ಚಾಮರಾಜನಗರ ಜಿಲ್ಲೆಯಲ್ಲಿ ರಸಗೊಬ್ಬರಗಳ ಕೊರತೆಯಿಂದ ರೈತರು ಸಂಕಷ್ಟ ಪಡುತ್ತಿರುವ ಹೊತ್ತಿನಲ್ಲೇ ಗುಂಡ್ಲುಪೇಟೆ ತಾಲ್ಲೂಕಿನ ಶಿವಪುರದ ಹೊರವಲಯದ ಜಮೀನೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾ ರಸ ಗೊಬ್ಬರದ ೫೧೦ ಚೀಲಗಳನ್ನು ಪೊಲೀಸರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಜಮೀನಿನಲ್ಲಿ ಅಕ್ರಮವಾಗಿ ಯೂರಿಯಾವನ್ನು ಸಂಗ್ರಹಿಸಿ ನೆರೆಯ ತಮಿಳುನಾಡು ರಾಜ್ಯಕ್ಕೆ ಲಾರಿ ಮೂಲಕ ಸಾಗಿಸಲು ಸಿದ್ದತೆ ನಡೆಸುತ್ತಿದ್ದ ವೇಳೆ ದಾಳಿ ಮಾಡಿ ವಶಪಡಿಸಿಕೊಳ್ಳಲಾಗಿದೆ. ಗೊಬ್ಬರದ ಅಕ್ರಮ ದಾಸ್ತಾನು ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕು ಕೇರಳ ಮತ್ತು ತಮಿಳುನಾಡಿನ ಗಡಿಯಾಗಿದ್ದು ಕರ್ನಾಟಕ ರಾಜ್ಯದಿಂದ
ನಿರಂತರವಾಗಿ ರಸಗೊಬ್ಬರಗಳು ಅಕ್ರಮವಾಗಿ ತಮಿಳುನಾಡಿಗೆ ಸಾಗಣೆಯಾಗುತ್ತಿದೆ. ನಮ್ಮಲ್ಲಿ ಕಡಿಮೆ
ಬೆಲೆಗೆ ಗೊಬ್ಬರ ತೆಗೆದುಕೊಂಡು ತಮಿಳುನಾಡಿನಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಇದರ ಹಿಂದೆ ದೊಡ್ಡ
ಜಾಲವಿದೆ ಎಂಬ ಆರೋಪ ಕೇಳಿಬಂದಿದೆ. ಗೊಬ್ಬರದ ಕಳ್ಳ ಸಾಗಾಟದ ಹಿಂದೆ ‘ಪ್ರಬಲ’ರ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಕೆಲವು ರಾಜಕೀಯ ಮುಖಂಡರು ಪ್ರಕರಣ ಮುಚ್ಚಿಹಾಕಲು ಹಣ ಪಡೆದಿದ್ದಾರೆ ಎಂಬ ಅನುಮಾನವಿದೆ. ಸೂಕ್ತ ತನಿಖೆಯಾದರೆ
ಆರೋಪಿಗಳು ಸಿಕ್ಕಿ ಬೀಳಲಿದ್ದಾರೆ. ಅಕ್ರಮ ದಾಸ್ತಾನು ಮಾಡಿದ್ದ ರಸಗೊಬ್ಬರವನ್ನು ವಶಪಡಿಸಿಕೊಂಡು ಕೃಷಿ ಇಲಾಖೆಗೆ ಒಪ್ಪಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಯುತ್ತಿದೆ.
ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ರೈತರಿಗೆ ಸರಿಯಾಗಿ ಗೊಬ್ಬರ ಸಿಗುತ್ತಿಲ್ಲ. ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು, ಸಂಸದರು ರೈತರಿಗೆ ಬೇಕಾದ ರಸಗೊಬ್ಬರವನ್ನು ಸಕಾಲದಲ್ಲಿ ಒದಗಿಸಲು ವಿಫಲವಾಗಿದ್ದಾರೆ. ಶಾಸಕ ಸಿ.ಎಸ್. ನಿರಂಜನಕುಮಾರ್ ಬೆಂಬಲಿಗ ಕಲ್ಲಿಗೌಡನಹಳ್ಳಿ ಸುರೇಶ್ ಎಂಬವರು ಅಕ್ರಮ ದಾಸ್ತಾನು ಪ್ರಕರಣವನ್ನು ಮುಚ್ಚಿ ಹಾಕಿಸುವುದಾಗಿ ಹೇಳಿ ಕೇರಳ ಮೂಲದ ವ್ಯಕ್ತಿಯಿಂದ ೫೦ ಸಾವಿರ ಹಣವನ್ನು ಫೋನ್ ಪೇ ಮೂಲಕ ಪಡೆದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಸುರೇಶ್ ಈ ಆರೋಪವನ್ನು ನಿರಾಕರಿಸಿದ್ದಾರೆ.
