ಜಿಲ್ಲೆಗಳು

ಸ್ಯಾಂಟ್ರೊ ರವಿ ಪ್ರಕರಣ: ಮಾಹಿತಿ ಕಲೆಹಾಕಿದ ಎಡಿಜಿಪಿ

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮೂರುವರೆ ತಾಸು ಸಭೆ ನಡೆಸಿದ ಅಲೋಕ್ ಕುಮಾರ್

ಮೈಸೂರು: ಸ್ಯಾಂಟ್ರೊ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುಮಾರು ಮೂರುವರೆ ತಾಸು ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.

ಹೆಚ್ಚಿನ ವಿಚಾರಣೆ ಸಂಬಂಧ ಮಂಗಳವಾರ ನಗರಕ್ಕೆ ಭೇಟಿ ನೀಡಿದ ಅವರು, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಧ್ಯಾಹ್ನ ಮೂರುವರೆ ತಾಸು ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಮತ್ತು ಪರಶು, ಸಂತ್ರಸ್ತ ಮಹಿಳೆ, ಕುಟುಂಬ ಸದಸ್ಯರಿಂದ ದಾಖಲೆಗಳ ಸಮೇತ ಮಾಹಿತಿ ಪಡೆದರು.
ಸ್ಯಾಂಟ್ರೊ ರವಿ ವಿರುದ್ಧ ೧೯೮೬ ರಿಂದ ೨೦೨೩ರ ಜ.೨ರವರೆಗೆ ಆತನ ವಿರುದ್ಧ ದಾಖಲಾದ ಪ್ರಕರಣಗಳ ಮಾಹಿತಿ, ಆತನ ಹಣಕಾಸು ಸಂಸ್ಥೆಗಳ ಮಾಹಿತಿ, ಆಸ್ತಿ ದಾಖಲೆ, ಪ್ರಭಾವಿಗಳೊಂದಿಗೆ ಆತ ತೆಗೆಸಿಕೊಂಡಿರುವ ಭಾವಚಿತ್ರಗಳು, ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಆತನ ಪಾತ್ರದ ಕುರಿತಂತೆ ೧೪೦ ಪುಟಗಳ ಸಮಗ್ರ ದಾಖಲೆಗಳನ್ನು ಸ್ಟ್ಯಾನ್ಲಿ, ಪರಶು ಅವರು ಎಡಿಜಿಪಿಗೆ ಸಲ್ಲಿಸಿದರು.
ಆರೋಪಿಯು ಸಮಾಜದ ಸ್ವಾಸ್ಥ್ಯಕೆಡಿಸುತ್ತಿದ್ದು, ಸ್ಯಾಂಟ್ರೊ ರವಿಯೊಂದಿಗಿನ ಒಡನಾಟದಿಂದ ಪೊಲೀಸ್ ಇಲಾಖೆಯ ಹಿರಿಯ- ಕಿರಿಯ ಅಧಿಕಾರಿಗಳು ಕಳಂಕಿತರಾಗಿದ್ದಾರೆ. ಅವರನ್ನೂ ತನಿಖೆಗೆ ಒಳಪಡಿಸಬೇಕು ಎಂದು ಒಡನಾಡಿ ಸಂಸ್ಥೆಯ ವತಿಯಿಂದ ಆಗ್ರಹಿಸಲಾಯಿತು.

ಈ ವೇಳೆ ಸಂತ್ರಸ್ತೆಯು ‘ಇದುವರೆಗೂ ಆರೋಪಿಯನ್ನು ಬಂಧಿಸಿಲ್ಲವೇಕೆ? ಇದರಿಂದ ನನಗೆ ಅನ್ಯಾಯವಾಗಿದೆ’ ಎಂದು ಅಳಲು ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಎಡಿಜಿಪಿ ಅಲೋಕ್ ಕುಮಾರ್, ಆರೋಪಿ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ಈಗಾಗಲೇ ವಿಶೇಷ ತಂಡ ರಚಿಸಿ, ಆತನ ಚಲನವಲನದ ಮೇಲೆ ನಿಗಾಯಿಡಲಾಗಿದೆ. ಆದಷ್ಟು ಶೀಘ್ರ ಬಂಧಿಸಲಾಗುವುದು’ ಎಂದು ಸಂತ್ರಸ್ತೆಗೆ ಭರವಸೆ ನೀಡಿದರು.

ಅಲ್ಲದೇ, ಸ್ಯಾಂಟ್ರೊ ರವಿಗೆ ಸಹಕರಿಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಪ್ರವೀಣ್, ಸುಳ್ಳುಪಾತ್ರ ಹಾಗೂ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿ ಸಂತ್ರಸ್ತೆ, ಆಕೆಯ ಸಹೋದರಿಯನ್ನು ಬಂಧಿಸಿದ್ದಕ್ಕೆ ಪ್ರತಿಯಾಗಿ ಪೊಲೀಸ್ ಅಧಿಕಾರಿಗಳಿಗೆ ಗೂಗಲ್ ಪೇ ಮೂಲಕ ಹಣ ಪಾವತಿಸಿದ ದಾಖಲೆಗಳನ್ನು ಸಂತ್ರಸ್ತೆ ಸಲ್ಲಿಸಿದರು.
ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಡಿಸಿಪಿ ಗೀತಾ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಎಸಿಪಿ ಶಿವಶಂಕರ್, ವಿಜಯ ನಗರ ಠಾಣೆ ಇನ್ಸ್‌ಪೆಕ್ಟರ್ ರವಿಶಂಕರ್ ಹಾಜರಿದ್ದರು.


ನಗರ ಪೊಲೀಸ್ ಆಯುಕ್ತರಿಗೆ ಸೂಚನೆ: ನಗರ ಪೊಲೀಸ್ ಆಯುಕ್ತ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಎಡಿಜಿಪಿ ಅಲೋಕ್ ಕುಮಾರ್ ಅವರು, ಒಡನಾಡಿ ಸಂಸ್ಥೆಯ ನಿರ್ದೇಶಕರು, ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರಿಂದ ಹಲವು ಮಾಹಿತಿಯನ್ನು ಪಡೆದುಕೊಂಡರು. ಸ್ಯಾಂಟ್ರೊ ರವಿ ಪ್ರಕರಣದ ಇಂಚಿಂಚೂ ತನಿಖೆಯಾಗಬೇಕು. ಆತನ ವಿರುದ್ಧ ದಾಖಲಾಗಿರುವ ಪ್ರಕರಣ, ಹಣಕಾಸು ವ್ಯವಹಾರಗಳು, ಅತ್ಯಾಚಾರ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಅವರಿಗೆ ಸಭೆಯಲ್ಲಿಯೇ ಸೂಚನೆ ನೀಡಿದರು.

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

4 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

5 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

6 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

6 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

7 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

7 hours ago