ಚರಂಡಿಯಿಲ್ಲದೇ ರಸ್ತೆ ಮೇಲೆ ಹರಿಯುತ್ತಿರುವ ಕೊಳಚೆ ನೀರು; ಪಂಚಾಯಿತಿ ವಿರುದ್ಧ ಸ್ಥಳೀಯರ ಆಕ್ರೋಶ!
-ಕೆ.ಬಿ.ಶಂಶುದ್ಧೀನ್
ಕುಶಾಲನಗರ: ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗುಂಡೂರಾವ್ ಬಡಾವಣೆಯ ನಿವಾಸಿಗಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ಚರಂಡಿ ವ್ಯವಸ್ಥೆಯಿಲ್ಲದೆ ಕೊಳಚೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದೆ. ಕೂಡಲೇ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಕುಶಾಲನಗರ ಪಟ್ಟಣ ಪಂಚಾಯಿತಿಯ ೧೫ನೇ ವಾರ್ಡ್ನ ಜಾತ್ರಾ ಮೈದಾನದ ಬಳಿ ಚರಂಡಿ ವ್ಯವಸ್ಥೆಯಿಲ್ಲದೆ, ತ್ಯಾಜ್ಯ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಇದರಿಂದ ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ತೊಡಕುಂಟಾದರೆ, ಮತ್ತೊಂದೆಡೆ ತ್ಯಾಜ್ಯ ನೀರಿನಿಂದ ರಸ್ತೆಯಲ್ಲಿ ಮೂಗು ಮುಚ್ಚಿ ತೆರಳಬೇಕಾದ ದುಸ್ಥಿತಿ ಒದಗಿಬಂದಿದೆ. ಅಕ್ಕಪಕ್ಕದ ಮನೆಯವರಿಗೆ ವಾಸಿಸಲು ಸಾಧ್ಯವಿಲ್ಲದಂತಾಗಿದೆ. ಮನೆಯಲ್ಲಿ ಮಕ್ಕಳು, ಬಾಣಂತಿಯರು ಹಾಗೂ ವೃದ್ಧರು ವಾಸವಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಸ್ಥಳೀಯರಿದ್ದಾರೆ. ರಸ್ತೆ ಬದಿಯಲ್ಲಿ ಚರಂಡಿ ನೀರು ನಿಲ್ಲಲು ಹೊಂಡ ನಿರ್ಮಿಸಿದ್ದು, ಕೊಳಚೆ ನೀರು ಸಂಗ್ರಹವಾಗಿ ಸೊಳ್ಳೆಗಳು ಹಾಗೂ ದುರ್ವಾಸನೆಯಿಂದ ಬದುಕುವಂತಾಗಿದೆ.

ಕನಿಷ್ಠ ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಾಗದಿದ್ದರೆ ಪಂಚಾಯಿತಿ ಹಾಗೂ ಜನಪ್ರತಿನಿಧಿಗಳು ಯಾಕೆ ಬೇಕು ಎಂದು ಪ್ರಶ್ನಿಸಿರುವ ಸ್ಥಳೀಯರು, ಜನಪ್ರತಿನಿಧಿಗಳಲ್ಲಿ ಆಸಕ್ತಿಯ ಕೊರತೆ ಎದ್ದು ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಂ.ಜಿ.ಎಂ. ಕಾಲೇಜು ಹಾಗೂ ಬೈಚನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ನೂರಾರು ವಿದ್ಯಾರ್ಥಿಗಳು ಈ ರಸ್ತೆ ಮೂಲಕವೇ ಹೋಗುತ್ತಾರೆ. ಈ ಸಂದರ್ಭದಲ್ಲಿ ವಾಹನಗಳು ಸಂಚರಿಸುವಾಗ ಕೊಳಚೆ ನೀರು ಸಮವಸ್ತ್ರಕ್ಕೆ ತಗುಲಿ ವಿದ್ಯಾರ್ಥಿಗಳು ಮನೆಗೆ ಹಿಂದಿರುಗಿರುವ ನಿದರ್ಶನಗಳಿವೆ.\
ಪ್ರತಿಭಟನೆ ನಡೆಸಿದ್ದರೂ ಪ್ರತಿಫಲ ಶೂನ್ಯ: ಚರಂಡಿ ವ್ಯವಸ್ಥೆಯಿಲ್ಲದೆ ಇಲ್ಲಿನ ಜನರಿಗೆ ತೊಂದರೆಯಾಗುತ್ತಿರುವ ಬಗ್ಗೆ ಸ್ಥಳೀಯರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದಾರೆ. ಆದರೂ ಯಾವುದೇ ಪ್ರೋಂಜನವಾಗಿಲ್ಲ. ರಸ್ತೆ ಬದಿಯಲ್ಲಿ ಕೊಳಚೆ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡಲಿದ್ದು, ಕೂಡಲೇ ಇದರ ಬಗ್ಗೆ ಸಂಬಂಧಪಟ್ಟ ಕುಶಾಲನಗರ ಪಟ್ಟಣ ಪಂಚಾಯಿತಿ ಗಮನಹರಿಸಬೇಕು ಎಂದು ಸ್ಥಳೀಯ ನಿವಾಸಿಗಳು ಪಟ್ಟು ಹಿಡಿದಿದ್ದಾರೆ.
ಒಟ್ಟಿನಲ್ಲಿ ಗುಂಡೂರಾವ್ ಬಡಾವಣೆಯ ನಿವಾಸಿಗಳು, ಹಲವು ವರ್ಷಗಳಿಂದ ಚರಂಡಿ ವ್ಯವಸ್ಥೆಯಿಲ್ಲದೆ ಸಮಸ್ಯೆಯನ್ನು ಅನುಭವಿಸುತ್ತಾ ಬಂದಿದ್ದು, ಆದಷ್ಟು ಬೇಗನೇ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿಕೊಡಬೇಕಾಗಿದೆ.
ಗುಂಡೂರಾವ್ ಬಡಾವಣೆಯಲ್ಲಿ ಕೊಳಚೆ ನೀರು ರಸ್ತೆಯ ಮೇಲೆ ಹರಿಯುತ್ತಿರುವ ಬಗ್ಗೆ ಸ್ಥಳೀಯ ವಾರ್ಡ್ ಸದಸ್ಯರ ಬಳಿ ಮಾತುಕತೆ ನಡೆಸಲಾಗಿದೆ. ಈ ಬಗ್ಗೆ ಅಧಿಕಾರಿಗೊಂದಿಗೆ ಚರ್ಚಿಸಿ, ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸಿಕೊಡಲಾಗುವುದು.
– ಜಯವರ್ಧನ್, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷರು.
ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನದ ರಸ್ತೆಯಲ್ಲಿ ಚರಂಡಿಯ ಕೊಳಚೆ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಇದರ ಬಗ್ಗೆ ಸ್ಥಳೀಯ ಪ್ರತಿನಿಧಿಗಳಾಗಲಿ, ಪಂಚಾಯಿತಿಯಾಗಲಿ ಕ್ರಮ ಕೈಗೊಳ್ಳದಿರುವುದು ಖಂಡನೀಯ. ಕೂಡಲೇ ಇದರ ಬಗ್ಗೆ ಗಮನಹರಿಸಬೇಕು.
– ಆದಂ, ಡಾ.ಬಿ.ಆರ್.ಅಂಬೇಡ್ಕರ್ ಜನಪರ ವೇದಿಕೆ ತಾಲ್ಲೂಕು ಅಧ್ಯಕ್ಷರು.





