ಎಡಿಟೋರಿಯಲ್

ದಸರೆಗೆ ಬರುವ ಪ್ರವಾಸಿ ವಾಹನಗಳ ತೆರಿಗೆ ವಿನಾಯ್ತಿ ಅವಧಿ ವಿಸ್ತರಣೆ ಅತ್ಯಗತ್ಯ

ದೇಶ, ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಆಗಮಿಸುವ ಹೊರ ರಾಜ್ಯಗಳ ಪ್ರವಾಸಿ ವಾಹನಗಳಿಗೆ ಮುಂಚಿತವಾಗಿ ತೆರಿಗೆ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತ್ವರಿತವಾಗಿ ನಿರ್ಧಾರ ಕೈಗೊಳ್ಳಬೇಕಿದೆ. ಮೈಸೂರು ಜಿಲ್ಲೆಯಲ್ಲದೆ ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳಿಗೂ ಈ ತೆರಿಗೆ ವಿನಾಯಿತಿಯನ್ನು ವಿಸ್ತರಿಸಿದರೆ ಎರಡು ವರ್ಷಗಳಿಂದ ಸೊರಗಿರುವ ಪ್ರವಾಸೋದ್ಯಮಕ್ಕೆ ಉತ್ತೇಜನವಷ್ಟೇ ಅಲ್ಲ ಚೇತರಿಕೆಯನ್ನೂ ನೀಡಿದಂತಾಗಲಿದೆ. ಪ್ರತ್ಯಕ್ಷವಾಗಿ ಮತ್ತು ಮತ್ತು ಪರೋಕ್ಷವಾಗಿ ಪ್ರವಾಸೋದ್ಯಮವನ್ನೇ ಅವಲಂಬಿಸಿರುವ ಲಕ್ಷಾಂತರ ಜನರಿಗೂ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಲಿದೆ.

ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣಕ್ಕಾಗಿ ಸರಳ ದಸರಾ ಆಚರಿಸಿದ್ದ ರಾಜ್ಯ ಸರ್ಕಾರ ಈ ಬಾರಿ ಅದ್ಧೂರಿಯಾಗಿ ಆಚರಿಸಲು ಮುಂದಾಗಿದೆ. ಅದಕ್ಕೆ ತಕ್ಕಂತೆ ಜಿಲ್ಲಾಡಳಿತವು ಉಪಸಮಿತಿಗಳನ್ನು ರಚಿಸಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅರಮನೆ ಆವರಣದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಹಾರಾಜ ಕಾಲೇಜು ಮೈದಾನದಲ್ಲಿ ಜರುಗುವ ಯುವ ದಸರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕಲಾವಿದರನ್ನು ಕರೆಯಲು ಪಟ್ಟಿ ತಯಾರು ಮಾಡಲಾಗುತ್ತಿದೆ. ಹೀಗಾಗಿ, ಈ ಬಾರಿ ಅತಿಹೆಚ್ಚು ಪ್ರವಾಸಿಗರನ್ನು ನಿರೀಕ್ಷಿಸಲಾಗಿದೆ. ಅದಕ್ಕೆ ಪೂರಕವಾಗಿ ಈಗಾಗಲೇ ದಸರಾ ವೆಬ್‌ಸೈಟ್ ಮೂಲಕ ಜಂಬೂಸವಾರಿ ಪ್ರಚಾರ, ವಿಮಾನ ನಿಲ್ದಾಣಗಳಲ್ಲಿ ಪ್ರಚಾರ ಮಾಡುವ ಜತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆ, ಪ್ರವಾಸೋದ್ಯಮ ಇಲಾಖೆಯ ಮೂಲಕ ವ್ಯಾಪಕ ಪ್ರಚಾರ ಮಾಡಲಾಗುತ್ತಿದೆ.

