ಎಡಿಟೋರಿಯಲ್

ಮಳೆ ಅಬ್ಬರಕ್ಕೆ ಚಾ.ನಗರ ಜಿಲ್ಲೆಯಲ್ಲಿ ಅಪಾರ ಹಾನಿ; ತುರ್ತು ಪರಿಹಾರ ಅಗತ್ಯ

ಚಾಮರಾಜನಗರ ಜಿಲ್ಲಾದ್ಯಂತ ಕಳೆದ ಒಂದು ವಾರ ಕಾಲ ಸತತವಾಗಿ ಸುರಿದ ಧಾರಾಕಾರ ಮಳೆಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಸಾವಿರಾರು ಮನೆಗಳು, ರಸ್ತೆ, ಸೇತುವೆ, ಕೆರೆ, ಶಾಲೆ, ಆಸ್ಪತ್ರೆ ಕಟ್ಟಡಗಳು ಹಾನಿಗೊಂಡಿವೆ. ಒಟ್ಟು ೪೮ ಗ್ರಾಮಗಳು ಜಲಾವೃತಗೊಂಡು ಜನಜೀವನ ಸಂಕಷ್ಟಕ್ಕೆ ಸಿಲುಕಿತ್ತು.   

ಕಳೆದ ವಾರದಲ್ಲಿ ೧೧೯ ಮಿ.ಮೀ.ವಾಡಿಕೆ ಮಳೆಯಾಗಬೇಕಿತ್ತು.

ಆದರೆ, ೫೧೩ ಮಿ.ಮೀ. ಹೆಚ್ಚು ಮಳೆಯಾಗಿ ಜಿಲ್ಲೆಯ ಜನರನ್ನು ಸಂಕಷ್ಟಕ್ಕೆ ನೂಕಿತ್ತು. ೧೧೪೨ ಮನೆಗಳು ಹಾನಿಗೊಂಡಿವೆ. ೭೭ ಶಾಲಾ ಕಟ್ಟಡಗಳು, ೧೪೩ ಲೋಕೋಪಯೋಗಿ ಇಲಾಖೆ ರಸ್ತೆಗಳು, ೧೬ ಸೇತುವೆಗಳು, ೧೧ ಕಲ್ವರ್ಟ್ಗಳು, ೬ ಆಸ್ಪತ್ರೆಗಳು ಹಾಳಾಗಿವೆ. ೫ ದೊಡ್ಡ ಕೆರೆಗಳ ಏರಿ ಒಡೆದು ಅಪಾರ ಪ್ರಮಾಣದ ನೀರು ಜಮೀನುಗಳಿಗೆ ನುಗ್ಗಿ ಫಸಲು ಹಾನಿಗೊಂಡಿವೆ. ೯ ಮೇಕೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ೧೩೦೦ ಕೋಳಿಗಳು ನೀರು ಪಾಲಾಗಿವೆ. ೧೭೩೧ ಹೆಕ್ಟೇರ್ ಕೃಷಿ ಭೂಮಿ ಹಾನಿಗೊಂಡಿದೆ. ೩೫೦ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ತೋಟದ ಬೆಳೆಗಳು ಜಲಾವೃತಗೊಂಡಿವೆ. ಈ ಪೈಕಿ ೧೨೬ ಹೆಕ್ಟೇರ್ ಫಸಲು ಸಂಪೂರ್ಣ ಹಾನಿಗೊಂಡಿದೆ.

೬೧ ಹೆಕ್ಟೇರ್ ಬಾಳೆ, ೩೦ ಹೆ.ಅರಿಶಿನ, ೨೦ ಹೆ.ಟೊಮ್ಯಾಟೋ ಫಸಲು ನಷ್ಟವಾಗಿದೆ. ಚಾಮರಾಜನಗರ ತಾಲ್ಲೂಕಿನ ಕಾಡಹಳ್ಳಿ, ಮಸಗಾಪುರ, ಹೊಂಗನೂರು, ಗಂಗವಾಡಿ, ಬೆಟ್ಟಹಳ್ಳಿ, ಜ್ಯೋತಿಗೌಡನಪುರ, ಕರಳಮೋಳೆ, ಸರಗೂರು, ಆಲೂರು, ಹೊಂಡರಬಾಳು, ಕಾಗಲವಾಡಿ, ಚಂದಕವಾಡಿ ಭಾಗಗಳಲ್ಲಿ ತೋಟದ ಬೆಳೆಗಳು ಹಾಳಾಗಿವೆ. ಇದರಿಂದ ಸುಮಾರು ೨೯.೬೧ ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ತೋಟಗಾರಿಕೆ ಇಲಾಖೆ ಅಂದಾಜಿಸಿದೆ.

