ಎಡಿಟೋರಿಯಲ್

ಕಾಡಾನೆ ಹಾವಳಿ ತಡೆಗೆ ವೈಜ್ಞಾನಿಕ ಯೋಜನೆ ಘೋಷಣೆಯಾಗಲಿ

ಕೊಡಗು ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತ ಪಡಿಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಆನೆ ಟಾಸ್ಕ್ ಫೋರ್ಸ್ ಘೋಷಿಸಿದೆ. ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದ್ದರೂ ಇದು ಪರಿಣಾಮಕಾರಿಯಾಗಿ ಎಷ್ಟರಮಟ್ಟಿಗೆ ಜಾರಿಯಾಗಲಿದೆ ಎಂಬುದೇ ಪ್ರಶ್ನೆಯಾಗಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲೆಫೆಂಟ್ ಟಾಸ್ಕ್ ಫೋರ್ಸ್ ಅನ್ನು ಪ್ರತಿ ಜಿಲ್ಲೆಗೊಂದರಂತೆ ರಚಿಸಲು ಸರ್ಕಾರ ಆದೇಶ ನೀಡಿದೆ. ಕಾಡಾನೆ ಹಾವಳಿ ಇರುವ ಪ್ರದೇಶಗಳಲ್ಲಿ ಗಸ್ತು ತಿರುಗುವುದು, ಜನವಸತಿ, ಕೃಷಿ ಪ್ರದೇಶ ಹಾಗೂ ಕಾಫಿ ಎಸ್ಟೇಟ್‌ಗಳಲ್ಲಿ ಆನೆಗಳ ಚಲನವಲನ ಗುರುತಿಸಿ ಅರಣ್ಯಕ್ಕೆ ಆನೆಗಳನ್ನು ಹಿಮ್ಮೆಟ್ಟಿಸುವುದು ಮತ್ತಿತರ ಕಾರ್ಯಗಳನ್ನು ಈ ಟಾಸ್ಕ್ ಫೋರ್ಸ್ ಮಾಡಬೇಕು.

ಕಾಡಾನೆ ಇರುವ ಪ್ರದೇಶಗಳಲ್ಲಿ ಸ್ಥಳೀಯರಿಗೆ ಮಾಹಿತಿ ನೀಡುವುದು, ಆ ಭಾಗದಲ್ಲಿ ಸಂಚರಿಸದಂತೆ ಎಚ್ಚರಿಕೆ ನೀಡುವ ಕೆಲಸವನ್ನು ಈ ಟಾಸ್ಕ್ ಫೋರ್ಸ್ ಮಾಡಬೇಕಿದೆ.

ಪ್ರತಿ ಟಾಸ್ಕ್ ಫೋರ್ಸ್ ಕೇಂದ್ರಸ್ಥಾನದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಿ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕರಿಗೆ ತಿಳಿಸಬೇಕು. ಅರಣ್ಯ ಪಡೆ ಮುಖ್ಯಸ್ಥರು ಜಿಲ್ಲಾ ಟಾಸ್ಕ್ ಫೋರ್ಸ್‌ಗೆ ವಲಯ ಅರಣ್ಯಾಧಿಕಾರಿ, ಉಪವಲಯ ಅರಣ್ಯಾಧಿಕಾರಿ ಹಾಗೂ ಅರಣ್ಯ ರಕ್ಷಕರನ್ನು ಸ್ಥಳಕ್ಕೆ ನಿಯುಕ್ತಿಗೊಳಿಸಬೇಕು. ಆನೆ ಹಾವಳಿ ಪ್ರದೇಶಗಳಿಗೆ ಕೂಡಲೇ ತಲುಪಲು ಅನುಕೂಲವಾಗುವಂತೆ ಜಿಲ್ಲಾ ಟಾಸ್ಕ್ ಫೋರ್ಸ್‌ಗಳಿಗೆ ೩ ಬೊಲೆರೋ ಜೀಪ್ ಒದಗಿಸಲು ಸರ್ಕಾರ ಆದೇಶ ನೀಡಿದೆ.