ದಸರಾ ಹಬ್ಬಕ್ಕೆಂದು ಕರ್ನಾಟಕಕ್ಕೆ ಬರುವ ಪ್ರವಾಸಿ ವಾಹನಗಳಿಗೆ ಸರ್ಕಾರ ಪ್ರತಿ ವರ್ಷ ಹತ್ತು ದಿನಗಳ ತೆರಿಗೆ ವಿನಾಯಿತಿ ನೀಡುತ್ತಾ ಬಂದಿದೆ. ಅದನ್ನು ಮುಂದುವರಿಸುವುದರ ಜತೆಗೆ ಹೆಚ್ಚುವರಿಯಾಗಿ ಒಂದು ತಿಂಗಳ ಅವಧಿಗೆ ವಿಸ್ತರಿಸಬೇಕು ಮತ್ತು ತೆರಿಗೆ ವಿನಾಯ್ತಿ ಸೌಲಭ್ಯವನ್ನು ಅಕ್ಕಪಕ್ಕದ ಜಿಲ್ಲೆಗಳಿಗೂ ವಿಸ್ತರಿಸಬೇಕು ಎಂಬುದು ಪ್ರವಾಸೋದ್ಯಮ ಅವಲಂಬಿತ ವಲಯದ ಬೇಡಿಕೆಯಾಗಿದೆ.

ನವರಾತ್ರಿಯ ದಿನಗಳಲ್ಲಿ ತಮಿಳುನಾಡು, ಕೇರಳ, ಆಂದ್ರಪ್ರದೇಶ, ಮಹಾರಾಷ್ಟ್ರ ರಾಜ್ಯಗಳಿಂದ ಪ್ರವಾಸಿಗರು ಹರಿದು ಬಂದರೂ ತಮಿಳುನಾಡು, ಕೇರಳ ರಾಜ್ಯದಿಂದ ಹೆಚ್ಚಾಗಿ ವಾಹನಗಳು ಬರಲಿವೆ. ಸಾಮಾನ್ಯ ದಿನಗಳಲ್ಲಿ ಕಾರು, ಮೆಟಡೋರ್, ಟೆಂಪೋ, ಮಿನಿ ಬಸ್, ಪ್ರವಾಸಿ ಬಸ್ ಸೇರಿದಂತೆ ಆಯಾ ವಾಹನಗಳ ಸೀಟುಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ತೆರಿಗೆ ಪಾವತಿಸಿಕೊಳ್ಳಲಾಗುತ್ತದೆ.

ದಸರಾ ಸಂದರ್ಭದಲ್ಲಿ ಮೈಸೂರಿಗೆ ಬರುವ ವಾಹನಗಳಿಗೆ ತೆರಿಗೆ ವಿನಾಯ್ತಿ ಇದ್ದರೂ ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ತೆರಳಿದಾಗ ತೆರಿಗೆ ಪಾವತಿಸಬೇಕಾಗುತ್ತದೆ. ಈ ಕಾರಣದಿಂದಾಗಿ ಸಾಕಷ್ಟು ಜನರು ನವರಾತ್ರಿಯ ಸಂದರ್ಭದಲ್ಲಿ ಆಗಮಿಸಲು ಹಿಂದೇಟು ಹಾಕುತ್ತಾರೆ. ಹಾಗಾಗಿ, ರಾಜ್ಯ ಸರ್ಕಾರ ಒಂದು ತಿಂಗಳ ಕಾಲ ತೆರಿಗೆ ವಿನಾಯ್ತಿ ಘೋಷಿಸಿ ಮುಕ್ತ ಪ್ರವೇಶ ನೀಡಿದರೆ ಪ್ರವಾಸಿಗರ ಸಂಖ್ಯೆ ದೊಡ್ಡಪ್ರಮಾಣದಲ್ಲಿ ಹೆಚ್ಚಲಿದ್ದು, ಮೈಸೂರು ಪ್ರದೇಶದ ಪ್ರವಾಸೋದ್ಯಮ ಚಟುವಟಿಕೆ ಪುಟಿದೇಳಲಿದೆ. ಪ್ರವಾಸಿಗರು ವಾಸ್ತವ್ಯ ಹೂಡುವುದರಿಂದ ಪಂಚತಾರಾ ಹೋಟೆಲ್ ಗಳು, ವಸತಿಗೃಹಗಳ ಕೊಠಡಿಗಳು ತುಂಬುವ ಜತೆಗೆ, ಹೋಟೆಲ್ ವ್ಯಾಪಾರವೂ ಬಿರುಸುಗೊಳ್ಳುತ್ತದೆ. ಅರಮನೆ, ಚಾಮುಂಡಿಬೆಟ್ಟ, ಕೃಷ್ಣರಾಜ ಸಾಗರ, ಬಂಡೀಪುರ, ನಾಗರಹೊಳೆ ಅಭಯಾರಣ್ಯ ಸಫಾರಿಗಳಿಗೆ ಪ್ರವಾಸಿಗರ ಸಂಖ್ಯೆ ಹೆಚ್ಚುವುದರಿಂದ ಸ್ಥಳೀಯ ಟ್ಯಾಕ್ಸಿ ಮಾಲೀಕರು, ಚಾಲಕರಿಗೂ ಆರ್ಥಿಕವಾಗಿ ನೆರವಾಗಲಿದೆ. ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ಪ್ರಕಾರ, ಮಾಮೂಲಿ ದಿನಗಳಲ್ಲಿ ನಾಲ್ಕರಿಂದ ಐದು ಸಾವಿರ ವಾಹನಗಳು ಬಂದರೆ, ದಸರೆ ಸಂದರ್ಭದಲ್ಲಿ ೨೦ರಿಂದ ೨೫ಸಾವಿರ ವಾಹನಗಳು ಬರಲಿವೆ. ಮೈಸೂರು ನಗರಕ್ಕೆ ಬಂದವರು ಕೊಡಗು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರವಾಸಿ ತಾಣಗಳ ವೀಕ್ಷಣೆಗೂ ತೆರಳುತ್ತಾರೆ. ಆದ್ದರಿಂದ ಈ ಬಾರಿ ಹೊರ ರಾಜ್ಯದ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವ ಕುರಿತಾದ ಆದೇಶವನ್ನು ತ್ವರಿತವಾಗಿ ಹೊರಡಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾವಾಸಿಗಳು ಬರಲು ಸಾಧ್ಯವಾಗಲಿದೆ. ಈಗಾಗಲೇ ಪ್ರವಾಸೋದ್ಯಮಿಗಳು, ಹೋಟೆಲ್, ಟ್ರಾವೆಲ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಅಕ್ಕಪಕ್ಕದ ಜಿಲ್ಲೆಗಳಿಗೂ ತೆರಿಗೆ ವಿನಾಯ್ತಿ ವಿಸ್ತರಿಸಲು ಮನವಿ ಮಾಡಿದ್ದಾರೆ.

