ಮೈಸೂರು: ಇಲ್ಲಿನ ಮಾದಹಳ್ಳಿಯಲ್ಲಿ ಇಂದು ಶ್ರೀ ವೀರಭದ್ರೇಶ್ವರ, ಶ್ರೀ ಮಹದೇಶ್ವರ, ಶ್ರೀ ಬಸವೇಶ್ವರಸ್ವಾಮಿ ಮತ್ತು ಶ್ರೀ ಸಿದ್ದಪ್ಪಾಜಿ ದೇವಸ್ಥಾನಗಳ ಜೀರ್ಣೋದ್ಧಾರ, ಅಂಕಸ್ಥಾಪನೆ ಹಾಗೂ ಕಳಶಾರೋಹಣ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ದೇವರ ದರ್ಶನಾಶೀರ್ವಾದ ಪಡೆದರು.
ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯೇಂದ್ರ, ದೇವಾಲಯಗಳ ಜೀರ್ಣೋದ್ಧಾರ ಕಾರ್ಯಕ್ರಮಗಳು ಧರ್ಮ ಪರಂಪರೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಲಿದ್ದು, ಈ ಪರಮ ಪವಿತ್ರ ಕಾರ್ಯಗಳಿಗೆ ಎಲ್ಲರೂ ಕೈಗೊಡಿಸಬೇಕು ಎಂದು ಮನವಿ ಮಾಡಿದರು.
ಸಮಾರಂಭದಲ್ಲಿ ಸುತ್ತೂರು ಶ್ರೀಮಠದ ಶ್ರೀ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವ ಸಿದ್ಧೇಶ್ವರ ಮಹಾಸ್ವಾಮಿಗಳು, ಮಹಾಂತ ಶ್ರೀಗಳು, ಶ್ರೀ ಚನ್ನಬಸವ ಶ್ರೀಗಳು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ ವಿವಿಧ ಮಠಗಳ ಪರಮಪೂಜ್ಯರು, ಹರಗುರು ಚರಮೂರ್ತಿಗಳು ಹಾಗೂ ಸಮಾಜದ ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.





