ಮೈಸೂರು: ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಯುಕೇಶ್ ಕುಮಾರ್ ಅವರಿಂದು ಮೈಸೂರು ತಾಲ್ಲೂಕಿನ ದೊಡ್ಡ ಹೆಜ್ಜೂರು, ಕಿರಂಗೂರು ಹಾಗೂ ಉಮ್ಮತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಾಡಿ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆ ಆಲಿಸಿದರು.
ಮೊದಲಿಗೆ ದೊಡ್ಡ ಹೆಜ್ಜೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು, ಇಂದಿಗೂ ಘನ ತ್ಯಾಜ್ಯ ವಿಲೇವಾರಿ ಘಟಕ ಕಾರ್ಯನಿರ್ವಹಿಸದ ಬಗ್ಗೆ ಪ್ರಶ್ನೆ ಮಾಡಿದರು. ಜೊತೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬೇಡಿಕೆ ಮತ್ತು ವಸೂಲಾತಿ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡರು.
ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ 15ನೇ ಹಣಕಾಸು ಯೋಜನೆಯಡಿ ನಿರ್ಮಾಣಗೊಂಡಿರುವ ಶೌಚಾಲಯ ಕಾಮಗಾರಿ ಪರಿಶೀಲನೆ ಮಾಡಿದರು. ಜೊತೆಗೆ ಶಾಲೆಯಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸಿರುವುದರ ಕುರಿತು ಮಾಹಿತಿ ಪಡೆದರು.
ಬಳಿಕ ಕಿರಂಗೂರಿನ ಶಂಕರಪುರ ಹಾಡಿಗೆ ತೆರಳಿ ಅಲ್ಲಿನ ಜನರ ಸಮಸ್ಯೆಯನ್ನು ಆಲಿಸಿದರು. ಈ ವೇಳೆ ಅಲ್ಲಿನ ಸ್ಥಳೀಯರು ವಸತಿ ಕುರಿತು ಬೇಡಿಕೆ ಸಲ್ಲಿಸಿದ್ದು, ಒಂದೇ ಮನೆಯಲ್ಲಿ ಒಂದೆರಡು ಕುಟುಂಬಗಳು ಹೆಚ್ಚಾಗಿ ವಾಸವಿದ್ದು, ನಿವೇಶನ ವಂಚಿತರಾದವರಿಗೆ ಸೂಕ್ತ ವಸತಿ ಕಲ್ಪಿಸುವಂತೆ ಮನವಿ ಸಲ್ಲಿಸಿದರು.
ಬಳಿಕ ಉಮ್ಮತ್ತೂರು ಗ್ರಾಮ ಪಂಚಾಯಿತಿಯ ನಲ್ಲೂರು ಪಾಲ ಆಶ್ರಮ ಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಮಾಡಿದ್ದು, ಇಲ್ಲಿನ ಹಂಗಾಮಿ ಶಿಕ್ಷಕರಿಗೆ ನಿಗಧಿತ ಸಮಯಕ್ಕೆ ವೇತನ ಪಾವತಿಯಾಗದಿರುವ ಕುರಿತ ಸಮಸ್ಯೆ ಆಲಿಸಿದರು.





