Mysore
23
overcast clouds
Light
Dark

ಶಾಲಾ ಪಠ್ಯಪುಸ್ತಕದಲ್ಲಿ ಯಾವುದೇ ಮುಖ್ಯ ಬದಲಾವಣೆಯಿಲ್ಲ: ಮಧು ಬಂಗಾರಪ್ಪ

ಮೈಸೂರು: ಶಾಲಾ ಶೈಕ್ಷಣಿಕ ಪುಸ್ತಕದಲ್ಲಿ ಈ ಬಾರಿ ಯಾವುದೇ ಮುಖ್ಯ ಬದಲಾವಣೆಗಳಿಲ್ಲ. ಕಳೆದ ವರ್ಷವೇ ಶಾಲಾ ಪುಸ್ತಕಗಳನ್ನು ಪರಿಷ್ಕರಣೆ ಮಾಡಿದ್ದು, ಕೆಲವು ಪದ ಅಥವಾ ವಾಕ್ಯಗಳಷ್ಟೆ ಬದಲಾವಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು.

ನಗರದ ಕಾಂಗ್ರೆಸ್‌ ಭವದಲ್ಲಿಂದು (ಮೇ.28) ಸಿದ್ದಿಗೋಷ್ಠಿ ನಡೆಸಿ ಮಾತನಾಡಿ, ಶೇ.95 ರಷ್ಟು ಪರಿಷ್ಕೃತ ಪುಸ್ತಕಗಳು ಈಗಾಗಲೇ ಶಾಲಾ ಮಕ್ಕಳ ಕೈಗೆ ಸೇರಿದ್ದು, ಪರಿಷ್ಕೃತ ಪುಸ್ತಕಗಳು ಇಲಾಖಾ ವೆಬ್‌ಸೈಟ್‌ನಲ್ಲಿ ಲಭ್ಯವಿದೆ ಎಂದು ವಿವರಿಸಿದರು.

ಮಕ್ಕಳು ನಿರಂತರವಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ಶೂ ವಿತರಿಸಲು ಶಾಲಾಭಿವೃದ್ಧಿ ಸಮಿತಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ಕೋವಿಡ್‌ ಬಳಿಕ ಯಾವುದೇ ಮಕ್ಕಳಿಗೆ ಈವರೆಗೆ ಸೈಕಲ್‌ ವಿತರಿಸಲಾಗಿಲ್ಲ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಜತೆಗೆ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವವರ ವೇತನ ಹೆಚ್ಚಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿಗಳಿದ್ದು, 2 ಗ್ರಾಮ ಪಂಚಾಯಿತಿಗಳಿಗೆ ಒಂದಂತೆ ಒಟ್ಟು 3000 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಸ್ಥಾಪಿಸಲಾಗುವುದು. 600 ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಸರ್ಕಾರಿ ಶಾಲೆಗಳಲ್ಲಿಯೂ ಸಹಾ ವಿಶೇಷ ಬೇಸಿಗೆ ಶಿಬಿರ ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.