ಅಕ್ರಮವಾಗಿ ದಾಸ್ತಾನು ಮಾಡಿ ಸಾಗಾಣೆ ಮಾಡಲು ಯೂರಿಯಾ ಗೊಬ್ಬರ ಎಲ್ಲಿಂದ ಬಂತು? ಇದನ್ನು ತರಿಸಿದ್ದವರು ಯಾರು?
ಇದರ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಬೇಕಿದೆ. ಆರೋಪ ಮತ್ತು ಪ್ರತ್ಯಾರೋಪ ಮಾಡಿ ಪ್ರಕರಣದ ತನಿಖೆಯನ್ನು ದಿಕ್ಕು ತಪ್ಪಿಸುವ ಪ್ರಯತ್ನವನ್ನು ಯಾರು ನಡೆಸಬಾರದು.
ಕಳೆದ ಐದಾರು ತಿಂಗಳಿಂದ ತಾಲ್ಲೂಕಿನ ರೈತರು ಯೂರಿಯಾ ಗೊಬ್ಬರಕ್ಕೆ ಪರದಾಡುವಂಥ ಸ್ಥಿತಿಯಿದೆ. ಮುಸುಕಿನ ಜೋಳ, ಭತ್ತ, ಹತ್ತಿ, ಆಲೂಗಡ್ಡೆ, ಅರಿಶಿಣ, ಬಾಳೆ, ಎಲೆಕೋಸು, ಸೂರ್ಯಕಾಂತಿ ಬೆಳೆಗಳ ಬೆಳವಣಿಗೆಗೆ ಯೂರಿಯಾ ಅವಶ್ಯಕತೆಯಿದೆ. ತಾಲ್ಲೂಕಿನ ರೈತರು ಯೂರಿಯಾ ಗೊಬ್ಬರ ಖರೀದಿಸಲು ಅಂಗಡಿಗಳಲ್ಲಿ ಕೇಳಿದರೆ ‘ಯೂರಿಯಾ ಗೊಬ್ಬರ ಸರ್ಕಾರದಿಂದ ಸರಬರಾಜಾಗುತ್ತಿಲ್ಲ’ ಎಂದು ಮಾಲೀಕರು ಅಲೆದಾಡಿಸಿದ್ದಾರೆ. ಗೊಬ್ಬರ ಹಾಕಲೇಬೇಕು ಎಂಬ ಹಂಬಲದಿಂದ ಚಾಮರಾಜನಗರ, ಕೊಳ್ಳೆಗಾಲ ಹಾಗೂ ದೂರದ ನಗರಗಳಿಂದ ಯೂರಿಯಾವನ್ನು ಖರೀದಿಸಿ ತಂದು ಬೆಳೆದ ಫಸಲಿಗೆ ಹಾಕುತ್ತಿದ್ದಾರೆ. ರೈತರಿಗೆ ೧ ಮೂಟೆ ಯೂರಿಯಾ ಸಿಗದಿದ್ದ ಸಂದರ್ಭದಲ್ಲಿ ಶಿವಪುರದ ಜಮೀನಿನಲ್ಲಿ ೫೧೦ ಯೂರಿಯಾ ಗೊಬ್ಬರ ಮೂಟೆ ಹೇಗೆ ಶೇಖರಣೆ ಮಾಡಲು ಸಾಧ್ಯವಾಯಿತು?
