Mysore
21
broken clouds

Social Media

ಶನಿವಾರ, 14 ಫೆಬ್ರವರಿ 2026
Light
Dark

ಪ್ರೀತಿ ಮತ್ತು ಬದ್ಧತೆ ಇರುವವರಿಗೆ ಮಾತ್ರ ವಿಕಲಚೇತನ ಮಕ್ಕಳನ್ನು ನೋಡಿಕೊಳ್ಳಲು ಸಾಧ್ಯ : ಡಾ. ಹೆಚ್ ಸಿ ಮಹದೇವಪ್ಪ

ಮೈಸೂರು: ವಿಕಲಚೇತನ ಮಕ್ಕಳನ್ನು ನೋಡಿಕೊಳ್ಳುವುದು ಸುಲಭದ ಕೆಲಸ ಅಲ್ಲ. ಅವರನ್ನು ನೋಡಿಕೊಳ್ಳಲು ಪ್ರೀತಿ ಹಾಗೂ ಬಹಳ ಬದ್ಧತೆ ಇರಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಇಂದು, ಮೈಸೂರು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಯುವ ಸಬಲೀಕರಣ- ಕ್ರೀಡಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮೈಸೂರು ಜಿಲ್ಲೆಯ ವಿಕಲಚೇತನರ ಕ್ರೀಡಾಕೂಟ 2023-24 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ವಿಕಲಚೇತನರ ಕ್ರೀಡಾಕೂಟ ನಡೆಸಲು ಸರ್ಕಾರ ಪ್ರತಿ ಜಿಲ್ಲೆಗೂ 50 ಸಾವಿರ ಪ್ರೋತ್ಸಾಹ ಧನ ನೀಡುತ್ತಿದೆ. ಕಳೆದ 25 ವರ್ಷಗಳಿಂದ ಸರ್ಕಾರ ವಿಕಲಚೇತನ ಮಕ್ಕಳ ಕ್ರೀಡಾಕೂಟವನ್ನು ನಡೆಸುತ್ತಾ ಬಂದಿದೆ. ಈ ಹಿಂದೆ ಕೆಲವು ಸಂಘ ಸಂಸ್ಥೆಗಳು ಇದನ್ನು ನಡೆಸುತ್ತಿದ್ದವು. ಮೈಸೂರು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಈ ಕ್ರೀಡಾಕೂಟ ಹಲವು ಬುದ್ಧಿಮಾಂದ್ಯ ಹಾಗೂ ವಿಕಲ ಚೇತನ ಮಕ್ಕಳ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಇಂತಹ ಮಕ್ಕಳನ್ನು ಪ್ರೀತಿಸುವ ಹಾಗೂ ಕ್ರೀಡೆಯ ಮೂಲಕ ರಂಜಿಸುವ ಉತ್ತಮ ಕೆಲಸವಾಗುತ್ತಿದೆ ಎಂದರು.

ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ವೆಂಕಟೇಶ್ ಮಾತನಾಡಿ, ವಿಶೇಷ ಚೇತನ ಮಕ್ಕಳು ಕೂಡ ಅವರಲ್ಲಿರುವ ಸಾಮರ್ಥ್ಯವನ್ನು ಸಾಬೀತುಪಡಿಸುವ ಕೆಲಸ ಈ ಕ್ರೀಡಾ ಸ್ಪರ್ಧೆಯಲ್ಲಿ ಆಗಲಿದೆ. ಸೋಲು ಗೆಲುವಿನ ಪ್ರಶ್ನೆ ಬೇಡ. ಭಾಗವಹಿಸುವಿಕೆ ಬಹಳಾ ಮುಖ್ಯ. ಗೆಲುವಿಗೆ ಅವಕಾಶಗಳು ಮುಂದೆ ಬರುತ್ತವೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಜ್ಯೋತಿ ಕೆ.ವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಬಿ ಬಸವರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಭಾಸ್ಕರ್ ನಾಯಕ್ ಸೇರಿದಂತೆ ಇತರರು ಭಾಗವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!