Mysore
29
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ

ಮೈಸೂರು: ಇಲ್ಲಿನ ಜಿಲ್ಲಾ ಪಂಚಾಯತ್‌ನ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಮುಂಗಾರು, ಪೂರ್ವ ಮುಂಗಾರು ಕೃಷಿ ಚಟುವಟಿಕೆ ಪ್ರಮಾಣದ ಬಗ್ಗೆ ಸಿಎಂ ಮಾಹಿತಿ ಕೇಳಿದರು. ಇದಕ್ಕೆ ಉತ್ತರಿಸಿದ ಜಂಟಿ ಕೃಷಿ ನಿರ್ದೇಶಕರು ತಾಲ್ಲೂಕುವಾರು ಬಿತ್ತನೆ ಮಾಹಿತಿ ನೀಡಿ ವಾಡಿಕೆಗಿಂತ ಕೃಷಿ ಚಟುವಟಿಕೆ ಕಡಿಮೆ ಆಗಿಲ್ಲ ಎಂದರು. ಬಳಿಕ ಸಿಎಂ, “ಜಿಲ್ಲೆಯಲ್ಲಿ ಕೃಷಿಗೆ ಯಾವುದಾದರೂ ರೋಗ ತಗುಲಿದೆಯೇ? ಔಷಧ, ಗೊಬ್ಬರ ರೆಡಿ ಇದೆಯೇ” ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಸದ್ಯಕ್ಕೆ ಜಿಲ್ಲೆಯಲ್ಲಿ ಯಾವುದೇ ಕೃಷಿ ಬೆಳೆಗೆ ರೋಗ ತಗುಲಿಲ್ಲ. ಔಷಧ, ಗೊಬ್ಬರ ಅಗತ್ಯವಿದ್ದಷ್ಟು ಸಂಗ್ರಹ ಇದೆ ಎಂದರು.

3.90 ಲಕ್ಷ ಹೆಕ್ಟೇರ್ ಗುರಿಯಲ್ಲಿ 3.80 ಲಕ್ಷ ಹೆಕ್ಟೇರ್ ಬಿತ್ತನೆ ಆಗಿದೆ. ಬರುವ ದಿನಗಳಲ್ಲಿ ನಿರೀಕ್ಷಿತ ಮಳೆ ಆಗದಿದ್ದರೆ ರಾಗಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕುವ ಅಪಾಯ ಇದೆ. ಆದರೆ ಅದಕ್ಕೆ ಅವಕಾಶ ಇಲ್ಲದಂತೆ ಸಾಧ್ಯ ಇರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಭತ್ತ ಬೆಳೆಗೆ ಯಾವುದೇ ತೊಂದರೆ ಇಲ್ಲ. ಉತ್ತರ ಮಳೆ ಮುಗಿದಿದೆ. ಕೃತ್ತಿಕಾ ಮತ್ತು ರೋಹಿಣಿ ಮಳೆಯಿಂದ ಮೇ ತಿಂಗಳಲ್ಲಿ 255 ಹೆಕ್ಟೇರ್ ನಷ್ಟು ಬೆಳೆ ನಷ್ಟ ಆಗಿದೆ ಎಂದು ತಾಲ್ಲೂಕಾವಾರು ಹಾನಿ ಕುರಿತು ಕೃಷಿ ಅಧಿಕಾರಿಗಳು ವಿವರಿಸಿದರು. ತಂಬಾಕು ಸೇರಿ ಬೆಳೆ ನಷ್ಟಕ್ಕೆ ಪರಿಹಾರ ನೀಡಲಾಗಿದೆ ಎಂದರು.

ಈ ವೇಳೆ ಮುಖ್ಯಮಂತ್ರಿಗಳು, “ಮಳೆ ಹಾನಿಯಿಂದ ಆದ ಜೀವ ಹಾನಿ ಮತ್ತು ಮನೆ ಹಾನಿಗಳಿಗೆ ಪರಿಹಾರ ನೀಡಲಾಗಿದೆಯೇ ಎಂದು ಪ್ರಶ್ನಿಸಿದರು. ಉತ್ತರಿಸಿದ ಜಿಲ್ಲಾಧಿಕಾರಿಗಳು, “ಒಂದು ಜೀವ ಹಾನಿ ಆಗಿತ್ತು. ಇದನ್ನೂ ಸೇರಿಸಿ ಹಾನಿ ಮನೆಗಳಿಗೆ ಪರಿಹಾರ ಸಂಪೂರ್ಣ ನೀಡಲಾಗಿದೆ” ಎಂದರು.

ಕಳೆದ ವರ್ಷ ಎಷ್ಟು ಬೆಳೆ ಹಾನಿ ಆಗಿತ್ತು, ಎಷ್ಟು ಪರಿಹಾರ ನೀಡಿದ್ದೀರಿ ಎಂದು ಸಿಎಂ ಮರು ಪ್ರಶ್ನೆ ಹಾಕಿದರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿಗಳು 95000 ಹೆಕ್ಟೇರ್ ಬೆಳೆ ಹಾನಿಗೆ 63 ಕೋಟಿ ರೂಪಾಯಿ ಪರಿಹಾರ ನೀಡಿದ್ದೇವೆ ಎಂದರು.

