ಎಡಿಟೋರಿಯಲ್

ಗ್ರಾ.ಪಂ. ಅಧ್ಯಕ್ಷರ ಅಧಿಕಾರ ಮೊಟಕು ಪ್ರಸ್ತಾವ ತಿರಸ್ಕಾರ ಸರ್ಕಾರದ ಪ್ರಬುದ್ಧ ನಡೆ

ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರ ಅಧಿಕಾರವನ್ನು ಮೊಟಕುಗೊಳಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರವು ತಿರಸ್ಕಾರ ಮಾಡಿರುವುದು ಸ್ವಾಗತರ್ಹ. ಈ ನಿಟ್ಟಿನಲ್ಲಿ ಸರ್ಕಾರದ ನಡೆ ಪ್ರಬುದ್ಧವಾಗಿದೆ. ಹಾಗೆ ನೋಡಿದರೆ, ಅಧಿಕಾರ ವಿಕೇಂದ್ರಿಕರಣ ಆಶಯವನ್ನು ಸಮಗ್ರ ಪಂಚಾಯತ್ ರಾಜ್ ಕಾಯ್ದೆಯನ್ನು ಮೊದಲು ಜಾರಿಗೆ ತಂದ ಹೆಗ್ಗಳಿಕೆ ಕರ್ನಾಟಕದ್ದು. ಆ ನಂತರ ಸಂವಿಧಾನದ ೭೩ ನೇ ತಿದ್ದುಪಡಿಯ ಮೂಲಕ ೧೯೯೩ ಮೇ ೧೦ ರಂದು ದೇಶದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತರಲಾಯಿತು. ಗ್ರಾಮ, ತಾಲ್ಲೂಕು ಮತ್ತು ಜಿಲ್ಲೆ ಸೇರಿ ಮೂರು ಹಂತದಲ್ಲಿ (ತ್ರೀಟಯರ್) ಪಂಚಾಯತ್ ರಾಜ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಹೊಸ ಬೆಳಕು ಹರಿಸಲಾಯಿತು. ಇದಕ್ಕೂ ಮುನ್ನ ೧೯೮೩ರಲ್ಲಿ ಅಧಿಕಾರಕ್ಕೆ ಬಂದ ಮೊದಲ ಕಾಂಗ್ರೆಸೇತರ ಜನತಾ ಪಕ್ಷದ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ನೇತೃತ್ವದ ಸರ್ಕಾರ ‘ಜನರಿಗೆ ಶಕ್ತಿ’ ಎಂದು ಘೋಷಿಸುವ ಮೂಲಕ ಸ್ಥಳೀಯ ಸರ್ಕಾರಗಳ ರಚನೆಯ ಹೊಸ ಪ್ರಯೋಗಕ್ಕೆ ಮುಂದಾಯಿತು. ಅಶೋಕ್ ಮೆಹ್ತಾ ಸಮಿತಿಯ ಶಿಫಾರಸುಗಳ ಮಾದರಿಯಲ್ಲೇ ಜನತಾ ಸರ್ಕಾರ ಒಂದು ಮಸೂದೆ ತಯಾರಿಸುವ ಮೂಲಕ ೧೯೮೩ರಲ್ಲಿ ಜಿಲ್ಲಾ ಪರಿಷತ್ ಮತ್ತು ಮಂಡಲ್ ಪಂಚಾಯಿತಿಗಳನ್ನು ಅನುಷ್ಠಾನಗೊಳಿಸಿತು. ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗೆ ಜನರಿಂದ ನೇರವಾಗಿ ಸದಸ್ಯರು ಆಯ್ಕೆ ಆಗುತ್ತಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಚುನಾಯಿತ ಸದಸ್ಯರು ಆಯ್ಕೆ ಮಾಡುತ್ತಾರೆ.

