ಮಂಡ್ಯ: ಹಣ ದುರುಪಯೋಗ ಹಾಗೂ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಂಡುವಾಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಎಸ್.ಸಿದ್ದರಾಜು ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರಾಮ ಪಂಚಾಯಿತಿ ಕಟ್ಟಡದ ಒತ್ತುವರಿಯಿಂದ ಗ್ರಾಮ ಪಂಚಾಯಿತಿಗೆ ಸ್ವೀಕೃತವಾಗಿರುವ ಮೊತ್ತವನ್ನು ಪ್ರಾಧಿಕಾರದ ಅನುಮತಿ ಪಡೆಯದೆ ನಿಯಮಬಾಹಿರವಾಗಿ ವೆಚ್ಚ ಮಾಡಿದ್ದರು. ಗ್ರಾಮ ಪಂಚಾಯಿತಿ ನಿಧಿ-೨ರ ಖಾತೆಯಿಂದ ವೆಚ್ಚ ಭರಿಸಿರುವುದಕ್ಕೆ ಅಗತ್ಯ ದಾಖಲಾತಿ ಸಲ್ಲಿಸದಿರುವುದು ಹಾಗೂ ಬಿಡುಗಡೆಗೊಂಡ ಸದಸ್ಯರ ಗೌರವಧನ ಅನುದಾನ ಮೊತ್ತವನ್ನು ಇತರೆ ಉದ್ದೇಶಗಳಿಗೆ ಬಳಸಿಕೊಂಡಿದ್ದಾರೆ.
೧೫ನೇ ಹಣಕಾಸು ಯೋಜನೆಯ ಅನುಷ್ಠಾನದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ನಿಯಮಬಾಹಿರವಾಗಿ ವೆಚ್ಚ ಭರಿಸಿರುವುದು ಹಾಗೂ ಗ್ರಾಮ ಪಂಚಾಯಿತಿ ಅನುದಾನಗಳನ್ನು ಕೆಟಿಪಿಪಿ ನಿಯಮಗಳನ್ನು ಉಲ್ಲಂಘಿಸಿ ನಿಯಮಬಾಹಿರವಾಗಿ ವೆಚ್ಚ ಭರಿಸಿರುವ ಬಗ್ಗೆ ಆರೋಪ ಸಾಬೀತಾಗಿದೆ. ಪಂಚಾಯಿತಿಯಲ್ಲಿ ಸುಮಾರು ೩೯ ಲಕ್ಷದಷ್ಟು ಅವ್ಯವಹಾರ ನಡೆಸಿದ್ದಾರೆ ಎಂದು ಸದಸ್ಯರು ಆರೋಪಿಸಿ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ದೂರು ಸಲ್ಲಿಸಿದ್ದರು.
ಕರ್ತವ್ಯಲೋಪವೆಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ೧೯೫೭ರ ನಿಯಮ ೧೦(೧) ರಡಿ ಪ್ರÀದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಪಿಡಿಒ ಸಿದ್ದರಾಜು ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಈ ಹಿಂದೆ ಮದ್ದೂರು ತಾಲ್ಲೂಕಿನ ಚಾಮನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎ.ಎಸ್.ಸಿದ್ದರಾಜು ಅವರು ಲಂಚ ಸ್ವೀಕರಿಸುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹದಳದ ಬಲೆಗೆ ಸಿಕ್ಕಿ ಬಿದ್ದಿದ್ದು, ಕರ್ತವ್ಯದಿಂದ ಅಮಾನತುಗೊಂಡಿದ್ದರು.





