದರು ಫುಲ್ಸ್ಟಾಪ್ ಹಾಕಿದ್ದಾರೆ.
ಈ ಬಾರಿ ಸಂಸದ ಪ್ರತಾಪ್ ಸಿಂಹ ಬದಲಿಗೆ ರಾಜವಂಶದ ಯದುವೀರ್ ಕೃಷ್ಣದತ್ತ ಒಡೆಯರ್ ಅವರಿಗೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂದು ವರದಿಯಾದ ಬೆನ್ನಲ್ಲೇ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರು ರಾಮೇಶ್ವರಂ ರೈಲಿಗೆ ಮೈಸೂರಿನಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ನನ್ನ ಮೇಲೆ ಪ್ರೀತಿ ಇಟ್ಟು ಇಲ್ಲಿಯ ಜನ ಗೆಲ್ಲಿಸಿದ್ದಕ್ಕೆ ಇಷ್ಟೆಲ್ಲ ಮಾಡಿದ್ದೇನೆ. ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸಿದ್ದೇನೆ ಎಂದರು.
ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗುವ ಬಗ್ಗೆ ಭರವಸೆ ಇದೆ. ಆದರೆ ಅಂತಿಮವಾಗಿ ಪಕ್ಷದ ಹೈಕಮಾಂಡ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಇಂದು ಪ್ರತಾಪ್ ಸಿಂಹ ಹೇಳಿದರು.
ಮೊದಲು ಮತ್ತು ಎರಡನೇ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮತಯಾಚನೆ ಮಾಡಿದ್ದೆ. ಈಗ ಮೂರನೇ ಬಾರಿಯೂ ಮೋದಿ ಹೆಸರಿನಲ್ಲೇ ಚುನಾವಣೆ ಎದುರಿಸಿ ಜಯಗಳಿಸುತ್ತೇನೆ ಎಂಬ ವಿಶ್ವಾಸವಿದೆ ಎಂದರು.
ನಾನು ಏನೆಂಬುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೊತ್ತಿದೆ. ಸೋಲುವ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ವಿಚಾರದಲ್ಲಿ ಹೊಡೆದಾಟ ನಡೆಯುತ್ತಿದೆ. ಮೈಸೂರಿನಲ್ಲಿ ಬಿಜೆಪಿ ಗೆಲ್ಲುವಂತ ಪರಿಸ್ಥಿತಿಯನ್ನು ನಾನು ಸೃಷ್ಟಿ ಮಾಡಿದ್ದೇನೆ. ನನಗೆ ತಾಯಿ ಚಾಮುಂಡಿ, ಪ್ರಧಾನಿ ಮೋದಿ ಆಶೀರ್ವಾದವಿದೆ ಎಂದು ಪ್ರತಾಪ್ ಸಿಂಹ ತಿಳಿಸಿದರು.