ಕೊಡಗು ಜಿಲ್ಲೆಗೆ ಸಂಬಂಧಪಟ್ಟಂತೆ ೨೦೧೪ರಿಂದಲೇ ಕಾಡಾನೆಗಳನ್ನು ಓಡಿಸಲು ಕ್ಷಿಪ್ರಪಡೆ ಎಂಬ ಪ್ರತ್ಯೇಕ ಟಾಸ್ಕ್ ಫೋರ್ಸ್ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ಈ ಟಾಸ್ಕ್ ಫೋರ್ಸ್‌ನಲ್ಲಿ ೧೩೦ ಮಂದಿ ಕಾರ್ಯನಿರ್ವಹಿಸುತ್ತಿದ್ದು, ಕಾಡಾನೆ ಹಾವಳಿ ಬಗ್ಗೆ ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ತೆರಳಿ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯನ್ನು ಕೈಗೆತ್ತಿಕೊಳ್ಳುತ್ತಿದೆ. ಆದರೂ ಕಾಡಾನೆಗಳ ಹಾವಳಿ ಹೆಚ್ಚುತ್ತಿದೆಯೇ ಹೊರತು ಕಡಿಮೆಯಾಗುತ್ತಿಲ್ಲ. ಸರ್ಕಾರದ ಈಗಿನ ಆದೇಶದ ಪ್ರಕಾರ ೩೦ ಮಂದಿ ಟಾಸ್ಕ್ ಫೋರ್ಸ್‌ಗೆ ನಿಯೋಜಿಸುವಂತೆ ಆದೇಶಿಸಿರುವುದರಿಂದ ೧೦೦ ಮಂದಿ ಕೆಲಸ ಕಳೆದುಕೊಳ್ಳುವುದರೊಂದಿಗೆ ಸ್ಥಳೀಯರಿಗೆ ಇನ್ನಷ್ಟು ಸಮಸ್ಯೆ ಎದುರಾಗಲಿದೆ.

ಕೊಡಗಿನಲ್ಲಿ ೨೦೦ಕ್ಕೂ ಅಧಿಕ ಕಾಡಾನೆಗಳು ದಾಂಧಲೆ ನಡೆಸುತ್ತಿದೆ ಎನ್ನಲಾಗಿದೆ. ಜಿಲ್ಲೆಯಾದ್ಯಂತ ಬೀಡುಬಿಟ್ಟಿರುವ ಕಾಡಾನೆಗಳನ್ನು ಓಡಿಸಲು, ನಿಯಂತ್ರಿಸಲು ೧೩೦ ಸಿಬ್ಬಂದಿಯೇ ಸಾಕಾಗುತ್ತಿರಲಿಲ್ಲ. ಹೀಗಿರುವಾಗ ಸರ್ಕಾರ ಇದೀಗ ರಚಿಸಿದ ೩೦ ಮಂದಿಯ ಟಾಸ್ಕ್ ಫೋರ್ಸ್‌ನಿಂದ ಕಾಡಾನೆ ಹಾವಳಿ ತಡೆಯಲು ಸಾಧ್ಯವಿದೆಯೇ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ.

ಸರ್ಕಾರದ ಆದೇಶದ ಪ್ರಕಾರ ಜಿಲ್ಲಾ ಕೇಂದ್ರದಲ್ಲಿ ಟಾಸ್ಕ್ ಫೋರ್ಸ್ ಕಾರ್ಯನಿರ್ವಹಿಸಲಿದೆ. ಆದರೆ ಬೆಟ್ಟ ಗುಡ್ಡಗಳಿಂದ ಕೂಡಿದ ಕೊಡಗು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕಾಡಾನೆ ಹಾವಳಿ ನಡೆದರೆ ಜಿಲ್ಲಾ ಕೇಂದ್ರದಿಂದ ನಿಯಂತ್ರಿಸಲು ಸಾಧ್ಯವಿದೆಯೇ ಎನ್ನುವ ಪ್ರಶ್ನೆಯೂ ಇದೆ. ಜೊತೆಗೆ ೫ ತಾಲ್ಲೂಕುಗಳ ಜಿಲ್ಲೆಗೆ ೩ ವಾಹನಗಳನ್ನು ಸರ್ಕಾರ ನೀಡಿದ್ದು, ವಾಹನಗಳ ಸಂಖ್ಯೆ ಕೂಡ ಸಾಕಾಗುವುದಿಲ್ಲ.

ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲೆಯ ಪ್ರತಿಯೊಂದು ಅರಣ್ಯ ವಲಯ ವ್ಯಾಪ್ತಿಯ ಕೃಷಿ ಜಮೀನುಗಳಿಗೆ ಕಾಡಾನೆಗಳು ನುಗ್ಗಿದ ಸಂದರ್ಭ ಸಾರ್ವಜನಿಕರ ಮಾಹಿತಿಯನ್ವಯ ಈಗಿರುವ ೧೩೦ ಮಂದಿಯ ಕ್ಷಿಪ್ರಪಡೆಯ ತಂಡ ಸ್ಥಳಕ್ಕೆ ದೌಡಾಯಿಸಿ ಕಾಡಾನೆಗಳನ್ನು ಕಾಡಿಗಟ್ಟುವ ಕೆಲಸ ಮಾಡುತ್ತಿದೆ. ವಾಕಿಟಾಕಿ, ಪಟಾಕಿ, ಬಂದೂಕು ಮತ್ತಿತರ ಅಗತ್ಯ ವಸ್ತುಗಳು ಈಗಾಗಲೇ ಈ ಕಾರ್ಯಪಡೆಯೊಂದಿಗಿದೆ. ಇವುಗಳಿಂದ ಪರಿಣಾಮಕಾರಿಯಾಗಿ ಕಾಡಾನೆ ನಿಯಂತ್ರಿಸಲು ಸಾಧ್ಯವಾಗಿಲ್ಲ.

ಇದೀಗ ಇದೇ ಕೆಲಸಕ್ಕೆ ಹೊಸ ಹೆಸರನ್ನು ನೀಡಿರುವುದರಿಂದ ಕಾಡಾನೆ ಹಾವಳಿ ತಡೆಗಟ್ಟಲು ಸಾಧ್ಯವೇ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ.
ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಡೆಗೆ ರೈತ ಸಂಘದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಇತ್ತಿಚೆಗೆ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಇತರ ಜಿಲ್ಲೆಗಳಲ್ಲೂ ಕಾಡಾನೆ ಹಾವಳಿ ತಡೆಗೆ ವಿಫಲವಾದ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಹೀಗಾಗಿ ಜನರ ಕಣ್ಣೊರೆಸುವ ತಂತ್ರವಾಗಿ ಟಾಸ್ಕ್ ಫೋರ್ಸ್ ರಚಿಸುವುದಕ್ಕಿಂತ ವೈಜ್ಞಾನಿಕವಾಗಿ ಸೂಕ್ತ ಯೋಜನೆ ಜಾರಿಗೊಳಿಸಬೇಕಾದ ಅನಿವಾರ್ಯತೆ ಇದೆ.

ಕಾಡಾನೆ ನಿಯಂತ್ರಣಕ್ಕೆ ಹೊಸ ತಂತ್ರಜ್ಞಾನದ ಅವಶ್ಯಕತೆ ಇದೆ. ಕಾಡಾನೆ ದಾಳಿಯಿರುವ ಶಾಸಕರು, ಬೆಳೆಗಾರರ ಸಂಘಟನೆಗಳ ಮುಖಂಡರು, ಸಂಘ ಸಂಸ್ಥೆಗಳ ಪ್ರಮುಖರು, ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಶಾಶ್ವತ ಕ್ರಮಕ್ಕೆ ಸರ್ಕಾರ ಮುಂದಾಗಬೇಕಿದೆ. ಕೊಡಗಿನಲ್ಲಿ ಈಗಿರುವ ಕ್ಷಿಪ್ರ ಕಾರ್ಯಪಡೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ತಂಡಕ್ಕೆ ವೈಜ್ಞಾನಿಕವಾಗಿ ಬಲ ನೀಡಬೇಕೇ ಹೊರತು ಇರುವ ತಂಡದ ಸಿಬ್ಬಂದಿ ಕಡಿತಗೊಳಿಸಿದರೆ ಕಾಡಾನೆ ಹಾವಳಿ ತಡೆಗಟ್ಟಲು ಹೇಗೆ ಸಾಧ್ಯ?

andolana

Recent Posts

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

3 mins ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

1 hour ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

2 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

7 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

9 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

10 hours ago