ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ತವರು ಜಿಲ್ಲೆಗೆ ಮೈಸೂರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ.
ಶುಕ್ರವಾರ ಬಜೆಟ್ ಮಂಡಿಸಿದ ಸಿಎಂ, ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tag ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರ್ಯಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮಗಳನ್ನ ರೂಪಿಸುವುದಾಗಿ ಘೋಷಣೆ ಮಾಡಿದ್ದಾರೆ.
ಅಲ್ಲದೇ, ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯ ಬಲಪಡಿಸಲಾಗುವುದು. ಇದರಿಂದ ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ತವರಿಗೆ ಸಿಎಂ ಕೊಟ್ಟ ಕೊಡುಗೆ
1.ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮಗಳ ಆಯೋಜನೆ.
2.ಮೈಸೂರಿನ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣವನ್ನು ಮೇಲ್ದರ್ಜೆಗೇರಿಸಲು ಕ್ರಮ.
3.ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದ ಬಳಿ ಎಆರ್ ಮತ್ತು ವಿಆರ್ ತಂತ್ರಜ್ಞಾನದೊಂದಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿ ನಿರ್ಮಾಣ.
4.ಮಾನವ – ವನ್ಯಪ್ರಾಣಿ ಸಂಘರ್ಷದಲ್ಲಿ ಸಂರಕ್ಷಿಸಿದ, ಗಾಯಗೊಂಡ ಅನಾರೋಗ್ಯಪೀಡಿತ ಪ್ರಾಣಿಗಳ ರಕ್ಷಣೆ/ನಿರ್ವಹಣೆಗಾಗಿ ಬನ್ನೇರುಘಟ್ಟ ಮತ್ತು ಮೈಸೂರಿನಲ್ಲಿರುವ ಪುನರ್ವಸತಿ ಕೇಂದ್ರಗಳ ಸಾಮರ್ಥ್ಯ ವರ್ಧನೆ ಹಾಗೂ ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಕೇಂದ್ರಗಳ ನಿರ್ಮಾಣ.
5.ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕ್ರಮ.
6.ಮೈಸೂರು ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ನಿರ್ಮಾಣ.