ಇದಲ್ಲದೆ ೧೧೫೬ ಹೆಕ್ಟೇರ್ ಪ್ರದೇಶದಲ್ಲಿದ್ದ ಭತ್ತ, ಕಬ್ಬು, ಮುಸುಕಿನ ಜೋಳದ ಫಸಲು ಜಲಾವೃತಗೊಂಡಿದೆ.

ಇದರ ಪೂರ್ಣ ಪ್ರಮಾಣದ ನಷ್ಟ ತಿಳಿಯಲು ಕಾಲಾವಕಾಶ ಬೇಕಿದೆ. ಇನ್ನು ೨ ದಿನಗಳು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಆದ್ದರಿಂದ ನಿಖರವಾಗಿ ಬೆಳೆ ನಷ್ಟದ ಅಂದಾಜು ಸಾಧ್ಯವಾಗುತ್ತಿಲ್ಲ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ.

ನೀರಿನಿಂದ ಹೆಚ್ಚು ತೊಂದರೆಗೆ ಒಳಗಾದ ಯಳಂದೂರು ತಾಲ್ಲೂಕಿನ ಅಗರ, ಮಾಂಬಳ್ಳಿ, ಯಳಂದೂರಿನಲ್ಲಿ ಒಟ್ಟು ೪ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ೯೫೦ ಜನರು ಈ ಕೇಂದ್ರಗಳಲ್ಲಿ ವಾಸ್ತವ್ಯವಿದ್ದಾರೆ.

ಧಾರಾಕಾರ ಮಳೆಯಿಂದ ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ ತಾಲ್ಲೂಕುಗಳಲ್ಲಿ ಹೆಚ್ಚು ನಷ್ಟವಾಗಿದೆ. ಚಾಮರಾಜನಗರ ತಾಲ್ಲೂಕಿನ ಕಥಾನಾಯಕನ ಕೆರೆ, ಗುಂಬಳ್ಳಿ ಕೆರೆ, ಯಲಕ್ಕೂರಿನ ಹೊಸಕೆರೆ, ಯರಗಂಬಳ್ಳಿ ಸಮೀಪದ ಹುಳುಗೆರೆಗಳ ಏರಿ ಒಡೆದು ಹಾನಿಯಾಗಿದೆ. ಇದೆಲ್ಲವೂ ಪ್ರಾಥಮಿಕ ವರದಿಯಾಗಿದೆ. ಇನ್ನು ಪೂರ್ಣ ಪ್ರಮಾಣದ ವರದಿ ಬರಬೇಕಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ಧಾರೆ.