೧೯೯೩ ರ ಹೊಸ ಕಾಯ್ದೆಯ ಅನ್ವಯ, ಜನಸಂಖ್ಯೆ ಪ್ರಮಾಣಕ್ಕೆ ಅನುಗುಣವಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸ್ಥಾನಗಳನ್ನು ಮತ್ತು ಮಹಿಳಾ ಮೀಸಲಾತಿಯನ್ನೂ ಒದಗಿಸಿದೆ. ಅದರಲ್ಲಿಯೂ, ಗ್ರಾಮ ಪಂಚಾಯಿತಿ ಎಂಬುದು ಭಾರತೀಯ ಹಳ್ಳಿಗಳಲ್ಲಿ ಮೂಲಭೂತ ಗ್ರಾಮ-ಆಡಳಿತ ಸಂಸ್ಥೆಯಾಗಿದೆ. ಇದು ಭಾರತದಲ್ಲಿ ತಳಮಟ್ಟದಲ್ಲಿ ಪ್ರಜಾಸತ್ತಾತ್ಮಕ ರಚನೆಯಾಗಿದೆ. ಇದು ರಾಜಕೀಯ ಸಂಸ್ಥೆಯಾಗಿದ್ದು, ಹಳ್ಳಿಯ ಕ್ಯಾಬಿನೆಟ್ ಆಗಿ ಕಾರ್ಯನಿರ್ವಹಿಸುತ್ತದೆ. ಇನ್ನು ಗ್ರಾಮ ಪಂಚಾಯಿತಿ ಆಡಳಿತ ಚುನಾಯಿತ ಮುಖ್ಯಸ್ಥರಾದ ಅಧ್ಯಕ್ಷರೇ ಆ ಗ್ರಾಮದ ‘ಮುಖ್ಯಮಂತ್ರಿ’ ಎಂಬಂತಾಗಿರುತ್ತಾರೆ. ಇಂತಹ ಗ್ರಾಮ ಆಡಳಿತ ಪ್ರಮುಖರಾಗಿರುವ ಅಧ್ಯಕ್ಷರ ಅಧಿಕಾರವನ್ನು ಕುಂದಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳು ನಡೆದಾಗಿಯೂ ಸರ್ಕಾರ ಇಂತಹ ಪ್ರಸ್ತಾವನೆಯನ್ನು ತಿರಸ್ಕರಿಸುವ ಮೂಲಕ ಅಧಿಕಾರ ವಿಕೇಂದ್ರಿಕರಣದ ಆಶಯ ಮತ್ತು ಗ್ರಾಮ್ ಸ್ವರಾಜ್ ಪರಿಕಲ್ಪನೆಯನ್ನು ಎತ್ತಿ ಹಿಡಿದಿವೆ.

ಪ್ರಸ್ತುತ ರಾಜ್ಯದಲ್ಲಿ ೫೯೬೩ ಗ್ರಾಮ ಪಂಚಾಯಿತಿಗಳಿವೆ. ೯೧,೫೦೦ ಸದಸ್ಯರು ಜನರಿಂದ ನೇರವಾಗಿ ಆಯ್ಕೆಯಾಗಿದ್ದಾರೆ. ಅಧಿಕಾರ ಮೊಟಕುಗೊಳಿಸುವ ಪ್ರಸ್ತಾವನೆಯಂತೆ ಇಂತಹ ಸಾಂಸ್ಥಿಕ ಪ್ರಾತಿನಿಧ್ಯದ ಚುನಾಯಿತ ಮುಖ್ಯಸ್ಥರಾದ ಗ್ರಾಪಂ ಅಧ್ಯಕ್ಷರ ಹಣಕಾಸು ಮತ್ತು ಇತರೆ ಕೆಲವು ಅಧಿಕಾರಗಳು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರಿಗೆ ವರ್ಗಾವಣೆಯಾಗಿದ್ದರೆ ಗ್ರಾಪಂ ಅಧ್ಯಕ್ಷರಿಗೆ ಮತ್ತು ಇಡೀ ಗ್ರಾಮ ಆಡಳಿತದ ಚುನಾಯಿತ ಸದಸ್ಯರಿಗೆ ದೊಡ್ಡ ಮಟ್ಟದ ಹಿನ್ನಡೆಯಾಗುತ್ತಿತ್ತು. ಗ್ರಾಮ ಪಂಚಾಯಿತಿಯ ಹಣಕಾಸಿನ ವ್ಯವಹಾರವನ್ನು ಸರ್ಕಾರ ಸೂಚಿಸಿರುವ ಅಧಿಕಾರಿಗಳು ಮತ್ತು ಪ್ರಾಧಿಕಾರ ನಿರ್ವಹಿಸಬಹುದಿತ್ತು. ಇಂತಹ ಅಧಿಕಾರ ಅಧ್ಯಕ್ಷರಿಗೆ ಇರುತಿತ್ತು. ನರೇಗಾ, ವಿವಿಧ ವಸತಿ ಯೋಜನೆಗಳ ಅನುಷ್ಟಾನ, ಹಣಕಾಸಿನ ನಿಧಿ, ತೆರಿಗೆ, ವೆಚ್ಚ ಇತ್ಯಾದಿ ಎಲ್ಲ ಚೆಕ್‌ಗಳಿಗೂ ಪಿಡಿಒ ಅಥವಾ ಕಾರ್ಯದರ್ಶಿ ಜೊತೆಗೆ ಜಂಟಿಯಾಗಿ ಅಧ್ಯಕ್ಷರ ಸಹಿ ಇರುತ್ತಿತ್ತು. ಗ್ರಾಪಂ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ನಿರ್ಣಯ ತೆಗೆದುಕೊಂಡ ನಂತರ ಪಂಚಾಯಿತಿ ನಿರ್ಣಯ ಸಂಖ್ಯೆ, ದಿನಾಂಕ ನಮೂದಿಸಿ ಇ-ಸ್ವತ್ತು ತಂತ್ರಾಂಶದ ಮೂಲಕ ತೆರಿಗೆ ನಿರ್ಧಾರ ಪಟ್ಟಿಯನ್ನು ವಿತರಿಸಲಾಗುತಿತ್ತು. ಗ್ರಾಪಂ ವ್ಯಾಪ್ತಿಯ ಗೃಹ, ವಾಣಿಜ್ಯ, ಕಟ್ಟಡ ಕಾಮಗಾರಿ, ಗಣಿಗಾರಿಕೆ, ಅಂಗಡಿ, ಹೋಟೆಲ್ ಇತರ ವಹಿವಾಟುಗಳ ಆರಂಭಕ್ಕೆ ಪರವಾನಿಗಿ ಮತ್ತು ಇ-ಸ್ವತ್ತು ನೀಡುವುದರ ಸಂಬಂಧ ಅಧ್ಯಕ್ಷರ ಅಧಿಕಾರಕ್ಕೆ ಕತ್ತರಿ ಬೀಳುತ್ತಿತ್ತು.

