Mysore
19
overcast clouds
Light
Dark

ಬೆಂಬಲಿಗರು, ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ಮೈತ್ರಿ ಅಭ್ಯರ್ಥಿಗಳು

ಮೈಸೂರು: ರಾಜ್ಯದ 14 ಕ್ಷೇತ್ರಗಳಿಗೆ ಶುಕ್ರವಾರ ಮೊದಲ ಹಂತದ ಮತದಾನ ನಡೆದಿದ್ದು, ಅಭ್ಯರ್ಥಿಗಳು ರಿಲ್ಯಾಕ್ಸ್‌ ಮೂಡ್‌ಗೆ ತೆರಳುತ್ತಿದ್ದಾರೆ. ಇದೇ ವೇಳೆ ಮೈತ್ರಿ ಪಕ್ಷದ ಅಭ್ಯರ್ಥಿಗಳು ತಮ್ಮ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರ ಮೈರ್ತಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ಧನ್ಯವಾದ ತಿಳಿಸಿ ತಮ್ಮ ಎಕ್ಸ್‌ ಖಾತೆಯಲಿ ಪೋಸ್ಟ್‌ ಮಾಡಿದ್ದಾರೆ.

ಈ ಭಾರಿಯ ಚುನಾವಣೆಯುದ್ದಕ್ಕೂ ನನ್ನ ಜೊತೆಗೂಡಿ ನನಗೆ ಬೆಂಬಲ ನೀಡಿದ ಬಿಜೆಪಿ-ಜೆಡಿಎಸ್‌ ಪಕ್ಷದ ಎಲ್ಲಾ ಮುಖಂಡರಿಗೆ, ಕಾರ್ಯಕರ್ತರಿಗೆ ನನ್ನ ಹೃದಯಪೂರ್ವಕ ಕೃತಜ್ಞತೆಗಳು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ತಾವೆಲ್ಲರೂ ಉರಿ ಬಿಸಿಲನ್ನು ಲೆಕ್ಕಿಸದೆ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದೀರಿ. ಇಡೀ ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆಯಲ್ಲಿ ದಾಖಲೆಯಷ್ಟು ಮತದಾನ ಆಗಿರುವುದು ನೀವು ವ್ಯಕ್ತಪಡಿಸಿದ ಅಕ್ಕರೆಯ ಪ್ರತಿಫಲ ಎಂದೇ ನಾನು ಭಾವಿಸಿದ್ದೇನೆ. ನನ್ನ ಪರವಾಗಿ ಹಗಲಿರುಳೆನ್ನದೆ ದುಡಿಮೆ ಮಾಡಿದ ಜಾತ್ಯತೀತ ಜನತಾದಳ ಹಾಗೂ ಭಾರತೀಯ ಜನತಾ ಪಕ್ಷದ ಸಮಸ್ತ ಕಾರ್ಯಕರ್ತರು, ಮುಖಂಡರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಪ್ರತಿಯೊಬ್ಬರ ಹೆಸರನ್ನೂ ಸ್ಮರಿಸುತ್ತಾ ನನ್ನ ಹೃದಯಾಂತರಾಳದ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದು ಮಂಡ್ಯ ಕ್ಷೇತ್ರದ ಮೈರ್ತಿ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.