ಮಳೆ ಅಬ್ಬರದಿಂದ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದ ತಪ್ಪಲಿನಲ್ಲಿರುವ ಅವಳಿ ಜಲಾಶಯಗಳಾದ ಸುವರ್ಣಾವತಿ ಮತ್ತು ಚಿಕ್ಕಹೊಳೆಗಳು ಭರ್ತಿಯಾಗಿ ಸುವರ್ಣಾವತಿ ಹೊಳೆಗೆ ೨ ಸಾವಿರ ಕ್ಯೂಸೆಕ್ಸ್ ಗೂ ಹೆಚ್ಚು ನೀರು ಹರಿಸಲಾಯಿತು. ಜೊತೆಗೆ ಮಳೆಯೂ ಹೆಚ್ಚಾದ್ದರಿಂದ ಈ ಹೊಳೆ ಅಂಚಿನಲ್ಲಿರುವ ಆಲೂರು, ಹೊಮ್ಮ, ಅಂಬಳೆ, ಯಳಂದೂರು, ಯರಿಯೂರು, ಗಣಿಗನೂರು, ಮದ್ದೂರು, ಬೂದಿತಿಟ್ಟು, ಅಗರ, ಮಾಬಳ್ಳಿ ಗ್ರಾಮಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ತುತ್ತಾಗಿದ್ದರು. ಮನೆಗಳಿಗೆ ನೀರು ನುಗ್ಗಿ ದಿನಸಿ ಪದಾರ್ಥ ನೀರು ಪಾಲಾದವು. ಜಾನುವಾರುಗಳು ಮೇವಿಗೆ ಪರದಾಡಬೇಕಾಯಿತು. ಮಳೆಯ ಹೊಡೆತದಿಂದ ಊಟಕ್ಕೂ ಪರದಾಡುವಂತಾಯಿತು. ಯಳಂದೂರು ತಾಲ್ಲೂಕಿನಲ್ಲಿ ಹೆಚ್ಚಾಗಿ ಕಬ್ಬು, ಭತ್ತ, ಮುಸುಕಿನ ಜೋಳದ ಫಸಲು ಜಲಾವೃತಗೊಂಡು ಹಾನಿಯಾಗಿದೆ.

ಇನ್ನು ೨-೩ ದಿನಗಳು ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯಕ್ಕೆ ಆಗಿರುವ ಹಾನಿಯ ಬಗ್ಗೆ ತಕ್ಷಣ ಸರ್ವೆ ಮಾಡಿಸಿ ತುರ್ತು ಪರಿಹಾರ ಕೈಗೊಳ್ಳಬೇಕಿದೆ. ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಶಾಸಕ ಎನ್.ಮಹೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಕೊಳ್ಳೇಗಾಲ, ಯಳಂದೂರು, ಚಾಮರಾಜನಗರ ತಾಲ್ಲೂಕುಗಳಲ್ಲಿ ಮಳೆ ಹಾನಿ ಪ್ರದೇಶವನ್ನು ಪರಿಶೀಲನೆ ನಡೆಸಿದ್ಧಾರೆ. ಶುಕ್ರವಾರ ಬೆಳಿಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸಿಲ್ದಾರರು, ತಾಪಂ ಇಒಗಳು, ಪಿಡಿಒಗಳ ಸಭೆ ನಡೆಸಿ ಸಮರೋಪಾದಿಯಲ್ಲಿ ಪರಿಹಾರ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

ಈಗಾಗಲೇ ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಆಹಾರ ಕಿಟ್ ವಿತರಿಸಲಾಗಿದೆ. ಮನೆ ಹಾನಿಗೊಂಡು ತೊಂದರೆಗೆ ಈಡಾದವರಿಗೆ ೧೦ ಸಾವಿರ ರೂ. ಪರಿಹಾರ ನೀಡಲಾಗುತ್ತಿದೆ.

ಬೆಳೆ ಹಾನಿ ಬಗ್ಗೆ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಬೇಕಿದೆ. ಇದು ಬೇಗ ಆರಂಭ ಆಗಬೇಕಿದೆ. ಜಮೀನುಗಳಲ್ಲಿ ನಿಂತಿರುವ ನೀರು ಇಂಗಿಹೋದ ನಂತರ ಸರ್ವೆ ಮಾಡಿದರೆ ಏನೂ ಪ್ರಯೋಜನವಿಲ್ಲ.

ಮಳೆ ಹಾನಿಯನ್ನು ಸರಿಪಡಿಸಲು ಸಾಕಷ್ಟು ಅನುದಾನದ ಅವಶ್ಯಕತೆಯಿದೆ. ಸಚಿವ ವಿ.ಸೋಮಣ್ಣ ಅವರು ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಂತ್ರಸ್ತರಿಗೆ ಪೂರ್ಣಪ್ರಮಾಣದಲ್ಲಿ ಪರಿಹಾರ ಬಿಡುಗಡೆ ಮಾಡಿಸಿ ಹಾನಿಯಿಂದಾಗಿರುವ ನಷ್ಟವನ್ನು ಸರಿದೂಗಿಸಬೇಕಿದೆ.

andolana

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

10 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

12 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

12 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

13 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

13 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

15 hours ago