Mysore
32
few clouds

Social Media

ಭಾನುವಾರ, 22 ಫೆಬ್ರವರಿ 2026
Light
Dark

ಗೋಪಾಲಸ್ವಾಮಿ ಬೆಟ್ಟದ ಸಮೀಪ ಪುಂಡಾನೆ ಸೆರೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿಬೆಟ್ಟ, ವಲಯದ ವ್ಯಾಪ್ತಿಯಲ್ಲಿನ ಜನವಸತಿ ಪ್ರದೇಶಗಳಲ್ಲಿ ಅಡ್ಡಾಡುತ್ತಾ ಜನರಲ್ಲಿ, ರೈತರಲ್ಲಿ ಭೀತಿ ಮೂಡಿಸಿದ್ದ ರೇಡಿಯೋ ಕಾಲರ್ ಅಳವಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆಹಿಡಿದಿದೆ.
ಈ ಕಾಡಾನೆ ಪ್ರತಿದಿನ ರೈತರ ಜಮೀನುಗಳಿಗೆ ನುಗ್ಗಿ, ಫಸಲು ತಿಂದು ಹಾನಿ ಮಾಡುತ್ತಿದ್ದಲ್ಲದೆ, ಜನರ ಮೇಲೂ ದಾಳಿಗೆ ಮುಂದಾಗುತ್ತಿತ್ತು ಎನ್ನಲಾಗಿದೆ. ಹೀಗಾಗಿ ರೈತರು ಕಾಡಾನೆಯನ್ನು ಸೆರೆಹಿಡಿದು ಸ್ಥಳಾಂತರಿಸುವಂತೆ ಮನವಿ ಸಲ್ಲಿಸಿದ್ದರು. ಅದರಂತೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಸಾಕಾನೆಗಳಾದ ಅಭಿಮನ್ಯು, ಮಹೇಂದ್ರ, ಗಣೇಶ ಮತ್ತು ಭೀಮ ಆನೆಗಳ ನೆರವಿನೊಂದಿಗೆ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸಿಂ, ಡಾ.ರಮೇಶ್ ಹಾಗೂ ಡಾ.ಮುಜೀಬ್ ಸಹಾಯಕರು ಕಾರ್ಯಾಚರಣೆ ನಡೆಸಿ, ಮಂಗಳವಾರ ಜಿಎಸ್ ಬೆಟ್ಟ ವಲಯ ವ್ಯಾಪ್ತಿಯ ಕಡೆಕೋಟೆ ಪ್ರದೇಶದಲ್ಲಿ ಕಾಡಾನೆಗೆ ಅರಿವಳಿಕೆ ಚುಚ್ಚು ಮದ್ದು ನೀಡುವ ಮೂಲಕ ಸುರಕ್ಷಿತವಾಗಿ ಸೆರೆಹಿಡಿಯಲಾಯಿತು.
ಸೆರೆಸಿಕ್ಕಿರುವ ಈ ಕಾಡಾನೆಗೆ ರೇಡಿಯೋ ಕಾಲರ್ ಆಳವಡಿಸಿದ್ದು, ಈ ಪುಂಡಾನೆಯನ್ನು ಬಂಡೀಪುರ ವಿಭಾಗ ವ್ಯಾಪ್ತಿಯ ಐನೂರು ಮಾರಿಗುಡಿ ವಲಯದ ರಾಮಪುರ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗಿದೆ.

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಸಹಕರಿಸಿದ ಎಲ್ಲಾ ಅಧಿಕಾರಿಗಳಿಗೆ ಬಂಡೀಪುರ ಮುಖ್ಯ ಅರಣ್ಯ ಸಂರಕ್ಷಣಾಽಕಾರಿಗಳು ಹಾಗೂ ಕ್ಷೇತ್ರ ನಿರ್ದೇಶಕರಾದ ಡಾ.ರಮೇಶ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!