ಹಿಂದೆ ತಾಲ್ಲೂಕಿನಲ್ಲಿ ನಕಲಿ ಗೊಬ್ಬರದ ದಂಧೆ ಕೂಡ ಬೆಳಕಿಗೆ ಬಂದಿತ್ತು. ಗುಂಡ್ಲುಪೇಟೆ ಕ್ಷೇತ್ರದಲ್ಲಿ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ಈ ಅಕ್ರಮ ದಾಸ್ತಾನು ಬಗ್ಗೆ ತುಟಿ ಬಿಚ್ಚಿಲ್ಲ. ರೈತರ ಬಗ್ಗೆ ಕಾಳಜಿ ಇದ್ದರೆ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದು ಕನಿಷ್ಠ ಒಂದು ಹೇಳಿಕೆ ನೀಡಬಹುದಿತ್ತು ಇಲ್ಲವೇ ಪ್ರತಿಭಟನೆ ಮಾಡಬೇಕಿತ್ತು. ಇದಾವುದನ್ನು ಪ್ರತಿಪಕ್ಷದವರು ಮಾಡುತ್ತಿಲ್ಲ. ಯಾವ ಆಂಗಡಿಯಿಂದ ಖರೀದಿ ಮಾಡಿದ್ದಾರೆ. ಯಾರು ಖರೀದಿ ಮತ್ತು ಸಾಗಣೆ ಮಾಡಲು ಯತ್ನಿಸಿದ್ದಾರೆ. ಎಷ್ಟು ದಿನದಿಂದ ಈ ಕಳ್ಳಸಾಗಣೆ ನಡೆಯುತ್ತಿತ್ತು ಎಂಬುದರ ಬಗ್ಗೆ ಸಮಗ್ರ ತನಿಖೆ ಆಗಬೇಕಿದೆ. ಜತೆಗೆ ಅಕ್ರಮ ಸಾಗಣೆಗೆ ಸರಬರಾಜು ಮಾಡಿದ ಅಂಗಡಿ ಲೈಸನ್ಸ್ ರದ್ದು ಪಡಿಸಬೇಕು.
ಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ ತಮಿಳುನಾಡಿಗೆ ಸಾಗಣೆ ಮಾಡುತ್ತಿದ್ದರೂ ಗುಂಡ್ಲುಪೇಟೆಯಲ್ಲಿರುವ ಆರ್ಟಿಒ ಚೆಕ್ಪೋಸ್ಟ್ ನಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಏನು ಮಾಡುತ್ತಿದ್ದರು? ಬಂಡೀಪುರ ಅರಣ್ಯದೊಳಗಿನಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಕೆಕ್ಕನಹಳ್ಳ ಚೆಕ್ಪೋಸ್ಟ್ನಲ್ಲಿ ಅರಣ್ಯ ಇಲಾಖೆಯ ಚೆಕ್ಪೋಸ್ಟ್ ಇದೆ. ಇಲ್ಲಿರುವ ಅಧಿಕಾರಿಗಳು ತಪಾಸಣೆ ಮಾಡುವುದಿಲ್ಲವೇ? ತಮಿಳುನಾಡಿಗೆ ಬರುವ ಮತ್ತು ಹೋಗುವ ವಾಹನಗಳ ತಪಾಸಣೆಯೇ ನಡೆಯುವುದಿಲ್ಲ, ರಾತ್ರಿ ವೇಳೆ ಚೆಕ್ಪೋಸ್ಟ್ ಸಿಬ್ಬಂದಿ ಹಣ ಪಡೆದು ಬಿಟ್ಟು ಬಿಡುತ್ತಾರೆ ಎಂದು ಕೇಳಿಬರುವ ಆರೋಪದಲ್ಲಿ ಮೇಲ್ನೋಟಕ್ಕೆ ಸತ್ಯಾಂಶವಿದೆ ಎನಿಸದಿರದು. ಚೆಕ್ಪೋಸ್ಟ್ಗಳಲ್ಲಿ ಕಟ್ಟುನಿಟ್ಟಾಗಿ ವಾಹನಗಳ ತಪಾಸಣೆ ನಡೆದರೆ ಕಳ್ಳ ಸಾಗಣೆ ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಚೆಕ್ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಬೇಕು. ಅಗತ್ಯ ಸಿಬ್ಬಂದಿ ನಿಯೋಜಿಸಬೇಕು, ಸಿಬ್ಬಂದಿ ಸೂಕ್ತ ಶಸ್ತ್ರಾಸ್ತ
ನೀಡಬೇಕಿದೆ. ಮುಖ್ಯವಾಗಿ ರೈತರಿಗೆ ಸಕಾಲದಲ್ಲಿ ರಸಗೊಬ್ಬರಗಳು ಲಭ್ಯವಾಗುವಂತೆ ಕ್ರಮಕೈಗೊಳ್ಳಬೇಕಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…