ಈ ಬೇಡಿಕೆಗೆ ಸರ್ಕಾರ ತ್ವರಿತವಾಗಿ ಸ್ಪಂದಿಸಿ ತೆರಿಗೆ ವಿನಾಯ್ತಿ ನೀಡುವ ಸಂಬಂಧ ಆದೇಶ ಹೊರಡಿಸಬೇಕಿದೆ. ದಸರಾ ಮಹೋತ್ಸವ ಆರಂಭಕ್ಕೆ ಕೇವಲ ಹನ್ನೆರಡು ದಿನಗಳಿರುವುದರಿಂದ ಸೆಪ್ಟೆಂಬರ್ ೨೦ರಿಂದ ಅಕ್ಟೋಬರ್ ೨೦ರ ತನಕ ತೆರಿಗೆ ವಿನಾಯಿತಿ ಘೋಷಿಸಿದರೆ ಅನುಕೂಲವಾಗಲಿದೆ. ಹತ್ತು ದಿನಗಳ ತೆರಿಗೆ ವಿನಾಯಿತಿಯನ್ನು ಒಂದು ತಿಂಗಳಿಗೆ ವಿಸ್ತರಿಸಿದರೆ ಸರ್ಕಾರಕ್ಕೆ ದೊಡ್ಡ ಹೊರೆಯೇನೂ ಆಗದು. ಪ್ರವಾಸಿಗರು ಬಂದಷ್ಟು ಸ್ಥಳೀಯವಾಗಿ ಆರ್ಥಿಕ ಚಟುವಟಿಕೆ ಚೇತರಿಕೆಗೆ ಕಾರಣವಾಗುವುದರಿಂದ ಸರ್ಕಾರಕ್ಕೆ ಪರೋಕ್ಷವಾಗಿ ಹೆಚ್ಚಿನ ತೆರಿಗೆ ಸಂದಾಯವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಈ ಸಂದರ್ಭದಲ್ಲೇ ನಾಲ್ಕೂ ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್ ಸದಸ್ಯರ ಸಭೆ ನಡೆಸಿ ಸಿಎಂ ಬಳಿಗೆ ನಿಯೋಗ ಕರೆದೊಯ್ದು ತೆರಿಗೆ ವಿನಾಯಿತಿ ಪಡೆಯಲು ತ್ವರಿತವಾಗಿ ಪ್ರಯತ್ನಿಸಬೇಕಿದೆ.

andolana

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

5 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

9 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago