ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗುತ್ತಿದೆ. ಪ್ರತಿಬಾರಿಯೂ ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳ ವೀಕ್ಷಣೆಗೆ ಪಾಸ್ಗಳನ್ನು ವಿತರಿಸಲಾಗುತ್ತದೆ. ಆದರೆ ಈ ಪಾಸ್ಗಳು ಸಾರ್ವಜನಿಕರಿಗೆ ಲಭ್ಯವಾಗುವ ಮೊದಲೇ ಶೇ.70ರಷ್ಟನ್ನು ರಾಜಕಾರಣಿಗಳು ಹಾಗೂ ಅವರ ಬೆಂಬಲಿಗರು ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರು ಪಾಸ್ ಗಳಿಗಾಗಿ ಪರದಾಡುವಂತಾಗಿದೆ.
ಕಳೆದ ಕೆಲ ವರ್ಷಗಳಿಂದ ಈ ರಾಜಕಾರಣಿಗಳ ಹಾವಳಿ ವಿಪರೀತವಾಗಿದೆ. ಅರಮನೆ ಅಂಗಳದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಜಂಬೂ ಸವಾರಿಯ ವೀಕ್ಷಣೆಗೆ ಪಾಸ್ಗಳನ್ನು ಖರೀದಿಸಲು ಸಾರ್ವಜನಿಕರು ಹರಸಾಹಸ ಪಡಬೇಕಾಗಿದೆ. ಚುನಾಯಿತ ಪ್ರತಿನಿಧಿಗಳು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಒಬ್ಬೊಬ್ಬರೂ 500ರಿಂದ 1000 ಪಾಸ್ಗಳನ್ನು ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರು ಪಾಸ್ ಕೇಳಿದರೆ ಅಧಿಕಾರಿಗಳಿಂದ ಇಲ್ಲ ಎಂಬ ಉತ್ತರ ಬರುತ್ತಿದೆ. ಇನ್ನು ದಸರಾ ಕಾರ್ಯಕ್ರಮಗಳಿಗೆ ಚುನಾಯಿತ ಪ್ರತಿನಿಧಿಗಳ ಜತೆ ಅವರ ಬೆಂಬಲಿಗರೂ ಗುಂಪು ಗುಂಪಾಗಿ ಆಗಮಿಸುತ್ತಿದ್ದು, ವೇದಿಕೆಯನ್ನು ಆಕ್ರಮಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರು ನೆಮದಿಯಿಂದ ಕುಳಿತು ಕಾರ್ಯಕ್ರಮಗಳನ್ನು ವೀಕ್ಷಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರ್ಕಾರ ಈ ಬಾರಿಯಾದರೂ ದಸರಾದಲ್ಲಿ ಇಂತಹ ಸಮಸ್ಯೆಗಳು ಉದ್ಭವಿಸದಂತೆ ಎಚ್ಚರ ವಹಿಸಬೇಕಿದೆ.
-ಜಾಕೀರ್ ಖಾನ್, ಮೈಸೂರು.