Mysore
31
overcast clouds

Social Media

ಶನಿವಾರ, 20 ಜೂನ್ 2026
Light
Dark

ಟಿಪ್ಪು ನಿಜ ಕನಸುಗಳುʼ ಪುಸ್ತಕ ಮಾರಾಟ, ಹಂಚಿಕೆ ಸರಾಗ: ತಾತ್ಕಾಲಿಕ ಪ್ರತಿಬಂಧಕಾದೇಶ ತೆರವು ಮಾಡಿದ ನ್ಯಾಯಾಲಯ

ಬೆಂಗಳೂರು: ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರು ರಚಿಸಿರುವ “ಟಿಪ್ಪು ನಿಜ ಕನಸುಗಳು” ಪುಸ್ತಕವನ್ನು ಆನ್‌ಲೈನ್‌ನಲ್ಲಿ ಸೇರಿದಂತೆ ಎಲ್ಲಿಯೂ ಮಾರಾಟ ಮತ್ತು ಹಂಚಿಕೆ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ನವೆಂಬರ್‌ 21ರಂದು ಮಾಡಿದ್ದ ತಾತ್ಕಾಲಿಕ ಪ್ರತಿಬಂಧಕಾದೇಶವನ್ನು ಗುರುವಾರ ತೆರವು ಮಾಡಿದೆ.

ಬೆಂಗಳೂರು ನಿವಾಸಿಯಾದ ಜಿಲ್ಲಾ ವಕ್ಫ್‌ ಮಂಡಳಿಯ ಮಾಜಿ ಅಧ್ಯಕ್ಷ ರಫಿವುಲ್ಲಾ ಬಿ ಎಸ್‌ ಎಂಬವರು ಸಲ್ಲಿಸಿದ್ದ ಅಸಲು ದಾವೆಗೆ ಆಕ್ಷೇಪಿಸಿದ್ದ ಪ್ರತಿವಾದಿಗಳ ವಾದವನ್ನು 15ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ಜೆ ಆರ್‌ ಮೆಂಡೋನ್ಸಾ ಅವರ ನೇತೃತ್ವದ ಪೀಠವು ಮಾನ್ಯ ಮಾಡಿದೆ. ಇದರೊಂದಿಗೆ ಕೃತಿಕಾರ ಅಡ್ಡಂಡ ಕಾರ್ಯಪ್ಪ, ಪುಸ್ತಕ ಪ್ರಕಟಿಸಿರುವ ಅಯೋಧ್ಯಾ ಪ್ರಕಾಶನ, ಪುಸ್ತಕ ಮುದ್ರಿಸಿರುವ ರಾಷ್ಟ್ರೋತ್ಥಾನ ಮುದ್ರಣಾಲಯವನ್ನು ಪುಸ್ತಕ ಹಂಚಿಕೆ ಮತ್ತು ಮಾರಾಟ ಮಾಡದಂತೆ ನ್ಯಾಯಾಲಯವು ನಿರ್ಬಂಧಿಸಿದ್ದ ಆದೇಶವು ತೆರವುಗೊಂಡಿದ್ದು, ವಿಸ್ತೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ.

“ಮಧ್ಯಂತರ ಆದೇಶ ವಿಸ್ತರಿಸುವಂತೆ ಕೋರಿ ಫಿರ್ಯಾದಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಲಾಗಿದೆ. 2022ರ ನವೆಂಬರ್‌ 21ರಂದು ಈ ನ್ಯಾಯಾಲಯ ಮಾಡಿದ್ದ ಮಧ್ಯಂತರ ಆದೇಶವನ್ನು ತೆರವು ಮಾಡಲಾಗಿದೆ” ಎಂದು ಪೀಠವು ಆದೇಶದಲ್ಲಿ ಹೇಳಿದೆ.

ನ್ಯಾಯಾಲಯವು ನವೆಂಬರ್‌ 21ರಂದು “ನಾಟಕದಲ್ಲಿ ವ್ಯಕ್ತಪಡಿಸಿರುವ ವಿಚಾರಗಳು ತಪ್ಪಾಗಿದ್ದು, ಟಿಪ್ಪು ಸುಲ್ತಾನ್ ಬಗ್ಗೆ ತಪ್ಪು ಮಾಹಿತಿಯನ್ನು ಪುಸ್ತಕ ಒಳಗೊಂಡಿದೆ‌. ಇದನ್ನು ಹಂಚಿಕೆ ಮಾಡಿದರೆ, ಫಿರ್ಯಾದಿಗೆ ಸರಿಪಡಿಸಲಾರದ ನಷ್ಟ ಉಂಟಾಗಲಿದೆ. ಅಲ್ಲದೇ, ಪುಸ್ತಕವು ಕೋಮು ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುವ ಸಾಧ್ಯತೆ ಇದ್ದು, ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುವ ಅಪಾಯವಿದೆ. ಪ್ರತಿವಾದಿಗಳು ನ್ಯಾಯಾಲಯದ ಮುಂದೆ ಹಾಜರಾಗಲು ಬಾಕಿ ಇರುವಾಗ ಒಂದೊಮ್ಮೆ ಪುಸ್ತಕ ಹಂಚಿಕೆ ಮಾಡಿದರೆ ಅರ್ಜಿಯ ಉದ್ದೇಶ ಸೋಲಲಿದೆ. ಸಾಮಾನ್ಯವಾಗಿ ವಿವಾದ ಸೃಷ್ಟಿಸಿದ ಪುಸ್ತಕಗಳು ಬಹುಬೇಗ ಮಾರಾಟವಾಗುತ್ತವೆ. ಹೀಗಾಗಿ, ಈ ಹಂತದಲ್ಲಿ ಪ್ರಯೋಜನದ ಸಂತುಲಿತತೆಯು ಫಿರ್ಯಾದಿಗಳ ಪರವಾಗಿದೆ” ಎಂದು ಪ್ರತಿಬಂಧಕಾದೇಶ ಮಾಡಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!