ಒಂದು ವೇಳೆ ಹೀಗಾಗಿದ್ದರೆ, ಅಧಿಕಾರ ವಿಕೇಂದ್ರಿಕರಣ ಮತ್ತು ಗ್ರಾಮ ಸ್ವರಾಜ್ ಆಶಯಕ್ಕೆ ದೊಡ್ಡ ಪೆಟ್ಟು ಬೀಳುತ್ತಿತ್ತು. ಗ್ರಾಮದ ಆಡಳಿತದಲ್ಲಿ ಚುನಾಯಿತ ಸದಸ್ಯರ ಮಾತಿಗೆ ಕಿಮ್ಮತ್ತೇ ಇರುತ್ತಿರಲಿಲ್ಲ. ಅಧಿಕಾರಿಶಾಹಿಗಳು ಸದಸ್ಯರ ಸಲಹೆ, ಸೂಚನೆಗಳನ್ನು ಕಡೆಗಣಿಸಿ ತಮಗೆ ಬೇಕಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಚುನಾಯಿತ ಸದಸ್ಯರು ಮತ್ತು ಅಧಿಕಾರಿಗಳ ನಡುವೆ ಸಂವಹನ ಮತ್ತು ಸಂಯೋಜನೆಯ ಕೊರತೆಯುಂಟಾಗುವ ಮೂಲಕ ಹಾಗೂ ವಿಶ್ವಾಸ ಕಡಿಮೆಯಾಗುವ ಮೂಲಕ ಗ್ರಾಮಗಳ ಅಭಿವೃದ್ಧಿ ಕುಂಠಿತವಾಗುತಿತ್ತು. ಒಂದು ಹಂತವನ್ನು ಮೀರಿ ಇವರುಗಳ ನಡುವೆ ಗಲಾಟೆ, ಜಗಳ ಆಗುವ ಪರಿಸ್ಥಿತಿ ನಿರ್ಮಾಣವಾದರೂ ಅಚ್ಚರಿ ಪಡಬೇಕಾಗಿರಲಿಲ್ಲ. ಸಭೆಗಳು ಸರಿಯಾಗಿ ಮತ್ತು ಸೂಕ್ತ ರೀತಿಯಲ್ಲಿ ನಡೆಯಲು ಉತ್ತಮ ವಾತಾವರಣ ಇಲ್ಲವಾಗುತ್ತಿತ್ತು. ಆಯ್ಕೆ ಮಾಡಿದ ಜನರಿಂದಲೂ ಗೌರವ ಸಿಗುತ್ತಿರಲಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಗಳ ಚುನಾವಣೆಗಳು ನಡೆಯದೆ ಇರುವುದರಿಂದ ಅಲ್ಲಿನ ಆಡಳಿತದಲ್ಲಿ ಅಧಿಕಾರಗಳದ್ದೆ ದರ್ಬಾರ್ ಆಗುತ್ತಿದೆಯಲ್ಲ ಹಾಗೆ.
ಒಟ್ಟಾರೆಯಾಗಿ ತ್ರಿಸ್ತರ ಪಂಚಾಯಿತಿ ವ್ಯವಸ್ಥೆಯ ಪ್ರಬಲಸ್ತರವಾಗಿರುವ ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳ ಅಧಿಕಾರವನ್ನು ಕುಂದಿಸುವ ಎಲ್ಲ ಪ್ರಯತ್ನಗಳನ್ನು ತಳ್ಳಿ ಹಾಕುವ ಮೂಲಕ ಅಧಿಕಾರ ವಿಕೇಂದ್ರಕರಣ ಮತ್ತು ಗ್ರಾಮ ಸ್ವರಾಜ್ ಆಶಯವನ್ನು ಗೌರವಿಸಿರುವ ಸರ್ಕಾರದ ನಿಲುವು ಸ್ವಾಗತಾರ್ಹವಾಗಿದೆ.

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago