ಎಡಿಟೋರಿಯಲ್

ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಸರ್ಕಾರ ಮುಂದಾಗಲಿ

ಅನಿಲ್ ಅಂತರಸಂತೆ

ರಾಜ್ಯದಲ್ಲಿ ಕೃಷಿಯ ನಂತರದ ೨ನೇ ಸ್ಥಾನವನ್ನು ರೈತರ ಬೆನ್ನೆಲುಬಾಗಿರುವ ಹೈನುಗಾರಿಕೆಗೆ ನೀಡಬಹುದಾಗಿದೆ. ಅದರಲ್ಲೂ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಹಾಸನ ಜಿಲ್ಲೆಗಳ ರೈತರು ಹೆಚ್ಚಾಗಿ ಈ ಹೈನುಗಾರಿಕೆ ಉಪಕಸುಬನ್ನೇ ಅವಲಂಬಿಸಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ಹಾಲು ಮಾರಾಟದ ದರವು ಏರಿಕೆಯಾದ್ದರಿಂದ ರೈತರು ತಮ್ಮ ಆದಾಯ ಮತ್ತಷ್ಟು ಹೆಚ್ಚಳವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಸರ್ಕಾರ ತಾನು ನೀಡಿದ ಭರವಸೆಯಂತೆ ರೈತರಿಗೆ ನೀಡಬೇಕಿರುವ ೫ ರೂ. ಪ್ರೋತ್ಸಾಹಧನವನ್ನು ಮಾತ್ರ ಇನ್ನೂ ಬಾಕಿ ಉಳಿಸಿಕೊಂಡಿದ್ದು, ಸರ್ಕಾರದ ಭರವಸೆ ಹಾಗೆಯೇ ಉಳಿದಿದೆ.

ಹೈನುಗಾರಿಕೆಯನ್ನು ಆಶ್ರಯಿಸಿ ಹಾಲು ಉತ್ಪಾದನೆ ಮಾಡುತ್ತಿರುವ ರೈತರಿಂದ ಮೈಮುಲ್ ಪ್ರತಿ ಲೀಟರ್‌ಗೆ ೩೦ ರೂ. ಬೆಲೆ ನೀಡಿ ಖರೀದಿಸುತ್ತಿತ್ತು. ಆದರೆ ಸರ್ಕಾರ ನಂದಿನಿ ಹಾಲಿನ ದರ ಏರಿಸಿದ್ದರಿಂದ ಮೈಮುಲ್ (ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ)ಕೂಡ ೨ ರೂ. ಏರಿಸಿ, ೩೨ ರೂ.ಗಳನ್ನು ರೈತರಿಗೆ ನೀಡಲು ಮುಂದಾಗಿದೆ.

ಆದರೆ ಈ ಹಿಂದೆ ರೈತರಿಗೆ ಮೈಮುಲ್ ನೀಡುತ್ತಿರುವ ಹಣ ಸಾಕಾಗುತ್ತಿಲ್ಲ ಎಂದಾಗ ೫ ರೂ. ಪ್ರೋತ್ಸಾಹ ಧನ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಆ ಹಣವನ್ನು ಕಳೆದ ೩ ತಿಂಗಳುಗಳಿಂದ ಬಾಕಿ ಉಳಿಸಿಕೊಂಡಿರುವುದು, ಸರ್ಕಾರ ಕೇವಲ ಘೋಷಣೆ ಮಾತ್ರ ಮಾಡುತ್ತದೆ ವಿನಾ ಅದನ್ನು ಸಮರ್ಪಕವಾಗಿ ಕಾರ್ಯರೂಪಕ್ಕೆ ತರುವಲ್ಲಿ ವಿಫಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಮೈಸೂರು ಜಿಲ್ಲೆಯಲ್ಲಿ ಪ್ರತಿನಿತ್ಯ ೧೧೫೬ ಸಂಘಗಳಿಂದ ೯೬ ಸಾವಿರ ಹೈನುಗಾರರು ಡೇರಿಗೆ ಸುಮಾರು ೬.೫೦ ಲಕ್ಷ ಲೀ. ಹಾಲು ಹಾಕುತ್ತಿದ್ದು, ಇವರಿಗೆ ಬರಬೇಕಾದ ಮೊತ್ತವೇ ಬರೋಬ್ಬರಿ ತಿಂಗಳಿಗೆ ೩೦ ಕೋಟಿ ರೂ.ಗಳಷ್ಟಿದೆ.

ಇದರೊಂದಿಗೆ ಮಂಡ್ಯದಲ್ಲಿ ೧೨೭೪ ಸಂಘಗಳ ೧,೦೨,೦೦೦ ಸದಸ್ಯರು ಒಟ್ಟು ೯ ಲಕ್ಷ ಲೀ. ಹಾಲು ಡೇರಿಗೆ ಹಾಕುತ್ತಿದ್ದಾರೆ. ಚಾಮರಾಜನಗರದಲ್ಲಿ ೪೬೫ ಸಂಘದ ೩೨ ಸಾವಿರ ಸದಸ್ಯರಿಂದ ೨.೧೦ ಲಕ್ಷ ಲೀ., ಕೊಡಗಿನಿಂದ ೩೮ ಸಂಘದ ೨೭೦೦ ಸದಸ್ಯರಿಂದ ೫೦,೦೦೦ ಲೀ ಹಾಲು ಸಂಗ್ರಹವಾಗುತ್ತಿದೆ.

