ಎಡಿಟೋರಿಯಲ್

ಯೂರಿಯಾ ಅಕ್ರಮ ದಾಸ್ತಾನು; ಸಮಗ್ರ ತನಿಖೆಯಾಗಿ ಸತ್ಯಾಂಶ ಹೊರಬರಲಿ

ಚಾಮರಾಜನಗರ ಜಿಲ್ಲೆಯಲ್ಲಿ ರಸಗೊಬ್ಬರಗಳ ಕೊರತೆಯಿಂದ ರೈತರು ಸಂಕಷ್ಟ ಪಡುತ್ತಿರುವ ಹೊತ್ತಿನಲ್ಲೇ ಗುಂಡ್ಲುಪೇಟೆ ತಾಲ್ಲೂಕಿನ ಶಿವಪುರದ ಹೊರವಲಯದ ಜಮೀನೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾ ರಸ ಗೊಬ್ಬರದ ೫೧೦ ಚೀಲಗಳನ್ನು ಪೊಲೀಸರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಜಮೀನಿನಲ್ಲಿ ಅಕ್ರಮವಾಗಿ ಯೂರಿಯಾವನ್ನು ಸಂಗ್ರಹಿಸಿ ನೆರೆಯ ತಮಿಳುನಾಡು ರಾಜ್ಯಕ್ಕೆ ಲಾರಿ ಮೂಲಕ ಸಾಗಿಸಲು ಸಿದ್ದತೆ ನಡೆಸುತ್ತಿದ್ದ ವೇಳೆ ದಾಳಿ ಮಾಡಿ ವಶಪಡಿಸಿಕೊಳ್ಳಲಾಗಿದೆ. ಗೊಬ್ಬರದ ಅಕ್ರಮ ದಾಸ್ತಾನು ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕು ಕೇರಳ ಮತ್ತು ತಮಿಳುನಾಡಿನ ಗಡಿಯಾಗಿದ್ದು ಕರ್ನಾಟಕ ರಾಜ್ಯದಿಂದ
ನಿರಂತರವಾಗಿ ರಸಗೊಬ್ಬರಗಳು ಅಕ್ರಮವಾಗಿ ತಮಿಳುನಾಡಿಗೆ ಸಾಗಣೆಯಾಗುತ್ತಿದೆ. ನಮ್ಮಲ್ಲಿ ಕಡಿಮೆ
ಬೆಲೆಗೆ ಗೊಬ್ಬರ ತೆಗೆದುಕೊಂಡು ತಮಿಳುನಾಡಿನಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಇದರ ಹಿಂದೆ ದೊಡ್ಡ
ಜಾಲವಿದೆ ಎಂಬ ಆರೋಪ ಕೇಳಿಬಂದಿದೆ. ಗೊಬ್ಬರದ ಕಳ್ಳ ಸಾಗಾಟದ ಹಿಂದೆ ‘ಪ್ರಬಲ’ರ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಕೆಲವು ರಾಜಕೀಯ ಮುಖಂಡರು ಪ್ರಕರಣ ಮುಚ್ಚಿಹಾಕಲು ಹಣ ಪಡೆದಿದ್ದಾರೆ ಎಂಬ ಅನುಮಾನವಿದೆ. ಸೂಕ್ತ ತನಿಖೆಯಾದರೆ
ಆರೋಪಿಗಳು ಸಿಕ್ಕಿ ಬೀಳಲಿದ್ದಾರೆ. ಅಕ್ರಮ ದಾಸ್ತಾನು ಮಾಡಿದ್ದ ರಸಗೊಬ್ಬರವನ್ನು ವಶಪಡಿಸಿಕೊಂಡು ಕೃಷಿ ಇಲಾಖೆಗೆ ಒಪ್ಪಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಯುತ್ತಿದೆ.

ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ರೈತರಿಗೆ ಸರಿಯಾಗಿ ಗೊಬ್ಬರ ಸಿಗುತ್ತಿಲ್ಲ. ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು, ಸಂಸದರು ರೈತರಿಗೆ ಬೇಕಾದ ರಸಗೊಬ್ಬರವನ್ನು ಸಕಾಲದಲ್ಲಿ ಒದಗಿಸಲು ವಿಫಲವಾಗಿದ್ದಾರೆ. ಶಾಸಕ ಸಿ.ಎಸ್. ನಿರಂಜನಕುಮಾರ್ ಬೆಂಬಲಿಗ ಕಲ್ಲಿಗೌಡನಹಳ್ಳಿ ಸುರೇಶ್ ಎಂಬವರು ಅಕ್ರಮ ದಾಸ್ತಾನು ಪ್ರಕರಣವನ್ನು ಮುಚ್ಚಿ ಹಾಕಿಸುವುದಾಗಿ ಹೇಳಿ ಕೇರಳ ಮೂಲದ ವ್ಯಕ್ತಿಯಿಂದ ೫೦ ಸಾವಿರ ಹಣವನ್ನು ಫೋನ್ ಪೇ ಮೂಲಕ ಪಡೆದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಸುರೇಶ್ ಈ ಆರೋಪವನ್ನು ನಿರಾಕರಿಸಿದ್ದಾರೆ.

ಅಕ್ರಮವಾಗಿ ದಾಸ್ತಾನು ಮಾಡಿ ಸಾಗಾಣೆ ಮಾಡಲು ಯೂರಿಯಾ ಗೊಬ್ಬರ ಎಲ್ಲಿಂದ ಬಂತು? ಇದನ್ನು ತರಿಸಿದ್ದವರು ಯಾರು?
ಇದರ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಬೇಕಿದೆ. ಆರೋಪ ಮತ್ತು ಪ್ರತ್ಯಾರೋಪ ಮಾಡಿ ಪ್ರಕರಣದ ತನಿಖೆಯನ್ನು ದಿಕ್ಕು ತಪ್ಪಿಸುವ ಪ್ರಯತ್ನವನ್ನು ಯಾರು ನಡೆಸಬಾರದು.

ಕಳೆದ ಐದಾರು ತಿಂಗಳಿಂದ ತಾಲ್ಲೂಕಿನ ರೈತರು ಯೂರಿಯಾ ಗೊಬ್ಬರಕ್ಕೆ ಪರದಾಡುವಂಥ ಸ್ಥಿತಿಯಿದೆ. ಮುಸುಕಿನ ಜೋಳ, ಭತ್ತ, ಹತ್ತಿ, ಆಲೂಗಡ್ಡೆ, ಅರಿಶಿಣ, ಬಾಳೆ, ಎಲೆಕೋಸು, ಸೂರ್ಯಕಾಂತಿ ಬೆಳೆಗಳ ಬೆಳವಣಿಗೆಗೆ ಯೂರಿಯಾ ಅವಶ್ಯಕತೆಯಿದೆ. ತಾಲ್ಲೂಕಿನ ರೈತರು ಯೂರಿಯಾ ಗೊಬ್ಬರ ಖರೀದಿಸಲು ಅಂಗಡಿಗಳಲ್ಲಿ ಕೇಳಿದರೆ ‘ಯೂರಿಯಾ ಗೊಬ್ಬರ ಸರ್ಕಾರದಿಂದ ಸರಬರಾಜಾಗುತ್ತಿಲ್ಲ’ ಎಂದು ಮಾಲೀಕರು ಅಲೆದಾಡಿಸಿದ್ದಾರೆ. ಗೊಬ್ಬರ ಹಾಕಲೇಬೇಕು ಎಂಬ ಹಂಬಲದಿಂದ ಚಾಮರಾಜನಗರ, ಕೊಳ್ಳೆಗಾಲ ಹಾಗೂ ದೂರದ ನಗರಗಳಿಂದ ಯೂರಿಯಾವನ್ನು ಖರೀದಿಸಿ ತಂದು ಬೆಳೆದ ಫಸಲಿಗೆ ಹಾಕುತ್ತಿದ್ದಾರೆ. ರೈತರಿಗೆ ೧ ಮೂಟೆ ಯೂರಿಯಾ ಸಿಗದಿದ್ದ ಸಂದರ್ಭದಲ್ಲಿ ಶಿವಪುರದ ಜಮೀನಿನಲ್ಲಿ ೫೧೦ ಯೂರಿಯಾ ಗೊಬ್ಬರ ಮೂಟೆ ಹೇಗೆ ಶೇಖರಣೆ ಮಾಡಲು ಸಾಧ್ಯವಾಯಿತು?

