ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಕೋಣನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಣನೂರು, ಕೋಣನಪುರ, ಕೋಣನೂರು ಪಾಳ್ಯ, ಮರಳ್ಳಿಪುರ, ಪಿ.ಮರಹಳ್ಳಿ , ಹನುಮನಪುರ ಗ್ರಾಮಗಳಲ್ಲಿ ವಿಧಾನಸಭಾ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಜನ ಸಂಪರ್ಕ ಸಭೆಯನ್ನು ನಡೆಸಿ, ಸ್ಥಳದಲ್ಲಿಯೇ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಮಾತನಾಡಿದರು.
ಹಲವು ದಿನಗಳಿಂದ ಜನ ಸಂಪರ್ಕ ಸಭೆಯನ್ನು ನಡೆಸಲು ಆಗಿರಲಿಲ್ಲ. ಜನರ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲ ಗ್ರಾಮಗಳಲ್ಲಿ ಜನ ಸಂಪರ್ಕ ಸಭೆಯನ್ನು ಮಾಡುತ್ತಿದ್ದು, ನೇರವಾಗಿ ಜನರಿಗೆ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇನೆ. ಸಿಎಂ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಸಾರ್ವಜನಿಕರು ಯಾವುದೇ ಕೆಲಸ ಕಾರ್ಯಗಳನ್ನು ಕೇಳಿಕೊಂಡು ಕಛೇರಿಗೆ ಬಂದರೆ ಅವರಿಗೆ ಸ್ಪಂದಿಸಿ ಆದಷ್ಟು ಬೇಗ ಅವರ ಕೆಲಸವನ್ನು ಮಾಡಿಕೊಡಬೇಕು. ಕೊಣನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿಯೂ ಸ್ಮಶಾನ ಭೂಮಿ ಕಲ್ಪಿಸಲು ಅಧಿಕಾರಿಗಳು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಗ್ರಾಮಗಳಲ್ಲಿ ಸಾರಿಗೆ ಬಸ್ ನಿಲ್ಲಿಸುತ್ತಿಲ್ಲ ಇದರಿಂದ ಗ್ರಾಮಸ್ಥರಿಗೆ ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಮಹಿಳೆಯರು ಅಳಲನ್ನು ತೋಡಿಕೊಂಡರು. ಇದರಿಂದ ಕೋಪಗೊಂಡ ಡಾ.ಯತೀಂದ್ರ, ಸಾರಿಗೆ ಬಸ್ ಗಳನ್ನು ಕಡ್ಡಾಯವಾಗಿ ನಿಲ್ಲಿಸಬೇಕು ಮತ್ತು ಗ್ರಾಮಗಳಿಗೆ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಅಲ್ಲದೆ ಬಸ್ ಗಳನ್ನು ನಿಲ್ಲಿಸಬೇಕು ಎಂದು ಘಟಕ ವ್ಯವಸ್ಥಾಪಕರನ್ನು ತರಾಟೆಗೆ ತೆಗೆದುಕೊಂಡರು.
ಇನ್ನೂ ಗ್ರಾಮಗಳ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ನಿರ್ಮಾಣ, ಭವನಗಳ ನಿರ್ಮಾಣ, ದೇವಾಲಯಗಳ ನಿರ್ಮಾಣ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡಬೇಕು ಎಂದು ಗ್ರಾಮಸ್ಥರು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಕೋಣನೂರು ಗ್ರಾ.ಪಂ ಅಧ್ಯಕ್ಷ ವಸಂತಕುಮಾರ್, ಮಾಜಿ ಜಿ.ಪಂ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ, ಮಾಜಿ ಗ್ರಾ.ಪಂ ಅಧ್ಯಕ್ಷ ಗಿರೀಶ್, ಮಾಜಿ ತಾಪಂ ಸದಸ್ಯ ಪದ್ಮನಾಭ, ಕಾಂಗ್ರೆಸ್ ಮುಖಂಡರಾದ ಕೆ.ಎಂ ಬಸವಣ್ಣ, ಚುಂಚನಹಳ್ಳಿ ಪುಟ್ಟಸ್ವಾಮಿ, ಪಿ.ಮರಹಳ್ಳಿ ಮಹೇಶ್, ದಾಸನೂರು ಕಿಶೋರ್, ಪುಟ್ಟರಂಗಯ್ಯ, ಚೇತನ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.





