ರಾಜ್ಯ ಕಂಡ ಅಪರೂಪದ ರಾಜಕಾರಣಿ, ಹಿರಿಯ ರಾಜಕೀಯ ಮುತ್ಸದ್ದಿ, ಮಾಹಿತಿ ತಂತ್ರಜ್ಞಾನದ ಹರಿಕಾರ ಎನಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣರವರ ನಿಧನ ಒಂದು ಸಮುದಾಯಕ್ಕೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದ.
ಎಸ್. ಎಂ. ಕೃಷ್ಣರವರು ಅಮೆರಿಕದಲ್ಲಿ ಕಾನೂನು ವಿಷಯ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿಯೇ ಅಂದಿನ ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಸ್ಪಽಸಿದ್ದ ಜಾನ್ ಎಫ್. ಕೆನಡಿ ಪರವಾಗಿ ಪ್ರಚಾರ ಕೈಗೊಂಡು ಅವರ ಗೆಲುವಿಗೆ ಕಾರಣರಾಗಿದ್ದರು. ನಂತರ ಭಾರತಕ್ಕೆ ಮರಳಿದ ಅವರು ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಅನೇಕ ಮಹತ್ವದ ಖಾತೆಗಳನ್ನು ಅಲಂಕರಿಸಿ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸಿದರು.
ಸುಮಾರು ೬೦ ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಲೋಕಸಭಾ ಸದಸ್ಯರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನಸಭಾ ಸದಸ್ಯರಾಗಿ, ವಿಧಾನ ಪರಿಷತ್, ವಿಧಾನಸಭಾ ಸ್ಪೀಕರ್ ಆಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ಕೈಗಾರಿಕಾ , ವಿದೇಶಾಂಗ ಸಚಿವರಾಗಿ, ಕರ್ನಾಟಕದ ಮುಖ್ಯ ಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಂಗಳೂರಿಗೆ ಐಟಿ ಬಿಟಿ ಕಂಪೆನಿಗಳನ್ನು ಪರಿಚಯಿಸಿದ ಹಿರಿಮೆ ಇವರಿಗೆ ಸಲ್ಲುತ್ತದೆ. ಇಂದು ಬೆಂಗಳೂರು ಮಹಾನಗರವಾಗಿ ಬೆಳವಣಿಗೆಯಾಗಿದೆ ಎಂದರೆ ಇವರ ಕೊಡುಗೆ ಅಪಾರ. ಇಂತಹ ಅಪರೂಪದ ರಾಜಕಾರಣಿಯ ಹೆಸರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ಇಡುವ ಮೂಲಕ ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.





