ಹನೂರು : ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಮಲೆ ಮಾದೇಶ್ವರ ಬೆಟ್ಟದ ಮಾದಪ್ಪನ ದೇವಸ್ಥಾನದಲ್ಲಿ ಅಮಾವಾಸ್ಯೆ ಹಿನ್ನೆಲೆ ವಿಶೇಷ ಪೂಜೆ ಸಂಪ್ರದಾಯದಂತೆ ಜರುಗಿದವು.
ಅಮಾವಾಸ್ಯೆ ಅಂಗವಾಗಿ ದೇಗುಲದ ಗರ್ಭಗುಡಿ ಸೇರಿದಂತೆ ಸುತ್ತ ಮುತ್ತಲಿನ ಆವರಣವನ್ನು ಸಿಂಗರಿಸಲಾಗಿತ್ತು. ಬೆಳಗಿನ ಜಾವ ದೇವಾಲಯದ ಅರ್ಚಕರಿಂದ ಸ್ವಾಮಿಗೆ ಅಭಿಷೇಕ ಬಿಲ್ವಾರ್ಚನೆಯನ್ನು ನೆರವೇರಿಸಿ ಮಹಾಮಂಗಳಾರತಿಯನ್ನು ಮಾಡುವ ಮೂಲಕ ಅಮಾವಾಸ್ಯೆ ಪೂಜೆಯನ್ನು ನೆರವೇರಿಸಲಾಯಿತು.
ಹುಲಿವಾಹನ, ರುದ್ರಾಕ್ಷಿ ವಾಹನ ಹಾಗೂ ಬಸವ ವಾಹನವನ್ನು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿಸುವುದರ ಮೂಲಕ ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು. ಉತ್ಸವದ ವೇಳೆ ಹರಕೆ ಹೊತ್ತ ಭಕ್ತಾದಿಗಳು ತಾವು ಬೆಳೆದಿದ್ದ ದವಸ ಧಾನ್ಯ ಸೇರಿದಂತೆ ಚಿಲ್ಲರೆ ನಾಣ್ಯವನ್ನು ಎಸೆಯುವುದರ ಮೂಲಕ ದಂಡಿನ ಕೋಲನ್ನು ಹೊತ್ತು ತಮ್ಮ ಹರಕೆ ಕಾಣಿಕೆ ಸಮರ್ಪಿಸಿದರು.
ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ ಭಕ್ತಾದಿಗಳು ಉರುಳು ಸೇವೆ ಮುಡಿಸೇವೆ ಪಂಜಿನ ಸೇವೆ ಕೈಗೊಳ್ಳುವುದರ ಮೂಲಕ ತಮ್ಮ ಹರಕೆ ತೀರಿಸಿದರು. ವಿವಿಧ ಕಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳಿಗೆ ಪ್ರಾಧಿಕಾರದ ವತಿಯಿಂದ ದಾಸೋಹ ಏರ್ಪಡಿಸಲಾಗಿತ್ತು.