ಮೈಸೂರು: ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಯುಷ್ ವೈದ್ಯಕೀಯ ಸೇವೆ ದೊರಕಿಸಲು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದಲ್ಲಿ ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್(ಎನ್ಐಎಂಎ) ಬುಧವಾರ ಆಯೋಜಿಸಿದ್ದ ‘ಆಯುರ್ ವೈದ್ಯ ಸಮ್ಮೇಳನ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಅಧಿಕಾರಿಗಳ ಉಸ್ತುವಾರಿಯಲ್ಲಿ ಆಯುಷ್ ವೈದ್ಯರು ಕರ್ತವ್ಯ ನಿರ್ವ ಹಿಸಲಿದ್ದಾರೆ. ಈ ಬಗ್ಗೆ ಶೀಘ್ರ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು. ಎಲ್ಲ ಮಾದರಿಯ ವೈದ್ಯಕೀಯ ಸೇವೆಗಳು ದೊರೆಯಲಿವೆ ಎಂದರು.
ತಾಲ್ಲೂಕು ಆಸ್ಪತ್ರೆಗಳಲ್ಲಿ 5ರಿಂದ 10 ಹಾಸಿಗೆ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ 20 ಹಾಸಿಗೆ ಸಾಮರ್ಥ್ಯದಲ್ಲಿ ಈ ಸೇವೆ ದೊರಕಿಸಲು ವೈದ್ಯರನ್ನೂ ನಿಯೋಜಿಸಲಾಗುವುದು ಎಂದು ತಿಳಿಸಿದರು.
ಆರೋಗ್ಯ ಇಲಾಖೆಯ ನೌಕರರ ವರ್ಗಾವಣೆಯನ್ನು ಕೌನ್ಸಿಲಿಂಗ್ ನಡೆಸಿಯೇ ಮಾಡಲಾಗುವುದು. ಹಸ್ತಕ್ಷೇಪ, ಪ್ರಭಾವ ಬಳಕೆ ಇರುವುದಿಲ್ಲ. ಆಯುಷ್ ವೈದ್ಯರ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.