ಹಿಂದೆ ತಾಲ್ಲೂಕಿನಲ್ಲಿ ನಕಲಿ ಗೊಬ್ಬರದ ದಂಧೆ ಕೂಡ ಬೆಳಕಿಗೆ ಬಂದಿತ್ತು. ಗುಂಡ್ಲುಪೇಟೆ ಕ್ಷೇತ್ರದಲ್ಲಿ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ಈ ಅಕ್ರಮ ದಾಸ್ತಾನು ಬಗ್ಗೆ ತುಟಿ ಬಿಚ್ಚಿಲ್ಲ. ರೈತರ ಬಗ್ಗೆ ಕಾಳಜಿ ಇದ್ದರೆ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದು ಕನಿಷ್ಠ ಒಂದು ಹೇಳಿಕೆ ನೀಡಬಹುದಿತ್ತು ಇಲ್ಲವೇ ಪ್ರತಿಭಟನೆ ಮಾಡಬೇಕಿತ್ತು. ಇದಾವುದನ್ನು ಪ್ರತಿಪಕ್ಷದವರು ಮಾಡುತ್ತಿಲ್ಲ. ಯಾವ ಆಂಗಡಿಯಿಂದ ಖರೀದಿ ಮಾಡಿದ್ದಾರೆ. ಯಾರು ಖರೀದಿ ಮತ್ತು ಸಾಗಣೆ ಮಾಡಲು ಯತ್ನಿಸಿದ್ದಾರೆ. ಎಷ್ಟು ದಿನದಿಂದ ಈ ಕಳ್ಳಸಾಗಣೆ ನಡೆಯುತ್ತಿತ್ತು ಎಂಬುದರ ಬಗ್ಗೆ ಸಮಗ್ರ ತನಿಖೆ ಆಗಬೇಕಿದೆ. ಜತೆಗೆ ಅಕ್ರಮ ಸಾಗಣೆಗೆ ಸರಬರಾಜು ಮಾಡಿದ ಅಂಗಡಿ ಲೈಸನ್ಸ್ ರದ್ದು ಪಡಿಸಬೇಕು.

ಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ ತಮಿಳುನಾಡಿಗೆ ಸಾಗಣೆ ಮಾಡುತ್ತಿದ್ದರೂ ಗುಂಡ್ಲುಪೇಟೆಯಲ್ಲಿರುವ ಆರ್‌ಟಿಒ ಚೆಕ್‌ಪೋಸ್ಟ್ ನಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಏನು ಮಾಡುತ್ತಿದ್ದರು? ಬಂಡೀಪುರ ಅರಣ್ಯದೊಳಗಿನಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಕೆಕ್ಕನಹಳ್ಳ ಚೆಕ್‌ಪೋಸ್ಟ್‌ನಲ್ಲಿ ಅರಣ್ಯ ಇಲಾಖೆಯ ಚೆಕ್‌ಪೋಸ್ಟ್ ಇದೆ. ಇಲ್ಲಿರುವ ಅಧಿಕಾರಿಗಳು ತಪಾಸಣೆ ಮಾಡುವುದಿಲ್ಲವೇ? ತಮಿಳುನಾಡಿಗೆ ಬರುವ ಮತ್ತು ಹೋಗುವ ವಾಹನಗಳ ತಪಾಸಣೆಯೇ ನಡೆಯುವುದಿಲ್ಲ, ರಾತ್ರಿ ವೇಳೆ ಚೆಕ್‌ಪೋಸ್ಟ್ ಸಿಬ್ಬಂದಿ ಹಣ ಪಡೆದು ಬಿಟ್ಟು ಬಿಡುತ್ತಾರೆ ಎಂದು ಕೇಳಿಬರುವ ಆರೋಪದಲ್ಲಿ ಮೇಲ್ನೋಟಕ್ಕೆ ಸತ್ಯಾಂಶವಿದೆ ಎನಿಸದಿರದು. ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಾಗಿ ವಾಹನಗಳ ತಪಾಸಣೆ ನಡೆದರೆ ಕಳ್ಳ ಸಾಗಣೆ ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಚೆಕ್‌ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಬೇಕು. ಅಗತ್ಯ ಸಿಬ್ಬಂದಿ ನಿಯೋಜಿಸಬೇಕು, ಸಿಬ್ಬಂದಿ ಸೂಕ್ತ ಶಸ್ತ್ರಾಸ್ತ
ನೀಡಬೇಕಿದೆ. ಮುಖ್ಯವಾಗಿ ರೈತರಿಗೆ ಸಕಾಲದಲ್ಲಿ ರಸಗೊಬ್ಬರಗಳು ಲಭ್ಯವಾಗುವಂತೆ ಕ್ರಮಕೈಗೊಳ್ಳಬೇಕಿದೆ.

andolana

Recent Posts

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

14 mins ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

26 mins ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

57 mins ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

2 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

2 hours ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago