ಎಡಿಟೋರಿಯಲ್

ನಾಲ್ಕು ದಿಕ್ಕಿನಿಂದ : 18 ಸೋಮವಾರ 2022

ನಾಲ್ಕು ದಿಕ್ಕಿನಿಂದ

ಸುಸ್ತಿಯ ಹಾದಿಯಲ್ಲಿ ಅರ್ಧ ಡಜನ್ ದೇಶಗಳು!

ದ್ವೀಪ ರಾಷ್ಟ್ರ ಶ್ರೀಲಂಕಾದಂತೆಯೇ ಅರ್ಧ ಡಜನ್ ರಾಷ್ಟ್ರಗಳು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿವೆ. ಮಾಡಿದ ಸಾಲಕ್ಕೆ ಅಸಲು ಇರಲಿ, ಬಡ್ಡಿಯನ್ನು ಪಾವತಿ ಮಾಡಲಾಗದೇ ಸುಸ್ತಿದಾರರಾಗುವುದೇ ಆರ್ಥಿಕ ಬಿಕ್ಕಟ್ಟು. ಕೋವಿಡ್‌ನಿಂದ ಬಂದ ಸಂಕಷ್ಟಗಳು, ನಂತರ ಆರ್ಥಿಕ ಹಿನ್ನಡೆಗಳು, ಜಾಗತಿಕ ರಾಜಕೀಯ ಕ್ಷೋಭೆ ಮತ್ತಿತರ ಕಾರಣಗಳಿಂದಾಗಿ ಈ ದೇಶಗಳು ಬಿಕ್ಕಟ್ಟು ಎದುರಿಸುತ್ತಿವೆ. ಈ ನಡುವೆ ಡಾಲರ್ ಮೌಲ್ಯ ಯದ್ವಾ ತದ್ವಾ ಏರುತ್ತಿದೆ. ಡಾಲರ್ ಮೂಲಕವೇ ಸಾಲ ಮರುಪಾವತಿ ಮಾಡಬೇಕಾದ ಇತರ ರಾಷ್ಟ್ರಗಳೂ ಕಷ್ಟದಲ್ಲಿವೆ. ರಾಯಿಟರ್ಸ್ ವರದಿ ಪ್ರಕಾರ, ಏರುತ್ತಿರುವ ಬೆಲೆಗಳು, ಹಣದುಬ್ಬರ ಮತ್ತು ಸಾಲವು ಆರ್ಥಿಕ ಕುಸಿತಕ್ಕೆ ಕಾರಣವಾಗಿದೆ. ಶ್ರೀಲಂಕಾ ಅಲ್ಲದೇ, ಲೆಬನಾನ್, ರಷ್ಯಾ, ಸುರಿನಾಮ್ ಮತ್ತು ಜಾಂಬಿಯಾ ಈಗಾಗಲೇ ಸಾಲದ ಸುಳಿಯಲ್ಲಿ ಸಿಕ್ಕಿಬಿದ್ದಿವೆ. ಅಂದರೆ, ಸಾಲ ಮರುಪಾವತಿ ಮಾಡಲಾಗದೆ ಸುಸ್ತಿದಾರರಾಗಿವೆ. ಬೆಲಾರಸ್ ಸಹ ಆ ಹಾದಿಯಲ್ಲೇ ಇದೆ. ಕೆಲವು ತಿಂಗಳು ಕಳೆದರೆ ಇನ್ನೂ ಒಂದು ಡಜನ್ ದೇಶಗಳು ಸುಸ್ತಿದಾರರಾಗುವ ಅಪಾಯದಲ್ಲಿವೆ. ಈ ಎಲ್ಲಾ ರಾಷ್ಟ್ರಗಳು ಸುಸ್ತಿಯಾಗಿರುವ ಸಾಲದ ಮೊತ್ತವೇ ೪೦೦ ಬಿಲಿಯನ್ ಡಾಲರ್. ರೂಪಾಯಿ ಲೆಕ್ಕದಲ್ಲಿ ೩೨ ಲಕ್ಷ ಕೋಟಿ!


ಅಸಂಸದೀಯ ಪದಗಳು!

ಸಂಸತ್ತಿನ ಕಲಾಪದ ವೇಳೆ ಪ್ರಧಾನಿ ಸೇರಿದಂತೆ ಯಾರನ್ನಾದರೂ ತರಾಟೆಗೆ ತೆಗೆದುಕೊಳ್ಳಬಹುದಿತ್ತು. ಹೀಗೆ ತರಾಟೆಗೆ ತೆಗೆದುಕೊಳ್ಳುವಾಗ ಕೆಲ ಕಠಿಣ ಪದಗಳಿಂದ ಟೀಕಿಸಲೂ ಬಹುದಿತ್ತು. ಈಗ ಅಂತಹ ಕಠಿಣ ಪದಗಳಿಂದ ಟೀಕೆ ಮಾಡುವುದಕ್ಕೂ ನಿರ್ಬಂಧ ಹೇರಲಾಗಿದೆ. ಆಯ್ದ ಕೆಲವು ಪದಗಳನ್ನು ಸಂಸದರು ಬಳಸುವಂತಿಲ್ಲ. ಬಳಸಬಾರದ ಪದಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅವುಗಳಲ್ಲಿ ‘ಜುಮ್ಲಾ ಜೀವಿ’ಯೂ ಸೇರಿದೆ. ವಿರೋಧ ಪಕ್ಷದ ನಾಯಕರು ಮಾಡುತ್ತಿರುವ ಟೀಕೆಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿ, ಸಾಮರ್ಥ್ಯ, ಜಾಣ್ಮೆ, ಪ್ರಬುದ್ಧತೆ ಇತ್ಯಾದಿಗಳನ್ನು ವರ್ಣಿಸಲು ಬಳಸಲಾಗುತ್ತಿದ್ದ ಪದಗಳೆಲ್ಲವನ್ನೂ ಅಸಂಸದೀಯ ಪದಗಳ ವ್ಯಾಪ್ತಿಗೆ ತರಲಾಗಿದೆ. ‘ಜುಮ್ಲಾ ಜೀವಿ’ ಪದದ ಹುಟ್ಟಿಗೆ ಒಂದು ಪುಟ್ಟ ಇತಿಹಾಸ ಇದೆ. ಕೃಷಿ ಕಾಯ್ದೆ ವಿರೋಧಿಸಿ ರೈತರು ಚಳಿ, ಮಳೆ, ಬಿಸಿಲಲ್ಲೂ ವರ್ಷವಿಡೀ ಪ್ರತಿಭಟನೆ ಮಾಡುತ್ತಿದ್ದಾಗ, ಸಂಸತ್ತಿನಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿ ಅವರು ‘ಆಂದೋಲನ ಜೀವಿ’ಗಳು ಎಂಬ ಪದ ಬಳಸಿ ಟೀಕಿಸಿದ್ದರು. ಅದಾದ ನಂತರ ಪ್ರಧಾನಿ ಮೋದಿ ಅವರಿಗೆ ‘ಜುಮ್ಲಾ ಜೀವಿ‘ ಎಂಬ ಪದ ಖಾಯಂ ಆಗಿತ್ತು! ಅದಕ್ಕೂ ಮುನ್ನ ‘ಜುಮ್ಲೆಬಾಝ್‌‘ ಅನ್ನಲಾಗುತ್ತಿತ್ತು!


ಇಂದಿನಿಂದ ಮತ್ತಷ್ಟು ದುಬಾರಿ ದುನಿಯಾ!

ಸರಕು ಮತ್ತು ಸೇವಾ ತೆರಿಗೆ ಮಂಡಳಿಯ ಇತ್ತೀಚಿನ ತೆರಿಗೆ ಪರಿಷ್ಕರಣೆ ಆದೇಶ ಜುಲೈ ೧೮ರಿಂದ ಜಾರಿಯಾಗುತ್ತಿದೆ. ಅಂದರೆ, ಗ್ರಾಹಕರ ಮೇಲಿನ ತೆರಿಗೆ ಭಾರ ಮತ್ತಷ್ಟು ಏರಲಿದೆ. ತೆರಿಗೆ ಹೇರಿಕೆಯ ಹೊಸ ಅಧ್ಯಾಯಕ್ಕೆ ಗ್ರಾಹಕರು ತೆರೆದುಕೊಳ್ಳಬೇಕಿದೆ. ೫,೦೦೦ ರೂಪಾಯಿಗಳಿಗಿಂತ ಹೆಚ್ಚು ಬಾಡಿಗೆ ಇರುವ ಆಸ್ಪತ್ರೆ ಕೊಠಡಿಗಳು ದುಬಾರಿಯಾಗಲಿವೆ. ಅದು ಶ್ರೀಮಂತರ ಕತೆ. ಶ್ರೀಸಾಮಾನ್ಯರು ಬಳಸುವ ಆಟಾ (ಗೋಧಿ ಹಿಟ್ಟು), ಮೊಸರು, ಪನೀರ್ ಮೇಲೆ ಶೇ.೫ರಷ್ಟು ಜಿಎಸ್‌ಟಿ ಹೇರಲಾಗಿದೆ.
ದಿನಕ್ಕೆ ೧,೦೦೦ ರೂಪಾಯಿ ದರ ಹೊಂದಿರುವ ಹೋಟೆಲ್ ಕೊಠಡಿಗಳು, ಶೈಕ್ಷಣಿಕ ನಕ್ಷೆಗಳು ಮತ್ತು ಚಾರ್ಟ್‌ಗಳು, ಅಟ್ಲಾಸ್‌ಗಳ ಮೇಲೆ ಶೇ.೧೨ರಷ್ಟು ಸರಕು ಮತ್ತು ಸೇವಾ ತೆರಿಗೆ ಹೇರಲಾಗಿದೆ. ನೀವು ಬ್ಯಾಂಕಿನಿಂದ ಪಡೆವ ಚೆಕ್ ಬುಕ್ಕಿನ ಮೇಲೂ ಶೇ.೧೮ರಷ್ಟು ಜಿಎಸ್‌ಟಿ ಇದೆ. ಈಗಾಗಲೇ ಪೆಟ್ರೋಲ್, ಡಿಸೇಲ್, ಎಲ್ ಪಿಜಿ ಸಿಲಿಂಡರ್, ಆಹಾರಧಾನ್ಯಗಳು, ಖಾದ್ಯ ತೈಲಗಳ ದರ ಏರಿಕೆಯಿಂದ ತತ್ತರಿಸುವ ಜನರಿಗೆ ಈಗ ಮತ್ತಷ್ಟು ಹೊರೆ ಹೇರಲಾಗಿದೆಯಷ್ಟೇ!


ಭವಿಷ್ಯ ನಿಧಿಗೂ ತೆರಿಗೆ ಹೇರಿಕೆ!

ತೆರಿಗೆ ಸುಧಾರಣಾ ಪರ್ವವಿದು. ಇದುವರೆಗೆ ಸಂಪೂರ್ಣ ತೆರಿಗೆ ವಿನಾಯಿತಿ ಇದ್ದ ಕಾರ್ಮಿಕರ ಭವಿಷ್ಯ ನಿಧಿಯ ಮೇಲೂ ೨೦೨೨ ಏಪ್ರಿಲ್ ೧ರಿಂದ ತೆರಿಗೆ ಹೇರಲು ನಿರ್ಧರಿಸಲಾಗಿದೆ. ಈ ಮೊದಲು ಕಾರ್ಮಿಕರು ತಮ್ಮ ಭವಿಷ್ಯ ನಿಧಿ ಖಾತೆಗೆ ವಾರ್ಷಿಕ ಎಷ್ಟಾದರೂ ಪಾವತಿ ಮಾಡಬಹುದಿತ್ತು. ಹಾಗೆಯೇ ಭವಿಷ್ಯನಿಧಿಯಲ್ಲಿರುವ ಮೊತ್ತಕ್ಕೆ ಬರುವ ಬಡ್ಡಿಯ ಮೇಲೂ ಯಾವುದೇ ತೆರಿಗೆ ಇರಲಿಲ್ಲ. ಈಗ ಪರಿಷ್ಕೃತ ಆದೇಶದಂತೆ ಒಬ್ಬ ಕಾರ್ಮಿಕ ೨.೫ ಲಕ್ಷ ರೂಪಾಯಿ ಮೀರಿ ಭವಿಷ್ಯ ನಿಧಿಗೆ ಪಾವತಿ ಮಾಡಿದ್ದರೆ, ಅದರ ಮೇಲೆ ತೆರಿಗೆ ಹೇರಲಾಗುತ್ತದೆ. ಅದೇ ವೇಳೆ ಕಾರ್ಮಿಕನ ಭವಿಷ್ಯ ನಿಧಿಯ ಮೇಲೆ ವಾರ್ಷಿಕ ೨.೫ ಲಕ್ಷ ರೂಪಾಯಿಗಿಂದ ಹೆಚ್ಚು ಬಡ್ಡಿ ಬಂದರೆ ಅದಕ್ಕೂ ತೆರಿಗೆ ವಿಧಿಸಲಾಗುತ್ತದೆ. ಅಂದರೆ, ಇನ್ನು ಮುಂದೆ ಭವಿಷ್ಯ ನಿಧಿ ಸಂಪೂರ್ಣ ತೆರಿಗೆ ಮುಕ್ತವಲ್ಲ. ತೆರಿಗೆ ವಿನಾಯಿತಿ ಇದೆ ಎಂಬ ಕಾರಣಕ್ಕೆ ಬಹಳಷ್ಟು ಜನ ಭವಿಷ್ಯನಿಧಿಗೆ ಹೆಚ್ಚಿನ ಪಾಲು ಹೂಡಿಕೆ ಮಾಡುತ್ತಿದ್ದರು. ಹಾಗೆಯೇ ಬಡ್ಡಿ ಸಹ ಬ್ಯಾಂಕುಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿತ್ತು. ಇದೀಗ ೨.೫ ಲಕ್ಷ ಮೀರಿದ ಪಾವತಿ ಮತ್ತು ೨.೫ ಲಕ್ಷ ಮೀರಿದ ಬಡ್ಡಿ ಆದಾಯದ ಮೇಲೆ ತೆರಿಗೆ ಬೀಳಲಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

13 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

13 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

13 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

13 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

13 hours ago