ಮೈಸೂರು : ಬಿರುಬೇಸಿಗೆ, ಬಿಸಿಗಾಳಿ ನಡುವೆಯೇ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ನೆರೆ ಹಾವಳಿ ಉಂಟಾಗಬಹುದಾದ ಪ್ರದೇಶಗಳಲ್ಲಿ ಮೈಸೂರು ಮಹಾನಗರ ಪಾಲಿಕೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಹೇಳಿದರು.
ಈ ಬಗ್ಗೆ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಗಾರು ಪೂರ್ವ ಮಳೆ ಆರಂಭವಾದ ಹಿನ್ನಲೆ ಪಾಲಿಕೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಗರದಾದ್ಯಂತ ಬೀಳುವ ಹಂತದಲ್ಲಿರುವ ಮರಗಳ ವೈಜ್ಞಾನಿಕ ರೀತಿಯಲ್ಲಿ ತೆರವು ಮಾಡಬೇಕಾಗುತ್ತದೆ. ಅದರಂತೆ ಈಗಾಗಲೇ ಅಧಿಕಾರಿಗಳಿಗೆ ಕ್ರಮ ವಹಿಸಲು ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.
ಇನ್ನೂ ನಗರದ ರಾಜಕಾಲುವೆಗಳಲ್ಲಿ ಹೂಳು ತೆಗೆಯುವ ಕೆಲಸವನ್ನೂ ಸಹ ಮಾಡಲಾಗುತ್ತದೆ. ನಮ್ಮಲ್ಲೇ ಇರುವ ಯಂತ್ರ ಬಳಸಿ ಹೂಳು ತೆಗೆಯಲಾಗುವುದು. ಅವಶ್ಯಕತೆ ಬಿದ್ದರೆ ಟೆಂಡರ್ ಮೂಲಕ ಕೆಲಸ ನಿರ್ವಹಿಸಲಾಗುವುದು ಎಂದು ಅವರು ಹೇಳಿದರು.