ಆದರೆ ಸರ್ಕಾರ ಮಾತ್ರ ಇವರಿಗೆ ನೀಡಬೇಕಾದ ೫ ರೂ. ಪ್ರೋತ್ಸಾಹಧನವನ್ನು ಕಳೆದ ೩ ತಿಂಗಳಿನಿಂದ ಬಾಕಿ ಉಳಿಸಿಕೊಂಡಿದ್ದು, ಮಂಡ್ಯ ಜಿಲ್ಲೆಗೇ

೩೫ ಕೋಟಿ ರೂ. ಹಾಗೆಯೇ, ಚಾ.ನಗರ ಮತ್ತು ಕೊಡಗಿನಲ್ಲಿಯೂ ಸಾಕಷ್ಟು ಪ್ರಮಾಣದಲ್ಲಿ ಬಾಕಿ ಉಳಿಸಿಕೊಂಡಿದೆ.

ಸದ್ಯ ಈ ಪರಿಸ್ಥಿತಿ ಹೈನುಗಾರಿಕೆಯನ್ನೇ ನಂಬಿರುವ ಗ್ರಾಮೀಣ ಭಾಗದ ಕುಟುಂಬಗಳಿಗೆ ನುಂಗಲಾರದ ತುಪ್ಪವೆನಿಸಿದೆ.

ಬೇಸಾಯವನ್ನು ನಂಬಿ ಸಾಕಷ್ಟು ನಷ್ಟ ಅನುಭವಿಸುತ್ತಿರುವ ಗ್ರಾಮೀಣ ಭಾಗದ ರೈತರು ತಮ್ಮ ಜೀವನೋಪಾಯಕ್ಕಾಗಿ ಹೈನುಗಾರಿಯನ್ನು ಆರಂಭಿಸಿ ಆರ್ಥಿಕವಾಗಿ ಸಫಲತೆ ಕಾಣುವ ಬಯಕೆಯನ್ನು ಹೊಂದಿದ್ದರು. ಇದಕ್ಕಾಗಿ ಸ್ಥಳೀಯ ಬ್ಯಾಂಕುಗಳಿಂದ ಸಾಕಷ್ಟು ಸಾಲ ಮಾಡಿ ಹಸುಗಳನ್ನು ಖರೀದಿಸಿ ಹೈನುಗಾರಿಕೆಯನ್ನು ಆರಂಭಿಸಿದ್ದಾರೆ.

ಈ ನಡುವೆ ಸರ್ಕಾರ ಕೂಡ ಪ್ರೋತ್ಸಾಹ ಧನವನ್ನು ನೀಡುವ ಬಗ್ಗೆ ಭರವಸೆ ನೀಡಿ ಘೋಷಣೆಯನ್ನೂ ಮಾಡಿ ರೈತರಲ್ಲಿ ಆಸೆಯನ್ನು ಚಿಗುರಿಸಿತ್ತು. ಆದರೆ ಇದೀಗ ೩ ತಿಂಗಳ ಹಣ ಬಾಕಿ ಉಳಿಸಿಕೊಂಡಿದೆ. ಅಲ್ಲದೆ ಈ ಪ್ರೋತ್ಸಾಹ ಧನವು ಸಮಯಕ್ಕೆ ಸರಿಯಾಗಿ ಎಂದೂ ಬಂದಿಲ್ಲ ಎಂಬುದು ರೈತರ ಮತ್ತೊಂದು ಆರೋಪವಾಗಿದೆ. ಸರಿಯಾದ ಸಮಯಕ್ಕೆ

ನೀಡಲು ಸಾಧ್ಯವಿಲ್ಲದ ಮೇಲೆ ಸರ್ಕಾರ ಘೋಷಣೆಯನ್ನಾದರೂ ಏಕೆ ಮಾಡಬೇಕು? ಎಂಬುದು ಪ್ರಶ್ನೆಯಾಗಿದೆ. ಇನ್ನಾದರೂ ಸರ್ಕಾರ ಇಂತಹ ಗಂಭೀರ ವಿಚಾರಗಳ ಕುರಿತು ಆಲೋಚನೆ ಮಾಡಬೇಕಿದೆ. ಘೋಷಣೆ ಮಾಡಿ ಬಳಿಕ ಅನುಷ್ಠಾನ ಮಾಡದೆ ಕೇವಲ ಅರೆಬರೆ ಆಶ್ವಾಸನೆಗಳನ್ನು ನೀಡುತ್ತಾ ಮುಂದುವರಿಯುವ ಬದಲು ಯೋಜನೆಯನ್ನು ಯಶಸ್ವಿಯಾಗಿ ರೈತನ ಕೈ ಸೇರುವಂತೆ ಮಾಡಬೇಕಿದೆ.

andolanait

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

2 mins ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

10 mins ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

12 mins ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

14 mins ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

16 mins ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

19 mins ago