ಮಾಧ್ಯಮಗಳಲ್ಲಿ ವರದಿ ಆಗಿರುವ ರೈತರ ಸಾವು ಮತ್ತು ಬೆಳೆ ಹಾನಿ ವರದಿಗಳನು ನಿರ್ಲಕ್ಷಿಸಬೇಡಿ. ವರದಿಗಳ ಸತ್ಯಾಸತ್ಯತೆ ಪರಿಶೀಲಿಸಿ ಪರಿಹಾರ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಾಲದಿಂದ 31 ರೈತರು ಆತ್ಮಹತ್ಯೆ ಆಗಿದೆ. ಸಮಿತಿ ಮುಂದೆ ಮಂಡಿಸಿದ ಪ್ರಕರಣ 29, ತಿರಸ್ಕೃತ 8, ಎಫ್ಎಸ್ಎಲ್ ಬಾಕಿ-2 ಉಳಿದ ಎಲ್ಲಕ್ಕೂ ಪರಿಹಾರ ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ತಿರಸ್ಕೃತಗೊಂಡ ಪ್ರಕರಣಗಳ ಕುರಿತು ಸಿಎಂ ಹೆಚ್ಚಿನ ವಿವರಣೆ ಕೇಳಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು-ಕೆಲವರಿಗೆ ಜಮೀನು ಇರಲಿಲ್ಲ. ಒಬ್ಬರು ತಾಯಿ ಹೆಸರಲ್ಲಿ ಸಾಲ ಪಡೆದು ನಾಲ್ಕು ದಿನದಲ್ಲಿ ಪಿರಿಯಾಪಟ್ಟಣದಲ್ಲಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗೆ ಸಾಲ ವಸೂಲಾತಿ ಬಗ್ಗೆ ಒತ್ತಡವೂ ಇರಲಿಲ್ಲ. ಹೀಗಾಗಿ ಈ ಪ್ರಕರಣವನ್ನು ತಿರಸ್ಕರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕರಣವನ್ನು ವಿವರಿಸಿದರು.

ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಶುಸಂಗೋಪನೆ ಸಚಿವರಾದ ವೆಂಕಟೇಶ್ ಅವರು ಈ ಪ್ರಕರಣವನ್ನೂ ಪರಿಗಣಿಸಿ ಪರಿಹಾರ ಕೊಡಿ ಎಂದರು.

ಸಿದ್ದರಾಮನಹುಂಡಿಯಲ್ಲಿ ಯಾರೂ ರೇಷ್ಮೆ ಬೆಳೆಯುತ್ತಿಲ್ಲ ಏಕೆ? ಸಿಎಂ ಪ್ರಶ್ನೆ

ಒಂದು ಕಾಲದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಹೆಚ್ಚು ಬೆಳೆಯುತ್ತಿದ್ದರು. ಬಹಳಷ್ಟು ರೈತರು ಇದರ ಮೇಲೆ ಅವಲಂಭಿತರಾಗಿದ್ದರು. ಈಗ ನಮ್ಮ ಸಿದ್ದರಾಮನಹುಂಡಿಯಲ್ಲಿ ಯಾರೂ ರೇಷ್ಮೆ ಬೆಳೆಯುತ್ತಿಲ್ಲ ಏಕೆ ? ರೇಷ್ಮೆ ಬೆಳೆಗಾರರು ಏಕೆ ಕಡಿಮೆ ಆಗಿದ್ದಾರೆ ಎಂದು ಸಿಎಂ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿ ಹೌದು ಸಾರ್, ಸಿದ್ದರಾಮನಹುಂಡಿಯಲ್ಲಿ ಕೇವಲ ಇಬ್ಬರು ಮಾತ್ರ ರೇಷ್ಮೆ ಬೆಳೆಯುತ್ತಿದ್ದಾರೆ ಎಂದು ಉತ್ತರಿಸಿದರು. ಈಗ ರೇಷ್ಮೆ ಬೆಳೆ ಪ್ರದೇಶ ವಿಸ್ತರಿಸಲು ಏನು ಕ್ರಮ ಕೈಗೊಂಡಿದ್ದೀರಿ ಎಂದು ಸಿಎಂ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಅಧಿಕಾರಿ ನಾವು ಇರುವ ಸಿಬ್ಬಂದಿಯಲ್ಲೇ ೧೦ ಹಳ್ಳಿ ಆಯ್ಕೆ ಮಾಡಿಕೊಂಡು ವಿಸ್ತರಣೆಗೆ ಕೆಲಸ ಮಾಡುತ್ತಿದ್ದೇವೆ. ನಾವೇ ಗೂಡುಗಳನ್ನು ನಿರ್ಮಿಸಿ ಕೊಟ್ಟು, ಪ್ರೋತ್ಸಾಹ ನೀಡುತ್ತಿದ್ದೇವೆ ಎಂದು ವಿವರಿಸಿದರು.

ಈ ವೇಳೆ ಪಶು ಸಂಗೋಪನಾ ಸಚಿವರು, ಸಿಬ್ಬಂದಿ ಕೊರತೆ ಇದೆ ಎನ್ನುವ ಮಾಹಿತಿ ನೀಡಿದರು. ಈ ಮಾತನ್ನು ಒಪ್ಪದ ಸಿಎಂ, ರೇಷ್ಮೆ ಕೃಷಿ ಕುಸಿಯಲು ಇದೊಂದೇ ಕಾರಣ ಅಲ್ಲ. ಬೇರೆ ಬೇರೆ ಕಾರಣಗಳಿವೆ. ಅಧಿಕಾರಿಗಳು ಅವನ್ನೆಲ್ಲಾ ಗುರುತು ಮಾಡಿ ಪರಿಹಾರ ರೂಪಿಸಬೇಕು ಎಂದರು.

Tags:
error: Content is protected !!